ವಿರಾಜಪೇಟೆ ನ.25 NEWS DESK : ವಿರಾಜಪೇಟೆ ತಾಲ್ಲೂಕು ಘಟಕದಿಂದ ಪಿ.ಎ.ಮಂಜುನಾಥ್ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷದ ಮುಖಂಡರುಗಳು ಜಾತ್ಯಾತೀತ ಜನತಾದಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಮಂಡಳಿ ಅಧ್ಯಕ್ಷರಾಗಿ ಆಯ್ಕೆಗೊಂಡ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು. ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿರಾಜಪೇಟೆಯ ಜೆಡಿಎಸ್ ನಿಯೋಗದ ನೇತೃತ್ವ ವಹಿಸಿದ್ದ ತಾಲೂಕು ಅಧ್ಯಕ್ಷರಾದ ಪಿ.ಎ.ಮಂಜುನಾಥ್ ರಾಜ್ಯಧ್ಯಕ್ಷರಾದ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ, ಕೊಡಗಿನಲ್ಲಿ ಪಕ್ಷ ಸಂಘಟನೆ ಮಾಡುವ ನಿಟ್ಟಿನಲ್ಲಿ ಆದಷ್ಟು ಬೇಗನೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಬೇಕು. ಜಿಲ್ಲಾಧ್ಯಕ್ಷರನ್ನು ನೇಮಕ ಮಾಡುವಾಗ ಪ್ರಾಮಾಣಿಕ ಕಾರ್ಯಕರ್ತರು ಹಾಗೂ ಮುಖಂಡರನ್ನು, ಪಕ್ಷದ ಹಿರಿಯ ಕಾರ್ಯಕರ್ತರನ್ನ ಗಣನೆಗೆ ತೆಗೆದುಕೊಂಡು ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಬೇಕೆಂದು ಮನವಿ ಮಾಡಿದರು. ಜಿಲ್ಲಾಧ್ಯಕ್ಷರನ್ನು ನೇಮಕ ಮಾಡುವಾಗ ಬೇರೆ ಪಕ್ಷದಿಂದ ವಲಸೆ ಬಂದಿರುವವರಿಗೆ ಮಣೆ ಹಾಕಿದರೆ ಪಕ್ಷನಿಷ್ಠೆ ಹಾಗೂ ಪ್ರಾಮಾಣಿಕ ಕಾರ್ಯಕರ್ತರು ಗೊಂದಲಕ್ಕೀಡಾಗುತ್ತಾರೆ ಎಂದು ರಾಜ್ಯಾಧ್ಯಕ್ಷರಾದ ಕುಮಾರಸ್ವಾಮಿಯವರಿಗೆ ತಿಳಿಸಿದರು. ಮನವಿಗೆ ಸ್ಪಂದಿಸಿದ ಕುಮಾರಸ್ವಾಮಿಯವರು ಆದಷ್ಟು ಬೇಗನೆ ಕೋರ್ ಕಮಿಟಿ ಅಧ್ಯಕ್ಷ ಕೃಷ್ಣ ರೆಡ್ಡಿ ಅವರನ್ನು ಜಿಲ್ಲೆಗೆ ಖುದ್ದಾಗಿ ಕಳುಹಿಸಲಾಗುತ್ತದೆ. ಸಾದ್ಯವಾದರೇ ಅವರ ಜೊತೆಗೆ ತಾನು ಕೂಡ ಬರುವುದಾಗಿ ಭರವಸೆ ನೀಡಿದರಲ್ಲದೆ, 15 ದಿನಗಳೊಳಗೆ ಜಿಲ್ಲಾಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ನೇಮಕ ಮಾಡುವುದಾಗಿ ಮತ್ತು ರಾಜ್ಯಕ್ಕೆ ಜಿಲ್ಲೆಯಿಂದ ಕೆಲವು ಪದಾಧಿಕಾರಿಗಳನ್ನು ಆಯ್ಕೆಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭ ಪಕ್ಷ ಸ್ಥಾಪನೆಯಾಗಿ 25 ವರ್ಷ ಕಳೆದಿರುವುದರಿಂದ ನೆನಪಿಗಾಗಿ ಜೆಡಿಎಸ್ ಪಕ್ಷದ ಚಿಹ್ನೆಯುಳ್ಳ ಬೆಳ್ಳಿ ನಾಣ್ಯವನ್ನು ಬಿಡುಗಡೆ ಮಾಡಲಾಯಿತು. ವಿರಾಜಪೇಟೆ ತಾಲ್ಲೂಕು ಕಾರ್ಯದರ್ಶಿ ಟಿ.ಆರ್.ಹರ್ಷ, ಪಕ್ಷದ ಮುಖಂಡರುಗಳಾದ ಪಾಣತ್ತಲೆ ಸತ್ಯ, ಬಲ್ಲುಡ ವಿನೋದ್ ಉತ್ತಪ್ಪ ಇತರರು ಉಪಸ್ಥಿತರಿದ್ದರು.











