
ಮಡಿಕೇರಿ NEWS DESK ಜ.9 : ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿಗಳ ಕಚೇರಿ ಭವನದ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮಾತನಾಡಿ, ಕಾಂಗ್ರೆಸ್ ಸರಕಾರದಲ್ಲಿ ಮಹಿಳೆಯರಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ಹುಬ್ಬಳ್ಳಿ ನಗರದ ಕಾರ್ಪೋರೇಟರ್ ಸುವರ್ಣ ಅವರು ನೀಡಿದ ದೂರನ್ನೆ ಆಧರಿಸಿ, ಬಿಜೆಪಿ ಕಾರ್ಯಕರ್ತೆಯೊಬ್ಬರನ್ನು ಬಂಧಿಸಿ, ವಿವಸ್ತ್ರ ಗೊಳಿಸಿ ಹಲ್ಲೆ ಮಾಡಲಾಗಿದೆ. ಪೊಲೀಸರು ಮಹಿಳೆಯ ಮೇಲೆ ದರ್ಪ ಪ್ರದರ್ಶಿಸಿರುವ ಘಟನೆ ರಾಜ್ಯದಲ್ಲಿ ಮಹಿಳೆಯರು ಎಷ್ಟು ಅಸುರಕ್ಷಿತರೆನ್ನುವುದಕ್ಕೆ ಮತ್ತು ರಾಜ್ಯ ಸರಕಾರದ ದುರಾಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು. ಮಹಿಳೆಯ ಮೇಲೆ ದರ್ಪ ತೋರಿದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು. ಸುಳ್ಯ ತಾಲ್ಲೂಕಿನ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ‘ಶ್ರದ್ಧಾಂಜಲಿ’ ಪೋಸ್ಟ್ ಹಾಕಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ದುರಾಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಒತ್ತಾಯಿಸಿದರು. ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಮಾತನಾಡಿ, ರಾಜ್ಯದಲ್ಲಿ ನಡೆಯುತ್ತಿರುವ ಇಂತಹ ಘಟನೆಗಳು ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ. ಉತ್ತಮ ಆಡಳಿತ, ಉತ್ತಮ ಸಂಸ್ಕಾರವನ್ನು ಇಂದಿನ ಕಾಂಗ್ರೆಸ್ ಸರಕಾರದಿಂದ ನಿರೀಕ್ಷೆ ಮಾಡಲು ಸಾಧ್ಯವಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಪೊಲೀಸ್ ಕಚೇರಿಗಳು ಕಾಂಗ್ರೆಸ್ ಕಚೇರಿಗಳಂತೆ ಆಗಿದೆ, ಹುಬ್ಬಳ್ಳ್ಳಿ ಪ್ರಕರಣದಲ್ಲಿ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಕನಿಷ್ಟ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ರಾಜ್ಯ ಮಹಿಳಾ ಆಯೋಗ ಏನು ಮಾಡಿದೆ ಎಂದು ಪ್ರಶ್ನಿಸಿದರು. ಪ್ರತಿಭಟನಾ ಸ್ಥಳಕ್ಕೆ ಎಡಿಸಿ ಐಶ್ವರ್ಯ ಅವರು ಆಗಮಿಸಿದ ಸಂದರ್ಭ ಬಿಜೆಪಿ ಪ್ರಮುಖರು, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಒತ್ತಾಯಿಸಿದರು. ಬಳಿಕ ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಸೋಮಶೇಖರ್ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ಪ್ರಮುಖರಾದ ರಾಬಿನ್ ದೇವಯ್ಯ, ಶಾಂತೆಯಂಡ ರವಿ ಕುಶಾಲಪ್ಪ, ವಿ.ಕೆ.ಲೋಕೇಶ್, ಮಹೇಶ್ ಜೈನಿ, ಕೋಡಿ ಪೊನ್ನಪ್ಪ, ನಾಗೇಶ್ ಕುಂದಲ್ಪಾಡಿ, ಉಮೇಶ್ ಸುಬ್ರಮಣಿ, ಬಿ.ಕೆ.ಅರುಣ್ ಕುಮಾರ್, ಬಿ.ಕೆ.ಜಗದೀಶ್, ಉಮಾ ಪ್ರಭು, ಸವಿತಾ ರಾಕೇಶ್, ಕನ್ನಿಕೆ, ಶ್ವೇತಾ ಪ್ರಶಾಂತ್, ಅರುಣ್ ಶೆಟ್ಟಿ, ಕನ್ನಂಡ ಸಂಪತ್, ಬಿ.ಪಿ.ಡಿಶು, ಬೊಳ್ಳಜಿರ ಬಿ.ಅಯ್ಯಪ್ಪ, ನೆಲ್ಲೀರ ಚಲನ್, ಆರ್.ಕೆ.ಚಂದ್ರು ಮೊದಲಾದವರು ಪಾಲ್ಗೊಂಡಿದ್ದರು.









