
ಸಿದ್ದಾಪುರ NEWS DESK ಜ.27 : ಕೊಡಗು ಜಿಲ್ಲೆಯಲ್ಲಿ ಲವ್ ಜಿಹಾದ್, ಮತಾಂತರ ಮತ್ತು ಲ್ಯಾಂಡ್ ಜಿಹಾದ್ ವ್ಯಾಪಕವಾಗಿದೆ ಎಂದು ಆರೋಪಿಸಿ ಹಿಂದೂ ಸುರಕ್ಷಾ ಸಮಿತಿ ಸಿದ್ದಾಪುರದಲ್ಲಿ ಪ್ರತಿಭಟನೆ ನಡೆಸಿತು. ಸಿದ್ದಾಪುರದ ಶ್ರೀಅಯ್ಯಪ್ಪ ದೇವಸ್ಥಾನದ ಬಳಿಯಿಂದ ಸಿದ್ದಾಪುರ ಬಸ್ ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸಮಾಜಘಾತುಕ ಶಕ್ತಿಗಳ ವಿರುದ್ಧ ಸರಕಾರ ಹಾಗೂ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸಿದ್ದಾಪುರ ಬಸ್ ನಿಲ್ದಾಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಹಿಂದೂ ಸುರಕ್ಷಾ ಸಮಿತಿಯ ಸಂಯೋಜಕ ಕುಕ್ಕೇರ ಅಜಿತ್ ಅವರು, ಲವ್ ಜಿಹಾದ್ ಹಾಗೂ ಲ್ಯಾಂಡ್ ಜಿಹಾದ್ ವಿರುದ್ಧ ಹಿಂದೂಗಳು ಜಾಗೃತರಾಗಬೇಕು ಎಂದು ಕರೆ ನೀಡಿದರು. ಪ್ರೀತಿ ಪ್ರೇಮದ ನಾಟಕವಾಡಿ ಹಿಂದೂ ಯುವತಿಯರನ್ನು ಲವ್ ಜಿಹಾದ್ ಮಾಡಲಾಗುತ್ತಿದೆ, ಕೊಡಗು ಜಿಲ್ಲೆಯಲ್ಲಿ ಲ್ಯಾಂಡ್ ಜಿಹಾದ್ ಕೂಡ ನಡೆಯುತ್ತಿದೆ ಎಂದು ಆರೋಪಿಸಿದರು. ಹಿಂದೂ ಪರ ಸಂಘಟನೆಗಳ ಮುಖಂಡ ಪುತ್ತೂರಿನ ಗುಣರಾಜ್ ಭಟ್ ಮಾತನಾಡಿ, ಲವ್ ಜಿಹಾದ್ ಕೇವಲ ಕೊಡಗು ಜಿಲ್ಲೆಗೆ ಮಾತ್ರ ಸೀಮಿತವಾಗಿಲ್ಲ, ಇಡೀ ದೇಶಕ್ಕೆ ವ್ಯಾಪಿಸಿದೆ. ಹಿಂದೂ ಯುವತಿಯರನ್ನು ಗುರಿ ಮಾಡಲಾಗುತ್ತಿದ್ದು, ಇಂತಹ ಪ್ರಕರಣಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ತಪ್ಪಿದಲ್ಲಿ ಹಿಂದೂ ಸಮಾಜ ಒಗ್ಗೂಡಿ ಬೃಹತ್ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ, ಮಹಿಳಾ ಬಿಜೆಪಿ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ಪ್ರಮುಖರಾದ ಉತ್ತಪ್ಪ, ರಮೇಶ್, ಚಂದ್ರು ಮತ್ತಿತರರು ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದರು.











