ಮಡಿಕೇರಿ ನ.20 NEWS DESK : ಇದೇ ನ.26 ರಂದು ಸಂವಿಧಾನ ದಿನಾಚರಣೆಯನ್ನು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಆಚರಿಸಲಾಗುತ್ತಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸೂಚಿಸಿದ್ದಾರೆ. ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸರ್ಕಾರ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಸೂಚಿಸಿದೆ. ಆ ದಿಸೆಯಲ್ಲಿ ಜಾಥ ಹಾಗೂ ಸಭಾ ಕಾರ್ಯಕ್ರಮ ಏರ್ಪಡಿಸಿ ಸಂವಿಧಾನದ ಮಹತ್ವ ಕುರಿತು ಉಪನ್ಯಾಸ ನೀಡುವಂತಾಗಬೇಕು ಎಂದು ಸಲಹೆ ಮಾಡಿದರು. ಕಾರ್ಯಕ್ರಮ ಆಯೋಜನೆ ಸಂಬಂಧ ವಿವಿಧ ಇಲಾಖೆ ಅಧಿಕಾರಿಗಳ ಜೊತೆ ಸರ್ಕಾರೇತರ ಸಂಸ್ಥೆಗಳು ಹಾಗೂ ವಿವಿಧ ಸಮಾಜದ ಮುಖಂಡರನ್ನು ಆಹ್ವಾನಿಸಿ ಸಂವಿಧಾನ ದಿನಾಚರಣೆ ಆಚರಿಸುವಂತೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ನ.26 ರಂದು ಸಂವಿಧಾನ ದಿನಾಚರಣೆ ಪ್ರಯುಕ್ತ ಜಾಥ ಏರ್ಪಡಿಸಬೇಕಿದೆ. ತೆರೆದ ವಾಹನದಲ್ಲಿ ಅಂಬೇಡ್ಕರ್ ವೇಷಧಾರಿ ವಿದ್ಯಾರ್ಥಿ ಒಳಗೊಂಡಂತೆ ಸಂವಿಧಾನ ಪುಸ್ತಕ ಪ್ರದರ್ಶಿಸಿ ತೆರಳಬೇಕಿದೆ. ಅಂಬೇಡ್ಕರ್ ಅವರ ಚಿಂತನೆಗಳು, ಸಂವಿಧಾನದ ಆಶಯಗಳು, ಮೂಲಭೂತ ಕರ್ತವ್ಯಗಳು ಹಾಗೂ ರಾಜ್ಯ ನಿರ್ದೇಶಕ ತತ್ವಗಳು ಮತ್ತಿತರ ಮಾಹಿತಿ ಒಳಗೊಂಡ ಭಿತ್ತಿ ಪತ್ರಗಳ ಪ್ರದರ್ಶನ ಕಾರ್ಯಕ್ರಮ ಆಯೋಜಿಸಬೇಕಿದೆ ಎಂದರು. ಸ್ಥಳೀಯರ ಸಹಕಾರ ಪಡೆದು ಕಾರ್ಯಕ್ರಮ ಆಯೋಜನೆಗೆ ತಾಲ್ಲೂಕು ಮಟ್ಟದಲ್ಲಿ ಕ್ರಮವಹಿಸುವಂತೆ ತಹಶೀಲ್ದಾರರು ಹಾಗೂ ತಾ.ಪಂ.ಇಒ ಅವರಿಗೆ ಕೋರಿದರು. ನವೆಂಬರ್, 21 ರಂದು ಸಮಾಜ ಕಲ್ಯಾಣ ಸಚಿವರ ಅಧ್ಯಕ್ಷತೆಯಲ್ಲಿ ವಿಡಿಯೋ ಸಂವಾದ ನಡೆಯಲಿದ್ದು, ಪೂರ್ವತಯಾರಿ ಮಾಡಿಕೊಳ್ಳಲು ಕೂಡಲೇ ಮಾಹಿತಿ ಒದಗಿಸುವಂತೆ ಶೇಖರ್ ಅವರು ಕೋರಿದರು. ಶಾಲಾ ಕಾಲೇಜು, ಎನ್ಸಿಸಿ, ಎನ್ಎಸ್ಎಸ್ ವಿದ್ಯಾರ್ಥಿಗಳು ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತಾಗಬೇಕು. ಆ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮವಹಿಸುವಂತೆ ಮನವಿ ಮಾಡಿದರು. ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರು, ತಾ.ಪಂ.ಇಒ, ಸ್ಥಳೀಯ ಸಂಸ್ಥೆ ಮುಖ್ಯಾಧಿಕಾರಿಗಳು, ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಅಗತ್ಯ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಶೇಖರ್ ಅವರು ಮನವಿ ಮಾಡಿದರು. ತಹಶೀಲ್ದಾರರಾದ ಪ್ರವೀಣ್, ಕಿರಣ್ ಗೌರಯ್ಯ, ಶ್ರೀಧರ, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ತಾ.ಪಂ.ಇಒ ಅಪ್ಪಣ್ಣ, ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿಗಳು, ಶಾಲಾ ಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಇತರರು ಇದ್ದರು.










