ಮಡಿಕೇರಿ ನ.20 NEWS DESK : ಮಡಿಕೇರಿ 8ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ಅಂಗವಾಗಿ ಕೊಡಗು ಜಿಲ್ಲೆಯಲ್ಲಿ ನಡೆದ ಪ್ರಕೃತಿ ಚಿಕಿತ್ಸಾ ಜಾಗೃತಿ ಶಿಬಿರದ ಸಮಾರೋಪ ಸಮಾರಂಭವು ನಗರದ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಸಂಪನ್ನಗೊಂಡಿತು. ಸಮಾರೋಪ ಸಮಾರಂಭದ ಉದ್ಘಾಟಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ನ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಮಾತನಾಡಿ, ಪೋಷಕರು ಮಕ್ಕಳಿಗೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಪ್ರೇರೇಪಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜಾ, ದೋಷರಹಿತ ಮಾನವನ ಸರ್ವತೋಮುಖ ಸ್ವಾಸ್ಥ ಕಾಪಾಡುವ ಆಯುಷ್ ಪ್ರಕೃತಿ ಚಿಕಿತ್ಸಾ ವಿಧಾನವನ್ನು ಬಳಸುವಂತೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್ ಇಲಾಖೆ ಆಡಳಿತ ಅಧಿಕಾರಿ ಕಾವೇರಪ್ಪ, ಮಡಿಕೇರಿ ಯೋಗ ಒಕ್ಕೂಟದ ಮಹೇಶ್ ಕೆ.ಕೆ. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಜಿಲ್ಲಾ ಬೋಧಕ ಆಸ್ಪತ್ರೆ (KOIMS) ಮಡಿಕೇರಿಯ ಆಯುಷ್ ವಿಭಾಗದ ವೈದ್ಯಾಧಿಕಾರಿ ಡಾ.ಅರುಣ್ ಅವರು ಶಿಬಿರದ ವರದಿ ಮಂಡಿಸಿ ಗಣ್ಯರನ್ನು ಸ್ವಾಗತಿಸಿದರು. ಡಾ. ಅನನ್ಯ ವಂದಿಸಿ, ಕುಮಾರಿ ಲೇಖ ಎನ್ ಕಾರ್ಯಕ್ರಮ ನಿರೂಪಣೆ ಮಾಡಿದರು. ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೇಂದ್ರ ಆಯುಷ್ ಇಲಾಖೆ, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯ ಹಾಗೂ ಭಾರತೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಪದವೀಧರರ ಸಂಘದ ಸಹಯೋಗದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆಯವರ ಮಾರ್ಗದರ್ಶನದಲ್ಲಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸ ಕಾಲೇಜು ಮತ್ತು ಆಸ್ಪತ್ರೆ ಉಜಿರೆ ವತಿಯಿಂದ ರಾಜ್ಯದ 236 ತಾಲೂಕುಗಳಲ್ಲಿ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಕೊಡಗು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ 33 ಕ್ಕೂ ಹೆಚ್ಚು ಶಿಬಿರಗಳನ್ನು ಹಮ್ಮಿಕೊಂಡಿದ್ದು, 1,300ಕ್ಕೂ ಹೆಚ್ಚು ಜನರಲ್ಲಿ ಆರೋಗ್ಯ ಜಾಗೃತಿ ಹಾಗೂ ಪ್ರಕೃತಿ ಚಿಕಿತ್ಸೆಯ ಕುರಿತು ಮಾಹಿತಿಯನ್ನು ನೀಡುವಲ್ಲಿ ಡಾ.ಅನನ್ಯ, ಎನ್.ಲೇಖ, ಶೋಭಿತ ಎಂ. ಸ್ನೇಹ, ಆನಂದ್, ದೀಕ್ಷ, ಕುನಲ್ ದೇವಯ್ಯ, ವೈದ್ಯರ ತಂಡ ಯಶಸ್ವಿಯಾಗಿದೆ.











