
ಕುಶಾಲನಗರ ಜ.8 NEWS DESK : ಕುಶಾಲನಗರ ತಾಲ್ಲೂಕು ಸೌಂದರ್ಯ ವರ್ಧಕರ ಸಂಘದ 1ನೇ ವರ್ಷದ ವಾರ್ಷಿಕೋತ್ಸವ ಮತ್ತು ಮಹಾಸಭೆ ನಡೆಯಿತು. ಸ್ಥಳೀಯ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಸೌಂದರ್ಯ ವರ್ಧಕರು ಉತ್ತಮ ಗುಣಮಟ್ಟದ ಸೇವೆಯನ್ನು ಗ್ರಾಹಕರಿಗೆ ಒದಗಿಸಬೇಕು. ಒಗ್ಗಟ್ಟಿನಿಂದ ಸಂಘಟನೆ ಮೂಲಕ ತಮ್ಮ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡು ಹಿಡಿಯುವಂತಾಗಬೇಕು. ಸರಕಾರದಿಂದ ದೊರಕುವ ಸೌಲಭ್ಯಗಳನ್ನು ಪಡೆಯಲು ಪ್ರಯತ್ನಿಸುವ ಮೂಲಕ ತಮ್ಮ ಅಭಿವೃದ್ಧಿ ಕಾಣುವಂತಾಗಬೇಕು ಎಂದರು. ಈ ಸಂಬಂಧ ತಾನು ಎಲ್ಲ ರೀತಿಯ ಸಹಕಾರ ನೀಡುವುದಾಗಿ ಅವರು ಭರವಸೆ ವ್ಯಕ್ತಪಡಿಸಿದರು. ಜಿಲ್ಲಾ ಬ್ಯೂಟಿಷಿಯನ್ ಅಸೋಸಿಯೇಷನ್ ಅಧ್ಯಕ್ಷರಾದ ರತ್ನ ಯತೀಶ್ ಅವರು ಮಾತನಾಡಿ ಸಂಘದ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕುಶಾಲನಗರ ಶಾರದಾ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಶಾಂತ ಶ್ರೀಪತಿ ಅವರು ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸಬಲವಾಗಬೇಕು ಈ ನಿಟ್ಟಿನಲ್ಲಿ ಸ್ಥಳೀಯ ಆರ್ಥಿಕ ಸಂಸ್ಥೆಗಳಿಂದ ಮತ್ತು ಸರಕಾರದಿಂದ ದೊರಕುವ ಸೌಲಭ್ಯಗಳನ್ನು ಪಡೆದು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಭೂಮಿಕ ಮಹಿಳಾ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಫಿಲೋಮಿನಾ ಅವರು ಮಾತನಾಡಿ ಮಹಿಳೆಯರು ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವಂತಾಗಬೇಕು ಎಂದರು. ಇದೇ ಸಂದರ್ಭ ಆಶಾ ಕಾರ್ಯಕರ್ತೆ ಗೀತಾ ಮತ್ತು ಅತಿಥಿಗಳನ್ನು ಹಾಗೂ ಆಡಳಿತ ಮಂಡಳಿ ಪ್ರಮುಖರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ನಂತರ ವಾರ್ಷಿಕ ಮಹಾಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ತಾಲೂಕು ಸೌಂದರ್ಯವರ್ಧಕ ಸಂಘದ ಅಧ್ಯಕ್ಷರಾದ ಎನ್ ನಾಗಮಣಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೌರವಾಧ್ಯಕ್ಷರಾದ ವನಿತಾ ಚಂದ್ರಮೋಹನ್ ಉಪಾಧ್ಯಕ್ಷರಾದ ಡೆಸಿಲಾ ಪ್ರಧಾನ ಕಾರ್ಯದರ್ಶಿ ನವ್ಯ ಕಾರ್ಯದರ್ಶಿ ಮಧುಶ್ರೀ ಲೋಕೇಶ್ ಸಂಘಟನಾ ಕಾರ್ಯದರ್ಶಿ ತಾಜ್ ಖಜಾಂಚಿ ಚೈತನ್ಯ ಸಿ ಮೋಹನ್ ಮತ್ತು ಪದಾಧಿಕಾರಿಗಳು ಸದಸ್ಯರು ಇದ್ದರು.









