
ಮಡಿಕೇರಿ ಜ.10 NEWS DESK : ಭೂ ದಾಖಲೆಗಳ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಗೊಂಡಿರುವ ನಿರ್ಗಮಿತ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಗೆ ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಹಾಗೆಯೇ ನೂತನ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ನಿರ್ಗಮಿತ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ನೂತನ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರಿಗೆ ಶಾಲು, ಫಲ ತಾಂಬೂಲ ಹಾಗೂ ವಿಶೇಷ ಉಡುಗೊರೆ ನೀಡಿ ಸನ್ಮಾನಿಸಿ, ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಿರ್ಗಮಿತ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೊಡಗು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದು, ಒಳ್ಳೆಯ ಅನುಭವ ಆಗಿದೆ. ಜತೆಗೆ ಆತ್ಮ ತೃಪ್ತಿಯೂ ಇದೆ ಎಂದು ತಿಳಿಸಿದರು. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆತ್ಮ ತೃಪ್ತಿಯಿಂದ ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಬೇಕು. ಆದರೆ ಒತ್ತಡ ಮಾಡಿಕೊಂಡು ಕಾರ್ಯ ನಿರ್ವಹಿಸಬಾರದು ಎಂದು ವೆಂಕಟ್ ರಾಜಾ ಅವರು ಸಲಹೆ ಮಾಡಿದರು. ಕಂದಾಯ, ಪಂಚಾಯತ್ ರಾಜ್, ಪೊಲೀಸ್, ಅರಣ್ಯ, ನಗರಾಭಿವೃದ್ಧಿ ಸೇರಿದಂತೆ ಹಲವು ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಸಿದ್ದರಿಂದ ಎಲ್ಲರೂ ಒಳ್ಳೆಯ ಹೆಸರು ಪಡೆಯಲು ಸಾಧ್ಯವಾಯಿತು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ನೂತನ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ ಕೋವಿಡ್ ಸಂದರ್ಭದಲ್ಲಿ ಒಟ್ಟಿಗೆ ಕರ್ತವ್ಯ ನಿರ್ವಹಿಸಿದ್ದು, ಇವರ ತಾಳ್ಮೆ, ಸಹನೆ ಮೆಚ್ಚುವಂತದ್ದು ಎಂದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಮಾತನಾಡಿ ಜಿಲ್ಲಾಧಿಕಾರಿಯಾಗಿ ಅಣ್ಣನ ರೀತಿ ಮಾರ್ಗದರ್ಶನ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಮಾತನಾಡಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಪಟ್ಟೆದಾರರ, ಸಿ ಮತ್ತು ಡಿ ಭೂಮಿ ಸೇರಿದಂತೆ ಹಲವು ಸಮಸ್ಯೆ ಮತ್ತು ಸವಾಲುಗಳಿಗೆ ಪರಿಹಾರ ಒದಗಿಸಿದ್ದಾರೆ ಎಂದು ಸ್ಮರಿಸಿದರು.
ಹಾಗೆಯೇ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಹಾಗೂ ತಲಕಾವೇರಿ ಪವಿತ್ರ ತೀರ್ಥೊದ್ಬವ ಸಂದರ್ಭದಲ್ಲಿ ಹಲವು ಸಲಹೆ, ಮಾರ್ಗದರ್ಶನ ನೀಡಿದ್ದಾರೆ ಎಂದು ಆರ್.ಐಶ್ವರ್ಯ ಅವರು ಹೇಳಿದರು. ಅರಣ್ಯ ವಾಸಿಗಳಿಗೆ ಆಧಾರ್ ಕಾರ್ಡ್, ಚುನಾವಣಾ ಹಾಗೂ ಪಡಿತರ ಚೀಟಿ ವಿತರಿಸುವಲ್ಲಿ ಶ್ರಮಿಸಿದ್ದಾರೆ ಎಂದರು. ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಮಾತನಾಡಿ ಕಿರಿಯ ಅಧಿಕಾರಿಗಳಿಗೆ ಒಳ್ಳೆಯ ಮಾರ್ಗದರ್ಶನ ನೀಡಿ, ಉತ್ತಮ ಆಡಳಿತ ನಿರ್ವಹಣೆಗೆ ಸಹಕರಿಸಿದ್ದಾರೆ. ಜತೆಗೆ ಮಾನವೀಯ ಗುಣ ಹೊಂದಿದ್ದರು ಎಂದು ನುಡಿದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್ ಅವರು ಮಾತನಾಡಿ ಕೊಡಗು ಜನಸಂಖ್ಯೆಯಲ್ಲಿ ಪುಟ್ಟ ಜಿಲ್ಲೆಯಾದರೂ ಸಹ ಅನೇಕ ಸವಾಲುಗಳನ್ನು ಎದುರಿಸಿ, ಕರ್ತವ್ಯ ನಿರ್ವಹಿಸಬೇಕಿದೆ. ಆ ನಿಟ್ಟಿನಲ್ಲಿ ಉತ್ತಮ ಮಾರ್ಗದರ್ಶನ ನೀಡಿ ಕೆಲಸ ಮಾಡಿಸುತ್ತಿದ್ದರು ಎಂದು ಶ್ಲಾಘಿಸಿದರು. ಅಧಿಕಾರಿಗಳು ಸುಳ್ಳು ಭರವಸೆ ನೀಡಬಾರದು, ಇಷ್ಟಪಟ್ಟು ಕೆಲಸಕ್ಕೆ ಸೇರಿದ್ದೇವೆ, ಅದರಂತೆ ನಡೆದುಕೊಳ್ಳಬೇಕು ಎಂದು ಸಲಹೆ ನೀಡುತ್ತಿದ್ದರು ಎಂದು ಗುಣಗಾನ ಮಾಡಿದರು. ಐಟಿಡಿಪಿ ಇಲಾಖೆ ಅಧಿಕಾರಿ ಎಸ್.ಹೊನ್ನೆಗೌಡ ಅವರು ಮಾತನಾಡಿ ವಿವಿಧ ಆಶ್ರಮ ಶಾಲೆಗಳ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು. ಹಾಗೆಯೇ ಹಲವು ಆದಿವಾಸಿ ಕುಟುಂಬಗಳ ಮನೆ ನಿರ್ಮಾಣಕ್ಕೆ ನಿವೇಶನ ಹಂಚಿಕೆ ಮಾಡಿದ್ದಾರೆ ಎಂದು ಎಸ್.ಹೊನ್ನೇಗೌಡ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ಭೂ ದಾಖಲೆಗಳ ಉಪ ನಿರ್ದೇಶಕರಾದ ನಿರಂಜನ ಅವರು ಮಾತನಾಡಿ ದಾರ್ಖಸು ಪೋಡಿ ಕಾರ್ಯಕ್ರಮ ಪ್ರಗತಿ ಸಾಧಿಸಿ ಸುಮಾರು 400 ಪ್ರಕರಣ ಇತ್ಯರ್ಥ ಮಾಡಿದ್ದಾರೆ ಎಂದು ಸ್ಮರಿಸಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಅವರು ಮಾತನಾಡಿ ಅರಣ್ಯ ಮತ್ತು ಕಂದಾಯ ಇಲಾಖೆ ನಡುವೆ ಭೂಮಿ ವಿಚಾರಕ್ಕೆ ಸಂಬಂಧಿಸಿದಂತೆ ಘರ್ಷಣೆ ಇರುತ್ತದೆ. ಆದರೆ ವೆಂಕಟ್ ರಾಜಾ ಸರ್ ಅವರು ಎರಡು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸುತ್ತಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ತಹಶಿಲ್ದಾರರಾದ ಕೃಷ್ಣಮೂರ್ತಿ, ಪ್ರವೀಣ್ ಕುಮಾರ್, ಕಿರಣ್ ಗೌರಯ್ಯ, ಶ್ರೀಧರ ಅವರು ಮಾತನಾಡಿ ಭೂ ಸುರುಕ್ಷಾ ಯೋಜನೆ, ಬಗರ್ ಹುಕುಂ ಸಾಗುವಳಿ, ಪೌತಿ ಖಾತೆ ಆಂದೋಲನ ಸೇರಿದಂತೆ ಕಂದಾಯಕ್ಕೆ ಸಂಬಂಧಿಸಿದಂತೆ ಪ್ರಗತಿಯಲ್ಲಿ ಕೊಡಗು ಉತ್ತಮ ಸ್ಥಾನ ಉಳಿಸುವಲ್ಲಿ ಸಲಹೆ ಮಾರ್ಗದರ್ಶನ ನೀಡಿದ್ದಾರೆ ಎಂದರು. ಪಟ್ಟೆದಾರರ ಸಮಸ್ಯೆ ಹಾಗೂ ಭೂ ಕಂದಾಯ ಕಾಯ್ದೆ ತಿದ್ದುಪಡಿಗೆ ಶ್ರಮಿಸಿದ್ದಾರೆ ಎಂದು ತಹಶಿಲ್ದಾರರು ಕೊಂಡಾಡಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಸೆಂಥಿಲ್ ಕುಮಾರ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಎಂಜಿನಿಯರ್ ಹೇಮಂತ್ ಕುಮಾರ್, ಬಿಸಿಎಂ ಇಲಾಖೆಯ ಪತ್ರಾಂಕಿತ ಅಧಿಕಾರಿ ಕವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ಇತರರು ಮಾತನಾಡಿದರು.
ಕೊಡಗು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್, ಪೌರಾಯುಕ್ತರಾದ ಎಚ್.ಆರ್.ರಮೇಶ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಭೂದಾಖಲೆಗಳ ಸಹಾಯಕ ನಿರ್ದೇಶಕರಾದ ಮಹೇಶ್ ಕುಮಾರ್, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು. ನಿತಿನ್ ಪ್ರಾರ್ಥಿಸಿದರು, ಸದಾಶಿವ ಪಲ್ಲೇದ ಅವರು ಸ್ವಾಗತಿಸಿದರು, ರೇಖಾ ನಿರೂಪಿಸಿ, ವಂದಿಸಿದರು.









