
ಮಡಿಕೇರಿ NEWS DESK ಅ.22 : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ದೀಪಾವಳಿ ಅಮಾವಾಸ್ಯೆ ಪ್ರಯುಕ್ತ ‘ದೀಪೋತ್ಸವ’ ಶ್ರದ್ಧಾಭಕ್ತಿಯಿಂದ ನಡೆಯಿತು. ಭಕ್ತರು ಸಹಸ್ರ ಸಹಸ್ರ ಹಣತೆಗಳನ್ನು ಹಚ್ಚಿ ದೇವಾಲಯನ್ನು ಬೆಳಗಿದರು. ದೇವಾಲಯದ ಧರ್ಮದರ್ಶಿ ಹೆಚ್.ಎಸ್.ಗೋವಿಂದ ಸ್ವಾಮಿ ಅವರ ನೇತೃತ್ವದಲ್ಲಿ ಮಂಗಳವಾರ ರಾತ್ರಿ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ದೀಪೋತ್ಸವ ಜರುಗಿತು. ಕಳಸ ಪೂಜೆ, ಅನ್ನದಾನ ಮತ್ತು ಪ್ರಸಾದ ವಿನಿಯೋಗವಾದ ನಂತರ ತಾಯಿಯ ದರ್ಶನ ಹಾಗೂ ದೀಪೋತ್ಸವ ನೆರವೇರಿತು. 108 ಎಳ್ಳು ಬತ್ತಿಯನ್ನು ದೇವಾಲಯದ ಆವರಣದಲ್ಲಿ ಹಚ್ಚಿದರೆ ದೋಷ ಪರಿಹಾರವಾಗಲಿದೆ ಎನ್ನುವ ನಂಬಿಕೆಯ ಹಿನ್ನೆಲೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೀಪೋತ್ಸವವನ್ನು ಯಶಸ್ವಿಗೊಳಿಸಿದರು.











