ಮಡಿಕೇರಿ ನ.6 NEWS DESK : ಮುಂದಿನ ಸಚಿವ ಸಂಪುಟ ವಿಸ್ತರಣೆಯ ಸಂದರ್ಭ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಕೊಡಗು ಗೌಡ ಹಿತರಕ್ಷಣಾ ಸಮಿತಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಗೌರವ ಸಂಚಾಲಕ ಪಿ.ಎಲ್.ಸುರೇಶ್ ಅವರು ಬಹಳ ವರ್ಷಗಳ ಹಿಂದೆ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದಾಗ ಕೊಡಗು ಜಿಲ್ಲೆಯ ಮೂವರಿಗೆ ಸಚಿವ ದೊರೆತ್ತಿತ್ತು. ನಂತರ ಯಡಿಯೂರಪ್ಪ ಅವರ ನೇತೃತ್ವದ ಸರಕಾರದಲ್ಲಿ ಅಪ್ಪಚ್ಚು ರಂಜನ್ ಅವರಿಗೆ ಸಚಿವ ಸ್ಥಾನ ನೀಡಲಾಯಿತು. ಆದರೆ ಆನಂತರ ಬಂದ ಯಾವುದೇ ಸರಕಾರದಲ್ಲಿ ಕೊಡಗಿಗೆ ಸಚಿವ ಸ್ಥಾನ ದೊರೆಯಲಿಲ್ಲ. ಇದರಿಂದ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಆದ್ದರಿಂದ ಈ ಬಾರಿ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಈಗಾಗಲೇ ಕೊಡಗು ಗೌಡ ಹಿತರಕ್ಷಣಾ ಸಮಿತಿಯ ನಿಯೋಗ ಸಚಿವ ಮನವಿ ಸಲ್ಲಿಸಿ ಸಚಿವ ಸ್ಥಾನ ನೀಡುವಂತೆ ಕೋರಿದೆ. ಇದಕ್ಕೆ ಸೂಕ್ತ ಸ್ಪಂದನೆ ದೊರೆತ್ತಿದ್ದು, ಪೊನ್ನಣ್ಣ ಅವರು ಸಚಿವರಾಗಲಿದ್ದಾರೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಯ ಇಬ್ಬರು ಶಾಸಕರಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡಿದರೆ ಸಂತೋಷ ಎಂದು ಸ್ಪಷ್ಟಪಡಿಸಿದರು. ಪ್ರಧಾನ ಸಂಚಾಲಕ ಪರಮಲೆ ಗಣೇಶ್ ಅವರು ಮಾತನಾಡಿ, ಶಾಸಕ ಪೊನ್ನಣ್ಣ ಅವರು ಕೊಡಗು ಜಿಲ್ಲೆಯ ಎಲ್ಲಾ ಸಮಸ್ಯೆಗಳನ್ನು ಹತ್ತಿರದಿಂದ ಬಲ್ಲವರಾಗಿದ್ದು, ಕ್ಷೇತ್ರದಲ್ಲಿ ಅತ್ಯುತ್ತಮ ಜನಪರ ಕಾರ್ಯ ಮಾಡುತ್ತಿದ್ದಾರೆ. ಒಂದೇ ಜಾತಿಗೆ ಮಾನ್ಯತೆ ನೀಡದೆ ಎಲ್ಲಾ ಜಾತಿ, ವರ್ಗದವರನ್ನು ಸಮಾನವಾಗಿ ಕಾಣುತ್ತಿದ್ದಾರೆ. ಇವರು ಜಿಲ್ಲಾ ಉಸ್ತುವಾರಿ ಸಚಿವರಾದರೆ ಕಂದಾಯ, ಅರಣ್ಯ, ವನ್ಯಜೀವಿ, ರಸ್ತೆ, ವಸತಿ ಮತ್ತಿತರ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಹ ಸಂಚಾಲಕ ಪಟ್ಟಡ ದೀಪಕ್, ಪೂಜಾರಿರ ಪ್ರದೀಪ್ ಕುಮಾರ್, ಕಾಳೇರಮ್ಮನ ಕುಮಾರ್ ಹಾಗೂ ಬಾಳಾಡಿ ಪ್ರತಾಪ್ ಕುಮಾರ್ ಉಪಸ್ಥಿತರಿದ್ದರು.











