
ಕುಶಾಲನಗರ, ಜ.26 NEWS DESK : ಪ್ರತಿಯೊಬ್ಬರೂ ದೇಶದ ಸಮಗ್ರತೆ, ಐಕ್ಯತೆ ಹಾಗೂ ರಾಷ್ಟ್ರೀಯ ಭಾವೈಕ್ಯತೆಗೆ ಶ್ರಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಹೇಳಿದರು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು( ಕೂಡ್ಲೂರು ) ಸರ್ಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದಿಂದ ನಡೆದ 77 ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪ್ರಜಾತಂತ್ರ ವ್ಯವಸ್ಥೆಗೆ ಬುನಾದಿ ಹಾಕಿರುವ ನಮ್ಮ ಸಂವಿಧಾನವು ವಿಶ್ವಕ್ಕೆ ಮಾದರಿಯಾಗಿದೆ. ಸಂವಿಧಾನದ ಪಾಲನೆ ಹಾಗೂ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದರು. ಗಣತಂತ್ರ ವ್ಯವಸ್ಥೆಯ ಕುರಿತು ಮಾಹಿತಿ ನೀಡಿದ ಸಮಾಜ ವಿಜ್ಞಾನ ಶಿಕ್ಷಕಿ ಎಸ್.ಎಂ.ಗೀತಾ ಮಾತನಾಡಿ, ರಾಷ್ಟ್ರೀಯ ಗೀತೆಯಾದ ವಂದೇ ಮಾತರಂ 150 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಗಣತಂತ್ರ ದಿನವನ್ನು ಅದೇ ಪರಿಕಲ್ಪನೆಯಲ್ಲಿ ಆಚರಿಸಲಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್, ಎಸ್ ಡಿ ಎಂ ಸಿ.ಸದಸ್ಯರಾದ ಕೆ.ಎಸ್.ರಾಚಾಚಾರಿ, ಶ್ರೀನಿವಾಸಚಾರಿ, ಲಕ್ಷ್ಮಿ , ಗೈಡ್ಸ್ ಶಿಕ್ಷಕಿ ಕೆ.ಟಿ.ಸೌಮ್ಯ,ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಬಿ.ಡಿ.ರಮ್ಯ, ಅನ್ಸಿಲಾ ರೇಖಾ
ಹಾಗೂ ವಿದ್ಯಾರ್ಥಿ ನಾಯಕರು ಇದ್ದರು. ಗಣರಾಜ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ಏರ್ಪಡಿಸಿದ್ದ ರಾಷ್ಟ್ರೀಯ ಭಾವೈಕ್ಯತೆ ಪ್ರತಿಬಿಂಬಿಸುವ ನೃತ್ಯ ಪ್ರದರ್ಶನ ಗಮನ ಸೆಳೆಯಿತು. ವಿದ್ಯಾರ್ಥಿಗಳು ದಿನದ ಮಹತ್ವ ಕುರಿತು ಮಾತನಾಡಿದರು. ಸಂಭ್ರಮ, ಸಡಗರದಿಂದ ನಡೆದ ಗಣರಾಜ್ಯೋತ್ಸವದಲ್ಲಿ
ರಾಷ್ಟ್ರ ಧ್ವಜಾರೋಹಣ ನಡೆಸಿ ಗೌರವ ವಂದನೆ ಸಲ್ಲಿಸಲಾಯಿತು. ಡಾ.ಬಿ.ಆರ್.ಅಂಬೇಡ್ಕರ್, ಮಹಾತ್ಮ ಗಾಂಧೀಜಿ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.









