
ಮಡಿಕೇರಿ ಜ.14 NEWS DESK : ವಾಹನ ಚಲಾಯಿಸುವ ಪ್ರತಿಯೊಬ್ಬರಲ್ಲಿಯೂ ಸಹ ಸಂಚಾರ ನಿಯಮವನ್ನು ಪಾಲಿಸುತ್ತೇವೆ ಎಂಬ ದೃಢಸಂಕಲ್ಪ ಮಾಡಬೇಕು. ಇದರಿಂದ ಅಪಘಾತವನ್ನು ತಡೆಯಬಹುದು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಪ್ರಾದೇಶಿಕ ಸಾರಿಗೆ,ಕಾನೂನು ಸೇವಾ ಪ್ರಾಧಿಕಾರ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನಡೆದ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸಂಭವಿಸುವ ವಿವಿಧ ರೀತಿಯ ಅಪಘಾತಗಳ ಬಗ್ಗೆ ಪಿಪಿಟಿ ಮೂಲಕ ಮಾಹಿತಿ ನೀಡಿ ಯುವ ಜನರಲ್ಲಿ ಜಾಗೃತಿ ಮೂಡಿಸಿದರು. ವಾಹನ ಸಂಚಾರ ಸಂಬಂಧಿಸಿದಂತೆ ಎಲ್ಲಾ ನಿಯಮಗಳು ಗೊತ್ತಿದೆ ಎಂದು ಉದಾಸೀನ ಮಾಡಬಾರದು. 18 ವರ್ಷದೊಳಗಿನವರು ಸಾರ್ವಜನಿಕ ಸ್ಥಳಗಳಲ್ಲಿ ವಾಹನ ಚಲಾಯಿಸಬಾರದು. 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಪರವಾನಗಿ ಪಡೆಯಬೇಕು. ಜೊತೆಗೆ ವಾಹನದ ವಿಮೆ ಇರಬೇಕು ಎಂದು ದಿನೇಶ್ ಕುಮಾರ್ ಅವರು ಸಲಹೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಯುವಜನರಲ್ಲಿ ವೀಲಿಂಗ್ ಸಂಚಾರ ಬೈಕ್ ಓಡಿಸುವುದು ಹೆಚ್ಚಾಗಿದೆ. ಇದರಿಂದ ಹೆಚ್ಚಿನ ಅಪಘಾತಗಳು ಸಂಭವಿಸುತ್ತವೆ ಎಂದು ಅವರು ತಿಳಿಸಿದರು. ಸಾರಿಗೆ ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಶಿಕ್ಷೆಗೆ ಒಳಗಾಗಬೇಕಾಗುತ್ತದೆ. ಹಾಗೆಯೇ ತಮ್ಮ ಜೀವ ಕಳೆದುಕೊಳ್ಳಬೇಕಾಗುತ್ತದೆ. ವಾಹನ ಚಲಾಯಿಸುವಾಗ ಕುಟುಂಬದವರ ನೆನಪು ಸದಾ ಇರಬೇಕು. ಆ ನಿಟ್ಟಿನಲ್ಲಿ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಎಂದು ಸಲಹೆ ಮಾಡಿದರು. ರಾಷ್ಟ್ರದಲ್ಲಿ ವಾಹನ ಅಪಘಾತದಿಂದಲೇ ಹೆಚ್ಚಿನ ಸಾವು ನೋವುಗಳು ಸಂಭವಿಸುತ್ತಿವೆ. ಆದ್ದರಿಂದ ಈ ಬಗ್ಗೆ ಎಚ್ಚರವಹಿಸಬೇಕು. ಶಿಸ್ತುಬದ್ಧವಾಗಿ ಸಂಚಾರ ನಿಯಮ ಪಾಲಿಸಬೇಕು ಎಂದರು. ದ್ವಿಚಕ್ರ ವಾಹನ ಚಲಾಯಿಸುವವರು ಕಡ್ಡಾಯವಾಗಿ ಹೆಲ್ಮೇಟ್ ಧರಿಸಬೇಕು. ಸೀಟ್ ಬೆಲ್ಟ್ ಅಳವಡಿಸಿಕೊಳ್ಳಬೇಕು. ಪರವಾನಗಿ ಇಲ್ಲದೆ ವಾಹನ ಚಲಾಯಿಸಬಾರದು. ಆ ನಿಟ್ಟಿನಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವುದು ಅತ್ಯಗತ್ಯ ಎಂದು ದಿನೇಶ್ ಕುಮಾರ್ ಅವರು ಪ್ರತಿಪಾದಿಸಿದರು. ಅತೀ ವೇಗವಾಗಿ ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸಬಾರದು. ಮದ್ಯಪಾನ ಮಾಡಿ ವಾಹನ ಚಲಾಯಿಸುವುದು ಕಂಡುಬಂದಲ್ಲಿ ಪರವಾನಗಿ ರದ್ದುಪಡಿಸಲಾಗುತ್ತದೆ ಎಂದು ಎಚ್ಚರಿಸಿದರು. ಜೊತೆಗೆ ವಾಹನದ ಆರ್ಸಿಯ ಪರವಾನಗಿಯನ್ನು ಒಂದು ವರ್ಷದವರೆಗೆ ರದ್ದು ಮಾಡಲಾಗುತ್ತದೆ. ಈ ಎಲ್ಲಾ ನಿಯಮಗಳನ್ನು ತಿಳಿದುಕೊಂಡು ವಾಹನ ಚಲಾಯಿಸಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯವರು ಹೇಳಿದರು. ‘ಅಪ್ರಾಪ್ತರು ಸಾರ್ವಜನಿಕ ಸ್ಥಳದಲ್ಲಿ ವಾಹನ ಚಾಲನೆ ಮಾಡುವುದಿಲ್ಲ ಎಂಬ ಶಪಥ ಮಾಡಬೇಕು. ಅಪಘಾತ ರಹಿತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು. ಪ್ರತಿಯೊಬ್ಬರೂ ಸುಖ, ಶಾಂತಿ, ನೆಮ್ಮದಿಯಾಗಿ ಬದುಕುವತ್ತ ಗಮನಹರಿಸಬೇಕು ಎಂದರು.’ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಮಾತನಾಡಿ ಪ್ರತಿನಿತ್ಯ ಚಟುವಟಿಕೆಯ ಸಂಚಾರಕ್ಕೆ ವಾಹನ ಅತ್ಯಗತ್ಯ. ಆ ನಿಟ್ಟಿನಲ್ಲಿ ಸಂಚಾರ ನಿಯಮವನ್ನು ಕಡ್ಡಾಯವಾಗಿ ಪಾಲಿಸುವುದು ಹೆಚ್ಚಿನ ಅಗತ್ಯ ಎಂದು ಹೇಳಿದರು. ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು ನ್ಯಾಯಾಲಯದಲ್ಲಿ ಹೆಚ್ಚು ದಾಖಲಾಗುತ್ತಿವೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು. ರಸ್ತೆ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಕಾನೂನಿನಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಸಾಕಷ್ಟು ಮಾಹಿತಿ ಇದ್ದು, ಜೀವ ಮುಖ್ಯ ಎಂಬುದನ್ನು ಅರಿತುಕೊಳ್ಳಬೇಕು ಎಂದರು. ‘ಪ್ರತಿಯೊಬ್ಬರ ಮನೆಯಲ್ಲಿರುವ ವಾಹನವು ರಥ ಇದ್ದಂತೆ. ರಥವನ್ನು ಯಾವ ರೀತಿ ಪೂಜಾ ಭಾವನೆಯಿಂದ ಕಾಣುತ್ತೇವೆ. ಅಷ್ಟು ಗೌರವ ನೀಡಿ, ತಾಳ್ಮೆ, ಸಹನೆಯಿಂದ, ಸಂಯಮದಿಂದ ವಾಹನ ಚಲಾಯಿಸಬೇಕು ಎಂದು ಶುಭ ಅವರು ಒತ್ತಿ ಹೇಳಿದರು.’ ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್ ಅವರು ರಸ್ತೆ ಸುರಕ್ಷತೆ ಸಂಬಂಧಿಸಿದಂತೆ ಪ್ರತಿಜ್ಞಾ ವಿಧಿ ಬೋಧಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ, ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷರಾದ ಹೊಸೂರು ರಮೇಶ್ ಜೋಯಪ್ಪ, ವಾಹನ ಚಾಲನಾ ತರಬೇತಿ ಶಾಲೆಗಳ ಸಂಘದ ಅಧ್ಯಕ್ಷರಾದ ಗಿಲ್ಬರ್ಟ್ ಲೋಬೋ, ಪ್ರಾದೇಶಿಕ ಸಾರಿಗೆ ಇಲಾಖೆಯ ಅಧೀಕ್ಷಕರಾದ ಸಲೀಮ, ಮೋಹನ್ ಕುಮಾರ್, ಮೋಟಾರು ವಾಹನ ನಿರೀಕ್ಷಕರಾದ ಮೋಹನ್ ಕುಮಾರ್, ಪ್ರದೀಪ್ ಇತರರು ಇದ್ದರು. ನಿವೃತ್ತ ಪ್ರಾದೇಶಿಕ ಅಧಿಕಾರಿ ಪಾಷ ನಿರೂಪಿಸಿದರು. ಸಂತ ಮೈಕಲರ ಶಾಲೆಯ ಗೈಡ್ಸ್ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ರೀಟಾ ವಂದಿಸಿದರು. :: ಜಾಥಾ :: ರಸ್ತೆ ಸುರಕ್ಷತೆ ಮಾಸಾಚರಣೆ ಪ್ರಯುಕ್ತ ನಗರದ ಹೊಸ ಖಾಸಗಿ ಬಸ್ ನಿಲ್ದಾಣದಿಂದ ಮೈತ್ರಿ ಸಭಾಂಗಣದವರೆಗೆ ಜಾಥಾ ನಡೆಯಿತು. ಜಾಥಾಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಚಾಲನೆ ನೀಡಿದರು. ಜಾಥಾದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಖಾಸಗಿ ಬಸ್ ಹಾಗೂ ಆಟೋ ಚಾಲಕರ ಸಂಘ ಹೀಗೆ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ರಸ್ತೆ ಸುರಕ್ಷತೆ ಸಂಬಂಧಿಸಿದಂತೆ ಪ್ಲೇ ಕಾರ್ಡ್ ಮೂಲಕ ಜಾಗೃತಿ ಮೂಡಿಸಲಾಯಿತು.









