
ಮಡಿಕೇರಿ NEWS DESK ಜ.26 : ಜಿಲ್ಲಾಡಳಿತ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆಯು ಅರ್ಥಪೂರ್ಣವಾಗಿ ಸೋಮವಾರ ಆಚರಿಸಲಾಯಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಮೆಹರೋಜ್ ಖಾನ್, ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಆರ್.ಎನ್., ಲೋಕಾಯುಕ್ತ ಎಸ್ ಪಿ. ದಿನೇಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. ಸಂವಿಧಾನದ ಶ್ರೇಷ್ಠ ಮೌಲ್ಯಗಳಾದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವಕ್ಕೆ ನಿಜವಾದ ಅರ್ಥ ಸಿಗಬೇಕಾದರೆ, ನಾವೆಲ್ಲರೂ ಸಂವಿಧಾನಕ್ಕೆ ಬದ್ಧರಾಗಿ ಬದುಕುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ತಿಳಿಸಿದ್ದಾರೆ. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು 1950ರ ಜನವರಿ 26 ರಂದು ನಮ್ಮ ಸಂವಿಧಾನ ಜಾರಿಗೆ ಬರುವ ಮೂಲಕ, ಭಾರತವು ವಿಶ್ವದ ಅತಿ ದೊಡ್ಡ ಪ್ರಜಾ ಪ್ರಭುತ್ವ ರಾಷ್ಟ್ರವಾಗಿ ಹೊರಹೊಮ್ಮಿತು. ಹಕ್ಕು ಮತ್ತು ಕರ್ತವ್ಯಗಳ ಸಮನ್ವಯವೇ ನಮ್ಮ ಸಂವಿಧಾನದ ಶಕ್ತಿ. ಈ ಶುಭ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಸರ್ದಾರ್ಪಟೇಲ್ ಹಾಗೂ ನಮ್ಮ ನೆಲದ ಹೆಮ್ಮೆಯ ಸೇನಾ ದಂಡನಾಯಕರಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಅವರ ತ್ಯಾಗವನ್ನು ಸ್ಮರಿಸುವುದು ನಮ್ಮ ಕರ್ತವ್ಯ ಎಂದರು. ‘ವ್ಯಕ್ತಿಗಿAತ ಸಮಾಜ ಮುಖ್ಯ, ಸಮಾಜಕ್ಕಿಂತ ದೇಶ ಮುಖ್ಯ’ ಎಂಬ ಧ್ಯೇಯದೊಂದಿಗೆ, ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುತ್ತಾ ನಾವೆಲ್ಲರೂ ಮುನ್ನಡೆಯೋಣ. ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಬಡವರ ಆರ್ಥಿಕ ಸಬಲೀಕರಣಕ್ಕೆ ಪ್ರಯತ್ನಿಸಿದೆ ಎಂದು ಸಚಿವರು ತಿಳಿಸಿದರು. ‘ಶಕ್ತಿ’ ಯೋಜನೆಯಡಿ 1,44,68,502 ಮಹಿಳೆಯರು ಉಚಿತ ಪ್ರಯಾಣದ ಸದುಪಯೋಗ ಪಡೆದುಕೊಂಡಿದ್ದು, ಸಂಸ್ಥೆಗೆ 63 ಕೋಟಿ ರೂಪಾಯಿಗಳಷ್ಟು ಆದಾಯ ಬಂದಿದೆ. ಕೊಡಗಿನಲ್ಲಿ ಶೇ.99.15 ರಷ್ಟು ಯಶಸ್ವಿ ನೋಂದಣಿ ಕಂಡಿರುವ ‘ಗೃಹಜ್ಯೋತಿ’ ಯೋಜನೆಯಡಿ, 1,99,610 ಕುಟುಂಬಗಳಿಗೆ ಈವರೆಗೆ 731.28 ಲಕ್ಷ ರೂ. ಗಳ ಸಹಾಯ ಧನ ಭರಿಸಲಾಗಿದೆ. ‘ಅನ್ನಭಾಗ್ಯ’ ಯೋಜನೆಯಡಿ ಜಿಲ್ಲೆಯ ಒಟ್ಟು 1,04,612 ಕುಟುಂಬಗಳು ಈ ಯೋಜನೆಯ ಲಾಭ ಪಡೆಯುತ್ತಿವೆ. ಮಹಿಳಾ ಸಬಲೀಕರಣದ ‘ಗೃಹಲಕ್ಷ್ಮಿ’ ಯೋಜನೆಯಡಿ ಜಿಲ್ಲೆಯ 1,17,824 