ಮಡಿಕೇರಿ ನ.7 NEWS DESK : ಪೊನ್ನಂಪೇಟೆಯಲ್ಲಿ 8.60 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುವ ‘ಪ್ರಜಾ ಸೌಧ’ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಈ ಹಿಂದೆ ಸರ್ಕಾರ 63 ಹೊಸ ತಾಲ್ಲೂಕುಗಳನ್ನು ಪ್ರಕಟಿಸಿತ್ತು, ಅದರಲ್ಲಿ ಪೊನ್ನಂಪೇಟೆ ಮತ್ತು ಕುಶಾಲನಗರ ತಾಲ್ಲೂಕುಗಳಾಗಿ ಸೇರ್ಪಡೆಗೊಂಡಿದ್ದವು, ಆ ಸಂದರ್ಭದಲ್ಲಿ 14 ಹೊಸ ತಾಲ್ಲೂಕುಗಳಲ್ಲಿ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ 2 ವರ್ಷದಲ್ಲಿ, 49 ಹೊಸ ತಾಲ್ಲೂಕುಗಳಲ್ಲಿ ಪ್ರಜಾಸೌಧ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಮಂಜೂರಾತಿ ನೀಡಿ ಆದೇಶಿಸಿದೆ ಎಂದು ತಿಳಿಸಿದರು. ಹೊಸ ತಾಲ್ಲೂಕುಗಳಲ್ಲಿ ಪ್ರತೀ ಪ್ರಜಾಸೌಧ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಸರ್ಕಾರ ತಲಾ 8.60 ಕೋಟಿ ರೂ.ವನ್ನು ಬಿಡುಗಡೆ ಮಾಡಿದ್ದು, ಎಲ್ಲೆಡೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಸರ್ಕಾರ ಗ್ಯಾರಂಟಿ ಯೋಜನೆಗಳ ಜೊತೆಗೆ ಮೂಲ ಸೌಲಭ್ಯ ಕಲ್ಪಿಸಲು ಒತ್ತು ನೀಡಿದೆ. ಅಭಿವೃದ್ಧಿ ಕಾರ್ಯಕ್ಕೆ ಹೆಚ್ಚಿನ ಗಮನಹರಿಸಲಾಗಿದೆ ಎಂದು ಕೃಷ್ಣ ಬೈರೇಗೌಡ ಅವರು ಹೇಳಿದರು. ಪೊನ್ನಂಪೇಟೆ ನೂತನ ತಾಲ್ಲೂಕು ರಚನೆಯಾಗಿ ಆರು ವರ್ಷ ಕಳೆದಿದೆ. ಬಹಳ ಹಿಂದೆಯೇ ತಾಲ್ಲೂಕು ಆಡಳಿತ ಕಚೇರಿ ನಿರ್ಮಾಣ ಆಗಬೇಕಿತ್ತು, ಆದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತ ಭವನ ನಿರ್ಮಾಣಕ್ಕೆ ಅನುಮೋದನೆ ನೀಡಿದೆ ಎಂದು ಹೇಳಿದರು. ಸರ್ಕಾರದ ಆಡಳಿತ ವ್ಯವಸ್ಥೆಯಲ್ಲಿ ತಾಲ್ಲೂಕು ದಂಡಾಧಿಕಾರಿಯವರು ಕರ್ತವ್ಯ ನಿರ್ವಹಿಸುವ ಕಚೇರಿ ಸಾರ್ವಜನಿಕರ ಕಚೇರಿಯಾಗಿದ್ದು, ಅಂತಹ ಸರ್ಕಾರಿ ಕಚೇರಿಗೆ ಸಾರ್ವಜನಿಕರು ಹೋಗಬೇಕು ಎಂಬ ಭಾವನೆ ಜನರಲ್ಲಿ ಇರಬೇಕು. ಆ ನಿಟ್ಟಿನಲ್ಲಿ ಸರ್ಕಾರ ಸುಸಜ್ಜಿತ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಮುಂದಾಗಿದೆ ಎಂದರು. ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ನಿರಂತರ ಒತ್ತಡ ಮತ್ತು ಪ್ರಯತ್ನದಿಂದ ಅಭಿವೃದ್ಧಿ ಕೆಲಸಗಳು ಆಗುತ್ತಿವೆ ಎಂದು ಇದೇ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಅವರ ಜೊತೆ ಚರ್ಚಿಸಿ ಎಲ್ಲಾ ಹೊಸ ತಾಲ್ಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಲಾಗಿತ್ತು. ಅದರಂತೆ ಮುಖ್ಯಮಂತ್ರಿ ಅವರು ಅನುಮೋದನೆ ನೀಡಿದ್ದಾರೆ. ಕಳೆದ ಎರಡು ವರ್ಷದಲ್ಲಿ 49 ಹೊಸ ತಾಲ್ಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದೆ. ಜನರ ಮನಸ್ಸಿನ ಆಸೆ ಈಡೇರಿದಂತಾಗಿದೆ ಎಂದರು. ಇದೊಂದು ಸರ್ಕಾರದ ಜವಾಬ್ದಾರಿಯಾಗಿದ್ದು, ಜನರ ಆಶಯ ಈಡೇರಿಸುವುದರ ಜೊತೆಗೆ ಸರ್ಕಾರದ ಬದ್ಧತೆ ಮತ್ತು ಸಂಕಲ್ಪವು ಇರಬೇಕು ಎಂದು ಕೃಷ್ಣಬೈರೇಗೌಡ ಅವರು ಪ್ರತಿಪಾದಿಸಿದರು. ಗ್ಯಾರಂಟಿ ಯೋಜನೆಗಳಿಗೆ ಮಾತ್ರ ಹಣವನ್ನು ಬಳಸುತ್ತಿದ್ದಾರೆ. ಆದರೆ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಹೇಳುವವರು ಇದ್ದಾರೆ. ಆದರೆ ಸರ್ಕಾರ ಅಭಿವೃದ್ದಿ ಕೆಲಸಗಳಿಗೂ ಒತ್ತು ನೀಡಿದೆ ಎಂದು ಎಂಬುದನ್ನು ಮರೆಯುವಂತಿಲ್ಲ ಎಂದು ಹೇಳಿದರು. ಈ ಹಿಂದೆ ತಾಲ್ಲೂಕು ಆಡಳಿತ ಸೌಧಕ್ಕೆ ಮಿನಿ ವಿಧಾನಸೌಧ ಎಂದು ಹೇಳಲಾಗುತ್ತಿತ್ತು. ಆದರೆ ಕನ್ನಡದಲ್ಲಿ ಪದವೇ ಇಲ್ಲವೇ ಎಂದು ಯೋಚಿಸಿದಾಗ ‘ಪ್ರಜಾಸೌಧ’ ಎಂಬ ಹೆಸರು ಇಡಲಾಯಿತು. ವಿಧಾನಸೌಧದಲ್ಲಿ ಕಾನೂನುನ್ನು ಜಾರಿ ಮಾಡಲಾಗುತ್ತದೆ. ಪ್ರಜಾಸೌಧದಲ್ಲಿ ಪ್ರಜೆಗಳ ಕೆಲಸಗಳನ್ನು ನಿರ್ವಹಿಸಲಾಗುತ್ತದೆ. ಆ ನಿಟ್ಟಿನಲ್ಲಿ ತಾಲ್ಲೂಕು ಪ್ರಜಾಸೌಧ ಹಾಗೂ ಜಿಲ್ಲಾ ಪ್ರಜಾಸೌಧ ಎಂದು ಆಡಳಿತ ಭವನಕ್ಕೆ ಹೆಸರು ಇಡಲಾಗುತ್ತದೆ. ಸರ್ಕಾರ ಇರುವುದು ಪ್ರಜೆಗಳಿಗಾಗಿ ಎಂಬುದಾಗಿದೆ ಎಂದು ಕೃಷ್ಣಬೈರೇಗೌಡ ಅವರು ವಿವರಿಸಿದರು. ಪ್ರಜಾಸೌಧ ಕಟ್ಟಡವನ್ನು 17 ಸಾವಿರ ಚದರ ಅಡಿಗಳಷ್ಟು ನಿರ್ಮಾಣ ಮಾಡಲಾಗುತ್ತದೆ. ಈಗ ನೆಲ ಮಹಡಿ ಹಾಗೂ ಮೊದಲ ಅರ್ಧ ಮಹಡಿಯು ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಮುಂದಿನ ದಿನಗಳಲ್ಲಿ ನಾಲ್ಕು ಅಂತಸ್ತಿನವರೆಗೂ ಕಟ್ಟಡ ನಿರ್ಮಾಣ ಮಾಡಬಹುದಾಗಿದೆ ಎಂದು ಸಚಿವರು ಹೇಳಿದರು. ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಪಟ್ಟೆದಾರರ ಭೂಮಿಗೆ ಪರಿಹಾರ ಹುಡುಕಲು ಪ್ರಮಾಣಿಕ ಪ್ರಯತ್ನ ಮಾಡಲಾಗಿದೆ. ಹಾಗೆಯೇ ಸಿ ಮತ್ತು ಡಿ ಭೂಮಿ ಸಂಬಂಧಿಸಿದಂತೆ ಸುಪ್ರಿಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗುವುದು. ಆ ನಿಟ್ಟಿನಲ್ಲಿ ರೈತರು ಸಹ ಕೈಜೋಡಿಸಬೇಕು ಎಂದು ಸಚಿವರು ಮನವಿ ಮಾಡಿದರು. ಸಿ ಮತ್ತು ಡಿ ಭೂಮಿ ಪರಿಹಾರ ಸಂಬಂಧ ತಜ್ಞರ ಸಮಿತಿ ರಚಿಸಿ ಅವರ ವರದಿ ತರಿಸಿಕೊಂಡು ಮುಂದಿನ ಕ್ರಮವಹಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಚಿವರು ಹೇಳಿದರು. ಕೊಡಗು ಜಿಲ್ಲೆಯಲ್ಲಿ 2018, 2019, 2020 ರಲ್ಲಿ ಹೆಚ್ಚಿನ ಮಳೆಯಿಂದಾಗಿ ಭೂಕುಸಿತ ಉಂಟಾಗಿತ್ತು. ಭೂಕುಸಿತ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಭೂಕುಸಿತವಾಗುವುದನ್ನು ತಡೆಯಲು ಮುಂದಾಗಲಾಗಿದೆ. 60 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಇರುವ ಕಡೆಗಳಲ್ಲಿ ತಡೆಗೋಡೆ, ಸೇತುವೆ ಮತ್ತಿತರ ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕದ್ವಯರು ವಿಧಾನಸೌಧದಲ್ಲಿ ಹೆಚ್ಚಿನ ಗಮನ ಸೆಳೆಯುತ್ತಿದ್ದಾರೆ ಎಂದು ಸಚಿವರು ಶ್ಲಾಘಿಸಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಕಂದಾಯ ಸಚಿವರು ಸಹ ನುಡಿದಂತೆ ನಡೆದುಕೊಂಡು ಪ್ರಜಾಸೌಧ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಚಾಲನೆ ನೀಡಿದ್ದಾರೆ ಎಂದು ತಿಳಿಸಿದರು. ಸರ್ಕಾರ ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ. ಪ್ರಜಾಸೌಧ ಆಡಳಿತ ಭವನವನ್ನು ದೂರದೃಷ್ಟಿಯಿಂದ ನಿರ್ಮಾಣ ಮಾಡಲಾಗುತ್ತದೆ. ಪೊನ್ನಂಪೇಟೆಯ ಸಾರ್ವಜನಿಕರ ಸ್ಪಂದನೆಯಂತೆ ಸೂಕ್ತ ಸ್ಥಳದಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದು ಎ.ಎಸ್.ಪೊನ್ನಣ್ಣ ಅವರು ನುಡಿದರು. ಸರ್ಕಾರ ಗ್ಯಾರಂಟಿ ಯೋಜನೆ ಜೊತೆಗೆ ಮೂಲ ಸೌಲಭ್ಯಕ್ಕೆ ಹೆಚ್ಚಿನ ಒತ್ತು ನೀಡಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿವೆ ಎಂದು ಪೊನ್ನಣ್ಣ ಅವರು ಹೇಳಿದರು. ‘ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯನ್ನಾಗಿ ಹಾಗೂ ಗೋಣಿಕೊಪ್ಪ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುತ್ತದೆ. ಹಾಗೆಯೇ ಹುದಿಕೇರಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ನಿರ್ಮಿಸಲಾಗುತ್ತದೆ. ಜೊತೆಗೆ 130 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಹೊಸ ಯೋಜನೆಗಳ ಕಾಮಗಾರಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ವಿದ್ಯುತ್ತ ಪರಿವರ್ತಕಗಳು ಹಾಗೂ ಕಂಬಗಳ ಬದಲಾವಣೆ, ಹಲವು ವಿದ್ಯುತ್ ಉಪ ವಿಭಾಗಗಳನ್ನು ಆರಂಭಿಸಲಾಗಿದೆ ಎಂದರು. ಪವಿತ್ರ ಕ್ಷೇತ್ರ ಭಾಗಮಂಡಲದಲ್ಲಿ ಮೇಲ್ಸೂತುವೆ ನಿರ್ಮಾಣ ಹಾಗೂ ತ್ರಿವೇಣಿ ಸಂಗಮದಲ್ಲಿ ಉದ್ಯಾನವನ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಹೀಗೆ ಎರಡೂವರೆ ವರ್ಷದಲ್ಲಿ ಅಭಿವೃದ್ಧಿ ಕೆಲಸದಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗಿದೆ ಎಂದು ಪೊನ್ನಣ್ಣ ಅವರು ನುಡಿದರು.’ಈ ಬಾರಿ ಮೇ ಕೊನೇ ವಾರದಿಂದ ನವೆಂಬರ್ ಮೊದಲ ವಾರದವರೆಗೂ ಮಳೆ ಸುರಿದ ಪರಿಣಾಮ ರಸ್ತೆಗಳು ಗುಂಡಿಯಾಗಿವೆ. ಈಗ ರಸ್ತೆ ಸರಿಪಡಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗುವುದು . ಈ ಕಾರ್ಯಕ್ಕೆ ಕಾಲಾವಕಾಶ ಬೇಕಿದೆ ಎಂದು ಎ.ಎಸ್.ಪೊನ್ನಣ್ಣ ಅವರು ನುಡಿದರು. ರಸ್ತೆ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಕೆಲಸ ಯಾರೂ ಸಹ ಮಾಡಬಾರದು ಎಂದರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ನಿವೇಶನ ರಹಿತ 2 ಸಾವಿರ ಕುಟುಂಬದವರಿಗೆ ಹಕ್ಕುಪತ್ರ ನೀಡಲು ಮುಂದಾಗಲಾಗಿದೆ. ಆ ನಿಟ್ಟಿನಲ್ಲಿ ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗುವುದು ಎಂದು ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು. ಆಯವ್ಯಯದಲ್ಲಿ ರಸ್ತೆ ಸರಿಪಡಿಸಲು ಸರ್ಕಾರ ಹಣ ನೀಡಿದ್ದು, ರಸ್ತೆ ಸರಿಪಡಿಸಲಾಗುವುದು ಎಂದರು. ಹಾಗೆಯೇ ನಿವೇಶನ ಇರುವವರಿಗೆ ಮನೆ ನಿರ್ಮಾಣಕ್ಕೂ ಒತ್ತು ನೀಡಲಾಗಿದೆ ಎಂದು ಶಾಸಕರು ಹೇಳಿದರು. ಪ್ರಜಾಸೌಧ ಪ್ರಜೆಗಳ ಸೇವೆಯ ಕೇಂದ್ರವಾಗಿದೆ. ದಿನನಿತ್ಯ ಸರ್ಕಾರಿ ಕೆಲಸ ಕಾರ್ಯಗಳ ಪರಿಹಾರ ಕೇಂದ್ರವಾಗಬೇಕು ಎಂದರು. ಸರ್ಕಾರದ ದಕ್ಷತೆ ಹೆಚ್ಚಿಸುವಲ್ಲಿ ಪ್ರಜಾಸೌಧದಲ್ಲಿ ಕೆಲಸ ಆಗಬೇಕು. ಜನರ ಸರ್ಕಾರಿ ಸೇವೆಯನ್ನು ಪ್ರಾಮಾಣಿಕವಾಗಿ ಬದ್ಧತೆಯಿಂದ ನಿರ್ವಹಿಸಬೇಕು ಎಂದು ಪೊನ್ನಣ್ಣ ಅವರು ಒತ್ತಿ ಹೇಳಿದರು. ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಅಣ್ಣೀರ ಹರೀಶ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ತಾಲ್ಲೂಕು ಘಟಕದ ಅಧ್ಯಕ್ಷರಾದ ಕಾಳಿಮಾಡ ಪ್ರಶಾಂತ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಪ್ರಮುಖರಾದ ಎಚ್.ಡಿ.ಗಣೇಶ್, ಕೃಷ್ಣಪ್ಪ, ಅಬ್ದುಲ್ಲಾ ಇತರರು ಇದ್ದರು.











