
ಮಡಿಕೇರಿ ಫೆ.28 NEWS DESK : ನಾಪೋಕ್ಲುವಿನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಅಪ್ಪಚ್ಚಿರ ಗೌತಮ್ ಮೇಲೆ ನಡೆದಿರುವ ಹಲ್ಲೆ ಪ್ರಕರಣ ಖಂಡನೀಯವಾಗಿದ್ದು, ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಎಂ.ಪಿ.ಸುನಿಲ್ ಸುಬ್ರಮಣಿ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಗಲಿನ ವೇಳೆಯಲ್ಲೇ ರಾಜಾರೋಷವಾಗಿ ಹಲ್ಲೆ ಮಾಡಲಾಗಿದೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಈ ರೀತಿಯ ಘಟನೆಗಳು ನಡೆಯುತ್ತಿರುತ್ತದೆ ಎಂದು ಆರೋಪಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ 100 ವರ್ಷ ತುಂಬಿದ ಹಿನ್ನೆಲೆ ಎಲ್ಲರೂ ಸೇರಿ ಪೀತಿ ಮತ್ತು ಶಾಂತಿಯಿಂದ ಹಿಂದೂ ಸಂಗಮ ಕಾರ್ಯಕ್ರಮವನ್ನು ರಾಜ್ಯವ್ಯಾಪಿ ಮಾಡಲಾಗುತ್ತಿದೆ. ಬಲ್ಲಮಾವಟಿಯಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದ್ದ ಹಿನ್ನೆಲೆ ಗೌತಮ್ ಪಿಕ್ ಅಪ್ ವಾಹನದಲ್ಲಿ ತೆರಳುತ್ತಿದ್ದರು, ಧ್ವನಿವರ್ಧಕವನ್ನು ಕೂಡ ಬಳಸಿರಲಿಲ್ಲ. ಈ ಹಂತದಲ್ಲಿ ದಾಳಿ ಮಾಡಲಾಗಿದ್ದು, ಹಲ್ಲೆ ಮಾಡಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು. ಸುಮಾರು ಎರಡು ಸಾವಿರ ಮಂದಿ ಸೇರಿ ನಾಪೋಕ್ಲುವಿನಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟಿಸಿದ ಪರಿಣಾಮ ಆರೋಪಿಗಳ ಬಂಧನವಾಗಿದೆ. ಪೊಲೀಸ್ ಇಲಾಖೆಗೆ ಸ್ವತಂತ್ರ್ಯವಾಗಿ ಕಾರ್ಯನಿರ್ವಹಿಸಲು ಆಡಳಿತ ನಡೆಸುವವರು ಬಿಡಬೇಕು ಎಂದು ಎಂ.ಪಿ.ಸುನಿಲ್ ಸುಬ್ರಮಣಿ ತಿಳಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಮಾತನಾಡಿ ಕಾಂಗ್ರೆಸ್ ಪಕ್ಷ ಮಗುವನ್ನು ಚಿವುಟಿ ತೊಟ್ಟಿಲು ತೂಗುವ ಕೆಲಸ ಮಾಡುತ್ತಿದೆ. ಒಂದು ವರ್ಗವನ್ನು ಮೆಚ್ಚಿಸುವ ಕಾಂಗ್ರೆಸ್ ಕಿಡಿಗೇಡಿಗಳಿಗೆ ಹಿಂಬಾಗಿಲಿನಿಂದ ಬೆಂಬಲ ನೀಡುತ್ತಿದೆ. ಎಲ್ಲಾ ಆರೋಪಿಗಳ ಬಂಧನವಾಗಿದೆ ಎಂದು ಹೇಳಿಕೆ ನೀಡುವ ಮೂಲಕ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಜಿಲ್ಲೆಯಲ್ಲಿ ಗಾಂಜಾ ಹಾವಳಿ ಮಿತಿ ಮೀರಿದ್ದು, ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಜಿಲ್ಲಾ ವಕ್ತಾರ ಬಿ.ಕೆ.ಅರುಣ್ ಕುಮಾರ್ ಮಾತನಾಡಿ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ 100 ವರ್ಷ ತುಂಬಿದ ಹಿನ್ನೆಲೆ ರಾಜ್ಯದೆಲ್ಲೆಡೆ ಯಶಸ್ವಿಯಾಗಿ ಹಿಂದೂ ಸಂಗಮ ಕಾರ್ಯಕ್ರಮ ನಡೆಯುತ್ತಿದೆ. ಇದನ್ನು ಸಹಿಸಲಾಗದ ಕಿಡಿಗೇಡಿಗಳು ನಾಪೋಕ್ಲುವಿನಲ್ಲಿ ಪೂರ್ವಯೋಜಿತವಾಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು. ಹಿಂದೂ ಸಂಗಮದ ಯಾವುದೇ ಕಾರ್ಯಕ್ರಮದಲ್ಲಿ ಅನ್ಯ ಕೋಮಿನವರ ವಿಚಾರವನ್ನು ಪ್ರಸ್ತಾಪಿಸುತ್ತಿಲ್ಲ. ಆದರೂ ಈ ರೀತಿಯ ದಾಳಿ ನಡೆಯುತ್ತಿದೆ, ಆದ್ದರಿಂದ ಹಿಂದೂಗಳು ಒಗ್ಗಟ್ಟು ಪ್ರದರ್ಶಿಸಬೇಕು ಮತ್ತು ಪ್ರಜ್ಞಾವಂತ ಮತದಾರರು ಎಚ್ಚೆತ್ತುಕೊಳ್ಳಬೇಕು ಎಂದು ಕರೆ ನೀಡಿದರು.
ಮಡಿಕೇರಿ ಗ್ರಾಮಾಂತರ ಮಂಡಲದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಮಾತನಾಡಿ ಹಿಂದೂಗಳನ್ನು ಗುರಿ ಮಾಡಿ ದಾಳಿ ನಡೆಯುತ್ತಿದೆ. ಜಿಲ್ಲೆಯಲ್ಲಿ ಗಾಂಜಾ ದಂಧೆಯನ್ನು ನಿಯಂತ್ರಿಸಲು ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಗಾಂಜಾ ಸೇವಿಸಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಪತ್ತೆ ಹಚ್ಚಲು ವಾಹನಗಳನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಮಾಧ್ಯಮ ವಕ್ತಾರ ಶಜಿಲ್ ಕೃಷ್ಣ ಉಪಸ್ಥಿತರಿದ್ದರು.









