ಮಡಿಕೇರಿ ನ.15 NEWS DESK : ಭಯೋತ್ಪಾದಕರಿಂದ ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣವನ್ನು ಖಂಡಿಸಿ ಹಿಂದು ಜಾಗರಣಾ ವೇದಿಕೆ ನಗರದಲ್ಲಿ ನಡೆಸಿತು. ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಹಿಂದು ಜಾಗರಣಾ ವೇದಿಕೆಯ ದಕ್ಷಿಣ ಪ್ರಾಂತ ಸದಸ್ಯ ಕುಕ್ಕೇರ ಅಜಿತ್ ಮಾತನಾಡಿ, ಭಯೋತ್ಪಾದನೆಯನ್ನು ಸಂಪೂರ್ಣವಾಗಿ ಹತ್ತಿಕ್ಕುವ ಕಾರ್ಯ ನಡೆಯಬೇಕಾಗಿದೆ. ಇಂತಹ ಭಯೋತ್ಪಾದಕ ಕೃತ್ಯಗಳನ್ನು ಮಟ್ಟ ಹಾಕುವವರೆಗೆ ಹಿಂದೂ ಸಮಾಜಕ್ಕೆ ಆತಂಕ ತಪ್ಪಿದ್ದಲ್ಲವೆಂದರು. ಈ ಹಿಂದೆ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ರಕ್ಷಣಾ ಪಡೆಗಳ ಮೇಲೆ ಕಲ್ಲುತೂರಾಟ ನಡೆಸಿದ ಸಂದರ್ಭ, ರಾಜಕೀಯ ಕಾರಣಗಳ ಹಿನ್ನೆಲೆಯಲ್ಲಿ ಅವರನ್ನು ಬಡವರು, ಉದ್ಯೋಗ ರಹಿತರು ಎಂದು ನಮ್ಮ ಸೋಗಲಾಡಿತನದ ರಾಜಕಾರಣಿಗಳು ಸಮರ್ಥಿಸಿಕೊಂಡಿದ್ದರು. ಇದೀಗ ದೆಹಲಿಯಲ್ಲಿ ನಡೆದಿರುವ ಭಯೋತ್ಪಾದಕ ಬಾಂಬ್ ಸ್ಫೋಟದ ಸಂಚು ರೂಪಿಸಿದವರೆಲ್ಲರು ಶಿಕ್ಷಣವಂತರು ಮಾತ್ರವಲ್ಲ ವೈದ್ಯರಾಗಿದ್ದಾರೆ. ಅಂದು ಭಯೋತ್ಪಾದಕರನ್ನು ಸಮರ್ಥಿಸಿಕೊಂಡವರು ಇಂದಿನ ಈ ದಾಳಿಯ ಬಗ್ಗೆ ಏನನ್ನು ಹೇಳುತ್ತಾರೆ ಎಂದು ಪ್ರಶ್ನಿಸಿದರು. ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ್, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಹಿಂದು ಜಾಗರಣಾ ವೇದಿಕೆಯ ಜಿಲ್ಲಾ ಸಹ ಸಂಚಾಲಕರಾದ ಚೇತನ್ ಶಾಂತಿನಿಕೇತನ, ಸುನಿಲ್, ಮಡಿಕೇರಿ ನಗರಸಭಾ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ನಗರಸಭಾ ಸದಸ್ಯರಾದ ಅರುಣ್ ಶೆಟ್ಟಿ, ಸಬಿತಾ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ತಳೂರು ಕಿಶೋರ್ ಕುಮಾರ್, ಜಿಲ್ಲಾ ವಕ್ತಾರ ಬಿ.ಕೆ.ಅರುಣ್ ಕುಮಾರ್, ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್, ಮನು ಮಂಜುನಾಥ್, ಉಮಾ ಪ್ರಭು, ಕನ್ನಿಕೆ ಮೊದಲಾದವರು ಪಾಲ್ಗೊಂಡಿದ್ದರು.











