ಮಡಿಕೇರಿ NEWS DESK ನ.28 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ 21ನೇ ಮಾನವ ಸರಪಳಿ ಕಾರ್ಯಕ್ರಮ ನ.30ರಂದು ಪಾಲಿಬೆಟ್ಟದಲ್ಲಿ ನಡೆಯಲಿದೆ. 2026-27ರಲ್ಲಿ ನಡೆಯಲಿರುವ 16ನೇ ರಾಷ್ಟ್ರೀಯ ಜನಗಣತಿಯಲ್ಲಿ ಆದಿಮ ಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರು ಪ್ರತ್ಯೇಕವಾಗಿ ‘ಕೊಡವ’ ಎಂದು ದಾಖಲೀಕರಣಗೊಳ್ಳುವಂತೆ ಜನಜಾಗೃತಿ ಮೂಡಿಸಲಾಗುವುದು ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಪಾಲಿಬೆಟ್ಟದಲ್ಲಿ ಶಾಂತಿಯುತವಾಗಿ ಮಾನವ ಸರಪಳಿ ನಿರ್ಮಿಸಲಾಗುವುದು ಮತ್ತು ಕೊಡವರ ಪರವಾದ ವಿವಿಧ ಬೇಡಿಕೆಗಳ ಕುರಿತು ಸರಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದ್ದಾರೆ. ಕೊಡವಲ್ಯಾಂಡ್ ಭೂ ರಾಜಕೀಯ ಸ್ವಯಂ ಆಡಳಿತ, ಕೊಡವರಿಗೆ ವಿಶ್ವರಾಷ್ಟ್ರ ಸಂಸ್ಥೆಯ ಇಂಡಿಜಿನಸ್ ಪಿಪಲ್ಸ್ ರೈಟ್ಸ್, ಎಸ್.ಟಿ.ಪಟ್ಟಿಯಲ್ಲಿ ವರ್ಗೀಕರಣ, ಸಿಕ್ಕಿಂನ “ಸಂಘ” ಮತಕ್ಷೇತ್ರದಂತೆ ಸಂಸತ್ ಮತ್ತು ವಿಧಾನಸಭೆಯಲ್ಲಿ ವಿಶೇಷ ಪ್ರಾತಿನಿಧ್ಯ ನೀಡಬೇಕು. ಕೊಡವರ ಪೂರ್ವಾರ್ಜಿತ ಭೂ ಹಕ್ಕು ಮತ್ತು ಧಾರ್ಮಿಕ ಸಂಸ್ಕಾರ ತೋಕ್ ಹಕ್ಕು ಚಿರಸ್ಥಾಯಿಯಾಗಿ ಮುಂದುವರೆಯಬೇಕು ಸೇರಿದಂತೆ ಕೊಡವರ ಸಬಲೀಕರಣಕ್ಕೆ ಪೂರಕವಾಗಿರುವ ಸಂವಿಧಾನಬದ್ಧವಾದ ಹಲವು ಬೇಡಿಕೆಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ.










