
ಮಡಿಕೇರಿ ಜ.17 NEWS DESK : ಕೊಡಗಿನ ಜಮ್ಮಾಬಾಣೆಯ ಸಮಸ್ಯೆಯನ್ನು ಬಗೆಹರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆಯಡಿ ಉಚ್ಚ ನ್ಯಾಯಾಲಯವು ನೀಡಿದ ತೀರ್ಪನ್ನು ತಕ್ಷಣ ಅನುಷ್ಠಾನಗೊಳಿಸಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಆಗ್ರಹಿಸಿದೆ. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದ ಬಿಜೆಪಿಯ ಪ್ರಮುಖರು, ನ್ಯಾಯಾಲಯ ತೀರ್ಪಿನಲ್ಲಿ ಆದೇಶಿಸಿರುವಂತೆ ಕ್ರಮ ಕೈಗೊಳ್ಳಬೇಕು, ತಪ್ಪಿದಲ್ಲಿ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸುದಾಗಿ ಎಚ್ಚರಿಕೆ ನೀಡಿದರು. 2011 ರಲ್ಲಿ ಅಂದಿನ ಬಿಜೆಪಿ ಸರಕಾರವು ಕೊಡಗಿನ ಜ್ವಲಂತ ಸಮಸ್ಯೆಯಾದ ಜಮ್ಮಾ ಬಾಣೆಯ ಸಮಸ್ಯೆಯನ್ನು ಬಗೆಹರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ನಿಯಮ 2(20) ಮತ್ತು ನಿಯಮ 80ಕ್ಕೆ ತಿದ್ದುಪಡಿ ತಂದಿದ್ದು, ಇದು ರಾಜ್ಯ ಸರಕಾರದ ಪತ್ರದಲ್ಲಿ ಪ್ರಕಟಣೆಗೊಂಡಿದೆ. ಇದನ್ನು ಪ್ರಶ್ನಿಸಿ ಕೆಲವರು ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ರಿಟ್ ಅರ್ಜಿಗಳ ಬಗ್ಗೆ ಸುದೀರ್ಘವಾದ ವಾದ ವಿವಾದಗಳು ನಡೆದು ಉಚ್ಚ ನ್ಯಾಯಾಲಯವು ಜುಲೈ 2024 ರಲ್ಲಿ ಸುದೀರ್ಘವಾದ ತೀರ್ಪನ್ನು ನೀಡಿ ರಿಟ್ ಪಿಟಿಷನ್ ಅನ್ನು ವಜಾಗೊಳಿಸಿದೆ. ಅಲ್ಲದೆ ಕರ್ನಾಟಕ ಭೂ ಕಂದಾಯ ಕಾಯ್ದೆಗೆ 2011ರಲ್ಲಿ ತಂದ ತಿದ್ದುಪಡಿಯು ಸಂವಿಧಾನಾತ್ಮಕವಾಗಿಯೇ ಇದೆ ಮತ್ತು ತಿದ್ದುಪಡಿಯನ್ನು ಜಿಲ್ಲಾಡಳಿತ, ಕಂದಾಯ ಇಲಾಖೆ ಈ ತೀರ್ಪಿನ ಪ್ರತಿ ಸಿಕ್ಕಿದ 30 ದಿನಗೊಳಗಾಗಿ ಅನುಷ್ಠಾನ ಮಾಡಬೇಕು ಎಂದು ಆದೇಶಿಸಿದೆ. ಆದರೆ ತೀರ್ಪು ಪ್ರಕಟವಾಗಿ ಒಂದೂವರೆ ವರ್ಷ ಕಳೆದರೂ ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಈ ತಿದ್ದುಪಡಿಯನ್ನು ಜಾರಿಗೆ ತರಲು ಕ್ರಮ ಕೈಗೊಂಡಿಲ್ಲ. ಇದು ನ್ಯಾಯಾಲಯದ ಆದೇಶ ಉಲ್ಲಂಘನೆ ಮತ್ತು ನಿಂದನೆಯಾಗಿದೆ ಎಂದು ಬಿಜೆಪಿ ಮುಖಂಡರು ಮನವಿ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
*ಸವಾಲು ಸ್ವೀಕಾರ* ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ ನ್ಯಾಯಾಲಯ ನೀಡಿದ ತೀರ್ಪನ್ನು ಅನುಷ್ಠಾನಗೊಳಿಸದ ಕಾಂಗ್ರೆಸ್ ಸರಕಾರ ಇದೀಗ ಸಮಿತಿಯನ್ನು ರಚಿಸಿ ಕಾಯ್ದೆಗೆ ತಿದ್ದುಪಡಿ ತಂದಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಜಮ್ಮಾಬಾಣೆ ಸಮಸ್ಯೆ ಕುರಿತು ಚರ್ಚೆಗೆ ಬನ್ನಿ ಎಂದು ಶಾಸಕರು ಸವಾಲು ಹಾಕಿರುವುದನ್ನು ಅತ್ಯಂತ ವಿನಯದಿಂದ ಸ್ವೀಕರಿಸುತ್ತೇವೆ, ಅವರು ಚರ್ಚೆಗೆ ವೇದಿಕೆ ಸಿದ್ದಪಡಿಸಲಿ ಎಂದರು. ಮನವಿ ಸಲ್ಲಿಸುವ ಸಂದರ್ಭ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ವಿ.ಕೆ.ಲೋಕೇಶ್, ಉಪಾಧ್ಯಕ್ಷ ಮನು ಮಂಜುನಾಥ್, ವಕ್ತಾರ ಬಿ.ಕೆ.ಅರುಣ್ ಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ನಗರಸಭೆ ಸದಸ್ಯ ಅರುಣ್ ಶೆಟ್ಟಿ, ಪ್ರಮುಖರಾದ ಕನ್ನಿಕೆ ಮತ್ತಿತರರು ಹಾಜರಿದ್ದರು.









