
ಮಡಿಕೇರಿ ಜ.12 NEWS DESK : ಕೊಡಗು ಜಿಲ್ಲೆಯ ಕೇಂದ್ರ ಸ್ಥಾನ ಮಡಿಕೇರಿ ನಗರದಲ್ಲಿ ‘ಜಿಲ್ಲಾ ಮುಸ್ಲಿಂ ಭವನ’ ನಿರ್ಮಾಣಕ್ಕೆ ಸೂಕ್ತ ಸರಕಾರಿ ಜಾಗವನ್ನು ಮಂಜೂರು ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಹನೀಫ್ ಪಿ.ಎ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗ ಅಲ್ಪಸಂಖ್ಯಾತರ ಪಕ್ಷ ನಿಷ್ಠೆಯನ್ನು ವಿವರಿಸಿದರು. ಕೊಡಗು ಜಿಲ್ಲೆಯ ಮುಸ್ಲಿಂ ಮತದಾರರು ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿದ್ದಾರೆ. ಕಳೆದ ಹಲವು ದಶಕಗಳಿಂದ ಪಕ್ಷಕ್ಕಾಗಿ ತೋರಿದ ನಿಷ್ಠೆಗೆ ಯಾವುದೇ ರೀತಿಯಲ್ಲೂ ಬೆಲೆ ಕಲ್ಪಿಸಲು ಸಾಧ್ಯವಿಲ್ಲ. ಆದರೆ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದರೂ ಕೊಡಗು ಜಿಲ್ಲೆಯ ಕಾಂಗ್ರೆಸ್ ನ ಮುಸ್ಲಿಂ ಮುಖಂಡರಿಗೆ ಸೂಕ್ತ ರಾಜಕೀಯ ಸ್ಥಾನಮಾನ ದೊರೆಯಲಿಲ್ಲ ಎನ್ನುವ ಕೊರಗು ನಮ್ಮನ್ನು ನಿರಂತರವಾಗಿ ಕಾಡುತ್ತಿದೆ ಎಂದು ಹನೀಫ್ ಪಿ.ಎ ತಿಳಿಸಿದರು. ಕೊಡಗಿನ ಕಾಂಗ್ರೆಸ್ ಮುಸ್ಲಿಂ ಪ್ರಮುಖರೊಬ್ಬರನ್ನು ಕರ್ನಾಟಕ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕು. ಮುಂಬರುವ ದಿನಗಳಲ್ಲಿ ರಾಜ್ಯದ ನಿಗಮ ಮತ್ತು ಮಂಡಳಿಗಳಿಗೆ ಅರ್ಹರನ್ನು ನೇಮಕಗೊಳಿಸುವ ಸಂದರ್ಭ ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಸ್ಲಿಂ ಮುಖಂಡರನ್ನು ಪರಿಗಣಿಸಿ ಸೂಕ್ತ ರಾಜಕೀಯ ಸ್ಥಾನಮಾನ ನೀಡಬೇಕು. ಜಿ.ಪಂ ಮತ್ತು ತಾ.ಪಂ ಚುನಾವಣೆಗಳಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುಸ್ಲಿಂ ಮುಖಂಡರನ್ನು ರಾಜಕೀಯದ ಮುಖ್ಯ ವಾಹಿನಿಗೆ ಬರಲು ಅವಕಾಶಗಳನ್ನು ಖಚಿತಪಡಿಸಬೇಕು. ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಮೌಲಾನ ಅಬ್ದುಲ್ ಕಲಾಂ ಆಜಾದ್ ಮಾದರಿ ಶಾಲೆ ಮತ್ತು ಪೊನ್ನಂಪೇಟೆ ತಾಲ್ಲೂಕಿಗೆ ತೀರಾ ಅಗತ್ಯವಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ನ್ನು ಶೀಘ್ರ ಮಂಜೂರು ಮಾಡಬೇಕು. ಕೊಡಗಿನಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ರಸ್ತೆ, ಶುದ್ಧ ಕುಡಿಯುವ ನೀರು, ಸಮುದಾಯ ಭವನ ನಿರ್ಮಾಣ ಮೊದಲಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಹೆಚ್ಚಿನ ಅನುದಾನ ಬಿಡುಗಡೆಗೊಳಿಸಬೇಕು. ಮಡಿಕೇರಿಯಲ್ಲಿ ‘ಮುಸ್ಲಿಂ ಭವನ’ ನಿರ್ಮಾಣಕ್ಕೆ ಜಾಗ ಮಂಜೂರು ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳ ಮನವಿ ಪತ್ರವನ್ನು ಹನೀಫ್ ಪಿ.ಎ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೈಯದ್ ಬಾವ, ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್, ಆದಂ ಸೋಮವಾರಪೇಟೆ, ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ರಫೀಕ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹಂಸ ಕೊಟ್ಟಮುಡಿ, ವಿರಾಜಪೇಟೆ ಪುರಸಭಾ ಸದಸ್ಯ ರಾಫಿ, ವಿರಾಜಪೇಟೆ ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಆರ್.ಕೆ.ಸಲಾಂ, ಹಮೀದ್ ಕೂಡಿಗೆ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಕೀಂ ಸುಂಟಿಕೊಪ್ಪ ಮತ್ತಿತರರು ಹಾಜರಿದ್ದರು.









