
ಮಡಿಕೇರಿ ಜ.10 NEWS DESK : ಕೊಡಗಿನ ವಿವಿಧೆಡೆ ವ್ಯಾಘ್ರನ ಉಪಟಳ ಹೆಚ್ಚಾಗಿದ್ದು, ಜಾನುವಾರುಗಳನ್ನು ಕೊಂದು ಹಾಕಿದ ಪ್ರಕರಣಗಳು ಬೆಳಕಿಗೆ ಬಂದಿದೆ. ಕಾಫಿ ತೋಟ ಮತ್ತು ಭತ್ತದ ಗದ್ದೆಗಳಲ್ಲಿ ಹುಲಿ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಬಿಟ್ಟಂಗಾಲ ಸಮೀಪದ ಕಂಡಂಗಾಲ ಗ್ರಾಮದ 1ನೇ ರುದ್ರಗುಪ್ಪೆಯ ರೈತ ಬಲ್ಲಡಿಚಂಡ ಲೋಕನಾಥ್ ಎಂಬುವವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ. ಕಳೆದ 15 ದಿನಗಳಲ್ಲಿ ಈ ಭಾಗದಲ್ಲಿ 3 ಜಾನುವಾರುಗಳು ನಾಪತ್ತೆಯಾಗಿದ್ದು, ಕಾರ್ಮಿಕರು ತೋಟಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. *ಗ್ರಾಮಸ್ಥರ ಅಸಮಾಧಾನ* ಹುಲಿ ಸೆರೆಗೆ ಆಗ್ರಹಿಸಿ ಹಲವು ಬಾರಿ ಗ್ರಾಮಸ್ಥರು ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರೆಯದ ಕಾರಣ ರೈತ ಸಂಘದ ಪ್ರಮುಖರು ಸ್ಥಳಕ್ಕೆ ಆಗಮಿಸಿ ಅರಣ್ಯ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಹುಲಿ ಸೆರೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದೀಗ ಘಟನಾ ಸ್ಥಳದಲ್ಲಿ ಹುಲಿ ಸೆರೆಗೆ ಬೋನನ್ನು ಅಳವಡಿಸಿರುವ ಅಧಿಕಾರಿಗಳು ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿ ಕೂಂಬಿಂಗ್ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. *4 ಹಸುಗಳು ಬಲಿ* ಬಾಡಗ-ಬಾಣಂಗಾಲ ಗ್ರಾಮದಲ್ಲೂ ಹುಲಿ ದಾಳಿ ಮುಂದುವರೆದಿದ್ದು, ಶರ್ಲಿ ಎಂಬುವವರಿಗೆ ಸೇರಿದ ಹಸು ಬಲಿಯಾಗಿದೆ. ಗದ್ದೆಯಲ್ಲಿ ಹಸುವನ್ನು ಮೇಯಲು ಬಿಟ್ಟಿದ್ದ ಸಂದರ್ಭ ಹುಲಿ ದಾಳಿ ಮಾಡಿದೆ. ಚೌಡಿಕಾಡು ಕಾಫಿ ತೋಟದೊಳಗೆ ಹಸುವಿನ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ತಿತಿಮತಿ ವಲಯ ಅರಣ್ಯ ಎ.ಸಿ.ಎಫ್ ಗೋಪಾಲ್ ಹಾಗೂ ವಲಯ ಅರಣ್ಯ ಅಧಿಕಾರಿ ಗಂಗಾಧರ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಬಾಡಗ-ಬಾಣಂಗಾಲ ಗ್ರಾಮದ ಮಠದ ಭಾಗದಲ್ಲಿ ಹುಲಿದಾಳಿಗೆ ಕಳೆದ ಒಂದು ತಿಂಗಳಲ್ಲಿ ನಾಲ್ಕು ಹಸುಗಳು ಬಲಿಯಾಗಿವೆ. *ಬೋನ್, ಕ್ಯಾಮರಾ ಅಳವಡಿಕೆ* ಹುಲಿಯನ್ನು ಸೆರೆಹಿಡಿಯುವ ನಿಟ್ಟಿನಲ್ಲಿ ತಿತಿಮತಿ ವಲಯ ಅರಣ್ಯ ಅಧಿಕಾರಿ ಗಂಗಾಧರ್ ಅವರ ನೇತೃತ್ವದಲ್ಲಿ ಉಪವಲಯ ಅರಣ್ಯ ಅಧಿಕಾರಿ ಶಶಿ ಹಾಗೂ ಸಿಬ್ಬಂದಿಗಳು ಮಠದ ಕಾಫಿ ತೋಟದೊಳಗೆ ಬೋನ್ ಮತ್ತು ಐದು ಕ್ಯಾಮರಾಗಳನ್ನು ಅಳವಡಿಸಿದ್ದಾರೆ.









