ಬೆಂಗಳೂರು ಡಿ.29 NEWS DESK : ರಾಜ್ಯ ಸರ್ಕಾರ ಹಿಂದಿಯನ್ನು ವಿರೋಧಿಸುವುದಿಲ್ಲ. ಆದರೆ ಹಿಂದಿ ನಮ್ಮ ರಾಷ್ಟ್ರ ಭಾಷೆ ಅಲ್ಲ ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌವ ಭಾಷೆ,ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕನ್ನಡ ಚಳುವಳಿಗಾರರ ಸಮಿತಿ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ಜನರಾಜ್ಯೋತ್ಸವ -2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಯಾರೇ ಆಂಗ್ಲ ಭಾಷೆಯಲ್ಲಿ ಮಾತನಾಡಿದರೂ ನಾನು ಕನ್ನಡದಲ್ಲಿಯೇ ಮಾತನಾಡಿಸುವುದು ಹಾಗೂ ಕನ್ನಡದಲ್ಲಿಯೇ ಸಹಿ ಮಾಡುವುದು ಮತ್ತು ಟಿಪ್ಪಣಿ ಬರೆಯುವುದು ಎಂದರು. ಹೊರರಾಜ್ಯಗಳಿಗೆ ಬರೆಯುವಾಗ ಮಾತ್ರ ಆಂಗ್ಲ ಭಾಷೆ ಬಳಸಿದರೂ ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ ಭಾಷೆ ಎಂದರು.ರಾಜ್ಯ ಸರ್ಕಾರ ಹಿಂದಿಯನ್ನು ವಿರೋಧಿಸುವುದಿಲ್ಲ. ಆದರೆ ಹಿಂದಿ ನಮ್ಮ ರಾಷ್ಟ್ರ ಭಾಷೆ ಅಲ್ಲ. ಕನ್ನಡವೇ ಸಾರ್ವಭೌವ ಭಾಷೆ. 1956 ನಲ್ಲಿ ಭಾಷಾವಾರು ಪ್ರಾಂತ್ಯ ವಿಂಗಡಣೆ ಆಗಿದೆ. 1973 ರಲ್ಲಿ ದೇವರಾಜ ಅರಸು ಅವರ ಮುಖ್ಯಮಂತ್ರಿ ಆಗಿದ್ದಾಗ ಕರ್ನಾಟಕ ಎಂದು ನಾಮಕರಣವಾಯಿತು ಎಂದರು. ಇದಾಗಿ 50 ವರ್ಷಗಳಾದರೂ ಬಿಜೆಪಿ ಸರ್ಕಾರ ಇದರ ಆಚರಣೆ ಮಾಡಲಿಲ್ಲ. ನಮ್ಮ ಸರ್ಕಾರ ಇದನ್ನು ಇಡೀ ರಾಜ್ಯದಲ್ಲಿ ಆಚರಣೆ ಮಾಡಿತು. ಇದರ ಪ್ರಯುಕ್ತ ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ದೇವಿಯ ಪ್ರತಿಮೆ ಸ್ಥಾಪನೆ ಮಾಡಲಾಗಿದೆ ಎಂದರು. ಪ್ರತಿ ಹಳ್ಳಿಯಲ್ಲಿಯೂ ಕನ್ನಡ ಶಾಲೆ ಇರಬೇಕು ಎಂದು ಬರಗೂರು ರಾಮಚಂದ್ರಪ್ಪ ಅವರು ಸಲಹೆ ನೀಡಿದ್ದು, ಗ್ರಾಮಗಳಲ್ಲಿ ಕನ್ನಡ ಶಾಲೆ ಇರಲೇಬೇಕು. ನಾನೂ ಕೂಡ ಕನ್ನಡ ಶಾಲೆ, ಕನ್ನಡ ಮಾಧ್ಯಮದ ಪರವಾಗಿ ಇರುವವನು ಎಂದರು. ಇತ್ತೀಚೆಗೆ ಆಂಗ್ಲ ಭಾಷೆಯ ವ್ಯಾಮೋಹ ಹೆಚ್ಚುತ್ತಿದೆ. ಇದಕ್ಕೆ ಪೋಷಕರ ಸಹಾಯವೂ ಅಗತ್ಯ. ಪೋಷಕರ ಸಹಾಯವಿಲ್ಲದೆ ಹೋದರೆ ಕನ್ನಡ ಶಾಲೆಗಳು ಉಳಿದು, ಬೆಳೆಯುವುದು ಕಷ್ಟ ಎಂದರು.ಬರಗೂರು ರಾಮಚಂದ್ರಪ್ಪ ಅವರು ಹೇಳಿದಂತೆ ಈ ಕನ್ನಡ ಶಾಲೆಗಳ ಬಗ್ಗೆ ಕೂಡಲೇ ಒಂದು ಸಭೆ ಕರೆದು , ಅಲ್ಲಿನ ತೀರ್ಮಾನವನ್ನು ಜಾರಿಗೊಳಿಸಲಾಗುವುದು ಎಂದರು.ವೈಯಕ್ತಿಕವಾಗಿ ನಾನು ದ್ವಿಭಾಷಾ ನೀತಿಯ ಪರವಾಗಿದ್ದು , ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ತೀರ್ಮಾನ ಕೈಗೊಳ್ಳುವುದು ಎಂದರು. ಕನ್ನಡ ಚಳವಳಿಗಾರರ ಮೇಲಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಉಪಸಮಿತಿಯನ್ನು ರಚಿಸಲಾಗಿದ್ದು, ಗೃಹ ಸಚಿವರು ಅಧ್ಯಕ್ಷರಾಗಿದ್ದಾರೆ. ಅವರೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದರು. ಕಲ್ಯಾಣ ಕರ್ನಾಟಕ ಎಂದು ನಾಮಕರಣವಾಗಿದ್ದು, 371ಜೆ ಕಾಯ್ದೆಯಾಗಿದ್ದು ಸೋನಿಯಾ ಗಾಂಧಿಯವರ ನಾಯಕತ್ವದಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ. ಕಲ್ಯಾಣ ಕರ್ನಾಟಕ ದಲ್ಲಿ 70%ಮೀಸಲಾತಿ ಹಾಗೂ ರಾಜ್ಯದಲ್ಲಿ 8% ಮೀಸಲಾತಿ ನೀಡುವ ಶಿಫಾರಸ್ಸನ್ನು ಯಥಾವತ್ತು ಜಾರಿ ಮಾಡಲಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ವರ್ಷದಲ್ಲಿ 3000 ಕೋಟಿ ಹಾಗೂ ಈಗ 5000 ಕೋಟಿ ಅನುದಾನವನ್ನು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನೀಡಲಾಗಿದೆ. ಆರೋಗ್ಯ ಮತ್ತು ಶಿಕ್ಷಣದಲ್ಲಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕದಲ್ಲಿ ಈ ಬಗ್ಗೆ ಹೆಚ್ಚಿನ ಒತ್ತು ನೀಡಲಾಗಿದೆ. ಹತ್ತಾರು ವರ್ಷಗಳಲ್ಲಿ ಪ್ರಾದೇಶಿಕ ತಾರತಮ್ಯ ನಿವಾರಣೆಯಾಗಲಿದೆ ಎಂಬ ನಂಬಿಕೆ ನಮಗಿದೆ. ಅನುದಾನ ಸೂಕ್ತ ರೀತಿಯಲ್ಲಿ ಬಳಕೆಯಾಗಬೇಕು ಎಂದರು. ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ನಮ್ಮ ಸರ್ಕಾರ ರಾಜಿ ಮಾಡಿಕೊಳ್ಳುವುದಿಲ್ಲ ಎಂದರು. ಕನ್ನಡದ ವಿಷಯದಲ್ಲಿ ನಾವು ಸದಾ ಮುಂಚೂಣಿಯಲ್ಲಿರುತ್ತೇವೆ. ಕನ್ನಡದ ಪರಧ್ವನಿ ಎತ್ತುವ ಕೆಲಸವನ್ನು ಮಾಡುತ್ತೇನೆ ಎಂದ ಮುಖ್ಯಮಂತ್ರಿಗಳು ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರದಿಂದ ಪರಿಸರ ತೀರುವಳಿ ಸಿಕ್ಕಿದ ಕೂಡಲೇ ಜಾರಿ ಮಾಡಲಾಗುವುದು. ಕೇಂದ್ರ ಸರ್ಕಾರ ಕೃಷ್ಣಾ ಮೂರನೇ ಹಂತ ಯೋಜನೆಗೆ ಗೆಜೆಟ್ ಅಧಿಸೂಚನೆ ಹೊರಡಿಸಿಲ್ಲ . ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಕನ್ನಡಿಗರು ಖಂಡಿಸಬೇಕು ಎಂದರು. ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಕನ್ನಡಪರವಾದ ತೀರ್ಮಾನ ಮಾಡಲಾಗುವುದು. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಬೇಕು. ರಾಜ್ಯದಲ್ಲಿ ಕನ್ನಡದ ವಾತಾವರಣ ನಿರ್ಮಿಸಬೇಕು. ಕರ್ನಾಟಕಕ್ಕೆ ಅನ್ಯಾಯವಾದಾಗ ಒಗ್ಗಟ್ಟಿನಿಂದ ಹೊರಡಬೇಕು. ಕನ್ನಡಿಗರು ಯಾವುದಕ್ಕೂ ಕಡಿಮೆಯಿಲ್ಲ. ಕನ್ನಡ ಭಾಷೆ, ನೆಲ, ಜಲ, ಗಡಿಗಳ ರಕ್ಷಣೆಗೆ ಪಣ ತೊಡೋಣ. ಮರ್ಯಾದಾ ಹತ್ಯೆ ತಡೆಯಲು ಕಾಯ್ದೆಯನ್ನು ರೂಪಿಸಿ ಜಾರಿ ಮಾಡಬೇಕೆಂಬ ಮನವಿಯನ್ನು ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕನ್ನಡ ನಾಡು – ನುಡಿಗೆ ಅಪಾರ ಸೇವೆ ಸಲ್ಲಿಸಿರುವ ಹಿರಿಯ ಚಲನಚಿತ್ರ ನಿರ್ಮಾಪಕರಾದ ಸಾ.ರಾ.ಗೋವಿಂದು ಅವರಿಗೆ ಜನರಾಜ್ಯೋತ್ಸವ ಪುರಸ್ಕಾರ ನೀಡಿ ಗೌರವಿಸಿದರು. ಸಮಾರಂಭದಲ್ಲಿ ಗೌರವಾನ್ವಿತ ಸಭಾಪತಿಗಳಾದ ಬಸವರಾಜ ಹೊರಟ್ಟಿ, ನಾಡೋಜ ಬರಗೂರು ರಾಮಚಂದ್ರಪ್ಪ, ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರುಗಳಾದ ಟಿ.ಎ.ನಾರಾಯಣಗೌಡ್ರು, ಪ್ರವೀಣ್ ಕುಮಾರ್ ಶೆಟ್ಟಿ ಸೇರಿದಂತೆ ಕನ್ನಡದ ಅನೇಕ ಕಟ್ಟಾಳುಗಳು ಉಪಸ್ಥಿತರಿದ್ದರು.