ಯಜಮಾನಿಯರ ಖಾತೆಗೆ ಈವರೆಗೆ 535.41 ಕೋಟಿ ರೂ. ಗಳನ್ನು ನೇರವಾಗಿ ಜಮೆ ಮಾಡಲಾಗಿದೆ. ‘ಯುವನಿಧಿ’ ಯೋಜನೆಯಡಿ ಜಿಲ್ಲೆಯ 1,649 ಯುವ ಜನರಿಗೆ ಈವರೆಗೆ 438.87 ಲಕ್ಷ ರೂ. ಭತ್ಯೆಯನ್ನು ಪಾವತಿಸಲಾಗಿದೆ. ಪಂಚ ಗ್ಯಾರಂಟಿ ಯೋಜನೆಗಳ ಒಟ್ಟು ಸಾಧನೆ: ಈ ಐದು ಯೋಜನೆಗಳ ಅಡಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 1,48,92,197 (ಸುಮಾರು 1.49 ಕೋಟಿ) ಫಲಾನುಭವಿಗಳು (ಶಕ್ತಿ ಯೋಜನೆಯ ಪ್ರಯಾಣಿಕರು ಸೇರಿ) ಸೌಲಭ್ಯ ಪಡೆದಿದ್ದು, ಈವರೆಗೆಒಟ್ಟು 610.11 ಕೋಟಿ ರೂ. ಗಳ ಆರ್ಥಿಕ ನೆರವನ್ನುಒದಗಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ, ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಪೊನ್ನಂಪೇಟೆ ಹಾಗೂ ಕುಶಾಲನಗರದಲ್ಲಿ ತಲಾ 100 ಸಂಖ್ಯಾ ಬಲದ ಎರಡು ಹೊಸ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲಾಗಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದಡಿ ರಾಜ್ಯ ಹಣಕಾಸು ಆಯೋಗ, ಗ್ರಾಮ ಸಡಕ್, ಕೆರೆ ಹಾಗೂ ಕಟ್ಟಡಗಳ ಅಭಿವೃದ್ಧಿಗೆ ಒಟ್ಟು1,164 ಲಕ್ಷ ರೂ.ಅನುಮೋದನೆಗೊಂಡಿದ್ದು, ಕಾಮಗಾರಿಗಳು ಅಂತಿಮ ಹಂತದಲ್ಲಿವೆ. ಲೋಕೋಪಯೋಗಿ ಇಲಾಖೆಯಡಿ ಕಾಲುಸಂಕ ನಿರ್ಮಾಣಕ್ಕಾಗಿ 2 ಕೋಟಿ ರೂ. ಮತ್ತು ವಿರಾಜಪೇಟೆಕ್ಷೇತ್ರದಅಭಿವೃದ್ಧಿಗೆ 20 ಕೋಟಿ ರೂ. ಸೇರಿದಂತೆ, ಒಟ್ಟು 22 ಕೋಟಿ ರೂ. ಅನುದಾನದಲ್ಲಿ ವಿವಿಧಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮಡಿಕೇರಿಯಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಕಿರುತಾರಾಲಯ ಸ್ಥಾಪನೆಗೆ ಒಟ್ಟು 1226.50 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಪ್ರಗತಿಯಲ್ಲಿದೆ. ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಡಿ ಚೆಕ್ ಡ್ಯಾಂ, ನಾಲೆ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗಳಿಗೆ ಒಟ್ಟು70 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಇದರೊಂದಿಗೆ, ಪರಿಶಿಷ್ಟ ಸಮುದಾಯದ ರೈತರಿಗೆ 98 ಕೊಳವೆಬಾವಿಗಳನ್ನು ಮಂಜೂರು ಮಾಡಲಾಗಿದೆ. ಪಶುಪಾಲನಾ ಇಲಾಖೆಯ ‘ರಾಷ್ಟ್ರೀಯ ಜಾನು ವಾರು ಮಿಷನ್’ ಅಡಿಯಲ್ಲಿ 2.64 ಲಕ್ಷ ರೂ. ಅನುದಾನ ಒದಗಿಸಲಾಗಿದೆ. ಜಿಲ್ಲೆಯಲ್ಲಿ 41 ಜಾನುವಾರುಗಳಿಗೆ ವಿಮಾ ಸೌಲಭ್ಯ ಕಲ್ಪಿಸಲಾಗಿದೆ ಬಾಕಿ ಉಳಿದ ಜಾನುವಾರುಗಳಿಗೂ ವಿಮೆ ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದೆ. ರಾಜಾಸೀಟು ಉದ್ಯಾನವನದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ, ಉತ್ತಮ ಗುಣಮಟ್ಟದ ಆಹಾರ ಒದಗಿಸುವ ನಿಟ್ಟಿನಲ್ಲಿ ಫುಡ್ ಕೋರ್ಟ್ ನಿರ್ಮಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಜಿಲ್ಲಾ ನಗರಾಭಿವೃದ್ಧಿ ಕೋಶದ ವತಿಯಿಂದ ‘ಗೃಹಭಾಗ್ಯ’ ಯೋಜನೆಯಡಿ 44 ಪೌರ ಕಾರ್ಮಿಕರಿಗೆ ಮನೆ ನಿರ್ಮಿಸಲು 264 ಲಕ್ಷ ರೂ. ಅನುದಾನ ಒದಗಿಸಲಾಗಿದೆ. ಈ ಪೈಕಿ 22 ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ನಗರ ಭೂ ಸಾರಿಗೆ ನಿರ್ದೇಶನಾಲಯದ ವತಿಯಿಂದ ಮಡಿಕೇರಿ, ವಿರಾಜಪೇಟೆ ಮತ್ತು ಕುಶಾಲನಗರ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳಿಗಾಗಿ 12.02 ಲಕ್ಷ ರೂ. ಅನುದಾನವನ್ನು ಹಂಚಿಕೆ ಮಾಡಲಾಗಿದೆ. ನಮ್ಮ ಜಿಲ್ಲೆಯ ನಗರಗಳ ಸೌಂದರ್ಯ ಮತ್ತು ನಾಗರಿಕರ ಸುರಕ್ಷತೆ ನಮ್ಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಒಟ್ಟು 11.99 ಕೋಟಿ ರೂ. ವೆಚ್ಚದ ಮಹತ್ವದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ವಿರಾಜಪೇಟೆಯ ‘ವ್ಯೂಪಾಯಿಂಟ್’ ಅಭಿವೃದ್ಧಿಗೆ 1.72 ಕೋಟಿ ರೂ. ಮೀಸಲಿಡಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ, ಕುಶಾಲನಗರದ ಬಿ.ಎಂ. ರಸ್ತೆ ಹಾಗೂ ಮಡಿಕೇರಿಯ ಜಿ.ಟಿ. ಮತ್ತು ಎಂ.ಜಿ. ರಸ್ತೆಗಳಲ್ಲಿ ಸುಸಜ್ಜಿತ ಪಾದಚಾರಿ ಮಾರ್ಗ ನಿರ್ಮಾಣಕ್ಕಾಗಿ ಒಟ್ಟು 10.27 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಪ್ರಸಕ್ತ ಸಾಲಿನಲ್ಲಿ ಗೋಣಿಕೊಪ್ಪ, ಕುಟ್ಟ, ಶಿರಂಗಾಲ, ಕುಶಾಲನಗರ ಹಾಗೂ ಕೂಡಿಗೆಯಲ್ಲಿ ಒಟ್ಟು 05 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಮಂಜೂರು ಮಾಡಲಾಗಿರುತ್ತದೆ. ಶಾಲೆಗಳ ಮೂಲಭೂತ ಸೌಕರ್ಯಕ್ಕಾಗಿ ಸರ್ಕಾರದಿಂದ ಪ್ರತಿ ಶಾಲೆಗೆ 3 ಕೋಟಿ ರೂ. ಅನುದಾನ ಮಂಜೂರಾಗಿರುತ್ತದೆ. ವಿರಾಜಪೇಟೆಯ ತಾಲ್ಲೂಕು ಆಸ್ಪತ್ರೆಯನ್ನು 91.5 ಕೋಟಿ ರೂ. ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಿ, 250 ಬೆಡ್ ಗಳ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ಕುಶಾಲನಗರ ತಾಲ್ಲೂಕಿನ ಸಮೂದಾಯ ಆರೋಗ್ಯ ಕೇಂದ್ರವನ್ನು 41.5 ಕೋಟಿ ರೂ. ಗಳ ವೆಚ್ಚದಲ್ಲಿ 100 ಬೆಡ್ ಗಳ ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗಿದೆ. ಸಮೂದಾಯ ಆರೋಗ್ಯ ಕೇಂದ್ರ ಗೋಣಿಕೊಪ್ಪವನ್ನು ಹೆಚ್ಚುವರಿಯಾಗಿ 5.75 ಕೋಟಿ ರೂ. ಗಳ ವೆಚ್ಚದಲ್ಲಿ 50 ಬೆಡ್ ಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ ಹುದಿಕೇರಿಯನ್ನು 30 ಬೆಡ್ ಗಳ ಸಮೂದಾಯ ಆರೋಗ್ಯ ಕೇಂದ್ರವನ್ನಾಗಿ 5.75 ಕೋಟಿ ರೂ. ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ವಿರಾಜಪೇಟೆ ತಾಲ್ಲೂಕಿನ ವಿರಾಜಪೇಟೆ ಹೋಬಳಿಯ ವಿ.ಬಾಡಗ ಗ್ರಾಮದಲ್ಲಿ ಕ್ರೀಡಾ ತರಬೇತಿ ಕೇಂದ್ರ ಸ್ಥಾಪನೆಯ ಉದ್ದೇಶಕ್ಕಾಗಿ ಜಾಗವನ್ನು ಕಾಯ್ದಿರಿಸಲಾಗಿದೆ. ಮುಖ್ಯಮಂತ್ರಿಯವರಮೂಲಸೌಕರ್ಯಅಭಿವೃದ್ಧಿಯೋಜನೆ 2025-26 ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿದಂತೆ, ‘ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ’ದಡಿ ಸಮಗ್ರ ಅಭಿವೃದ್ಧಿ ನಮ್ಮ ಸರ್ಕಾರದ ಗುರಿಯಾಗಿದೆ. ಈ ಕಾರ್ಯಕ್ರಮದಡಿ, ರಸ್ತೆ, ವಿದ್ಯುತ್, ನೀರು ಸೇರಿದಂತೆ ಮೂಲಭೂತ ಸೌಕರ್ಯಗಳ ಸಮಗ್ರ ಅಭಿವೃದ್ಧಿಗಾಗಿ ಜಿಲ್ಲೆಯ ಎರಡು ವಿಧಾನ ಸಭಾಕ್ಷೇತ್ರಗಳಿಗೆ ತಲಾ 50 ಕೋಟಿಯಂತೆ, ಒಟ್ಟು100 ಕೋಟಿ ರೂ.ಅನುದಾನವನ್ನು ಮೀಸಲಿರಿಸಲಾಗಿದೆ. ಡಿಸೆಂಬರ್ 2025 ರಲ್ಲಿ ಕರ್ನಾಟಕ ಭೂಕಂದಾಯ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ, ಕೊಡಗಿನ ದಶಕಗಳ ‘ಜಮ್ಮಬಾಣೆ’ ಸಮಸ್ಯೆಯನ್ನು ಬಗೆಹರಿಸಿ, ಪಹಣಿಯಲ್ಲಿ ಪಟ್ಟಿದಾರರ ಹೆಸರು ನಮೂದಿಸಲು ಕ್ರಮ ಕೈಗೊಳ್ಳಲಾಗಿದೆ. ಕೊಡಗಿನ ‘ಸಿ ಮತ್ತು ಡಿ’ ವರ್ಗದ ಜಮೀನುಗಳ ಸಮಸ್ಯೆ ಪರಿಹಾರಕ್ಕಾಗಿ ಈಗಾಗಲೇ ಸಮಿತಿ ರಚಿಸಲಾಗಿದ್ದು, ಸಮಿತಿಯ ವರದಿ ಬಂದ ಕೂಡಲೇ ಮುಂದಿನ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು. ನೂತನ ಕುಶಾಲನಗರ ಮತ್ತು ಪೊನ್ನಂಪೇಟೆ ತಾಲ್ಲೂಕುಗಳ ಆಡಳಿತಾತ್ಮಕ ಹಿತದೃಷ್ಟಿಯಿಂದ, ತಲಾ 8.60 ಕೋಟಿ ರೂ. ವೆಚ್ಚದಲ್ಲಿ ‘ಪ್ರಜಾಸೌಧ’ ನಿರ್ಮಾಣ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ‘ಭೂಸುರಕ್ಷಾ’ ಯೋಜನೆಯಡಿ ಜಿಲ್ಲೆಯ ಐದೂ ತಾಲ್ಲೂಕು ಕಚೇರಿಗಳ ದಾಖಲೆಗಳ ಸ್ಕ್ಯಾನಿಂಗ್ ಸಂಪೂರ್ಣಗೊಳಿಸಿ, ರಾಜ್ಯದಲ್ಲೇ ಪ್ರಥಮ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಪ್ರಸ್ತುತ ಜಿಲ್ಲಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಕಚೇರಿಗಳ ದಾಖಲೆಗಳ ಡಿಜಿಟಲೀಕರಣ ಪ್ರಗತಿಯಲ್ಲಿದೆ ಎಂದು ಸಚಿವ ಎನ್.ಎಸ್.ಭೋಸರಾಜು ವಿವರಿಸಿದರು.









