

ನಾಪೋಕ್ಲು ಜ.5 NEWS DESK : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಹಾಗೂ ಕೊಡಗು ಜಿಲ್ಲಾ ಘಟಕದ ವತಿಯಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತನ್ನು ಸರ್ಕಾರಿ ಪ್ರಾತಿನಿಧಿಕ ಸಂಸ್ಥೆಯಾಗಿ ಪರಿಗಣಿಸಿ, ಶಾಶ್ವತ ಅನುದಾನ ಮೀಸಲಿಡಬೇಕೆಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿರುವ, ವಿರಾಜಪೇಟೆ ಶಾಸಕರನ್ನು ಅವರ ಗೃಹಕಚೇರಿಯಲ್ಲಿ ಘಟಕದ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಮಕ್ಕಳ ಸಾಹಿತ್ಯ ಬೆಳವಣಿಗೆಗೆ ಶ್ರಮಿಸುತ್ತಿರುವುದನ್ನು ಸರ್ಕಾರ ಗಮನಿಸಿದೆ. ಕನ್ನಡ ಭಾಷೆ ಮತ್ತು ಸಾಹಿತ್ಯದ ಕುರಿತು ವಿಶೇಷ ಕಾಳಜಿ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕರಾತ್ಮಕ ಸ್ಪಂದಿಸಿ, ಸೂಕ್ತ ಸಹಕಾರ ನೀಡಲಿದ್ದಾರೆ ಎಂದರಲ್ಲದೆ, ಸಧ್ಯದಲ್ಲೇ ಪರಿಷತ್ತಿನ ನಿಯೋಗವನ್ನು ಮುಖ್ಯಮಂತ್ರಿಗಳಿಗೆ ಭೇಟಿ ಮಾಡಿಸುವ ಭರವಸೆ ನೀಡಿದರು. ಸಭೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ರಾಜ್ಯ ಕಾರ್ಯಾಧ್ಯಕ್ಷ ಮಹಾದೇವ್, ಪ್ರಧಾನ ಕಾರ್ಯದರ್ಶಿ ಹು.ವಿ.ಸಿದ್ದೇಶ್, ಸಂಘಟನಾ ಕಾರ್ಯದರ್ಶಿ ಸಚಿನ್, ನಿರ್ದೇಶನ ಅಬ್ದುಲ್ ನಝೀರ್, ಕೊಡಗು ಜಿಲ್ಲಾಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ, ಕಾರ್ಯದರ್ಶಿ ಕರಿನೆರವಂಡ ಡ್ಯಾನಿ ಕುಶಾಲಪ್ಪ, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷೆ ಮುಕ್ಕಾಟಿರ ಕಾವೇರಮ್ಮ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಅಪ್ಪುಡ ಕುಶಾಲಪ್ಪ, ಜಿಲ್ಲಾ ನಿರ್ದೇಶಕರಾದ ಮಲ್ಲಂಡ ಶೃತಿಯ, ಮೀತಲತಂಡ ಇಸ್ಮೈಲ್, ವಿರಾಜಪೇಟೆ ಉಪಾಧ್ಯಕ್ಷರಾದ ಹರೀಶ್, ಪೊನ್ನಂಪೇಟೆ ತಾಲ್ಲೂಕು ಕಾರ್ಯದರ್ಶಿ ನಳಿನಿ ಮತ್ತಿತರರು ಉಪಸ್ಥಿತರಿದ್ದರು.
ವರದಿ : ದುಗ್ಗಳ ಸದಾನಂದ.









