

ಮಡಿಕೇರಿ NEWS DESK ಮಾ.22 : ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡುಬಿಟ್ಟು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ದುಬಾರೆ ಹಾಗೂ ಮತ್ತಿಗೋಡು ಶಿಬಿರದ ಸಾಕಾನೆಗಳಾದ ಅಭಿಮನ್ಯು, ಮಹೇಂದ್ರ, ರಂಜನ್, ಭೀಮಾ, ಸುಗ್ರೀವ ಹಾಗೂ ಹರ್ಷನ ಸಹಕಾರದಿಂದ ಸತತ 5 ಗಂಟೆಗಳ ಕಾರ್ಯಾಚರಣೆಯ ಬಳಿಕ ಕಾಡಾನೆ ಸೆರೆಯಾಯಿತು. ಚೆಂಬೆಬೆಳ್ಳೂರು ಗ್ರಾಮದ ಕಾಫಿ ತೋಟವೊಂದರ ಸಮೀಪ ಕಂಡುಬoದ ಕಾಡಾನೆಗೆ ವನ್ಯಜೀವಿ ವೈದ್ಯಾಧಿಕಾರಿ ಡಾ.ರಮೇಶ್ ಹಾಗೂ ಕುಶಾಲನಗರ ಉಪ ಅರಣ್ಯಾಧಿಕಾರಿ ಶಾರ್ಪ್ ಶೂಟರ್ ಕನ್ನಂಡ ರಂಜನ್ ಅವರು ಬಂದೂಕಿನ ಮೂಲಕ ಅರವಳಿಕೆ ನೀಡಿದರು. ಸರೆಯಾದ ಕಾಡಾನೆಯನ್ನು ಸಾಕಾನೆಗಳ ಸಹಕಾರದಿಂದ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸಲಾಯಿತು. ಚೆoಬೆಬೆಳ್ಳೂರು, ದೇವಣಗೇರಿ, ಬೆಳ್ಳರಿಮಾಡು, ಕುಕ್ಲೂರು, ಪೊದಕೋಟೆ, ಐಮಂಗಲ, ಮೈತಾಡಿ, ಕದನೂರು, ಬಿಳುಗುಂದ, ಹಾಲುಗುಂದ ಹಾಗೂ ಅಮ್ಮತಿ ಸುತ್ತಮುತ್ತಲ ಗ್ರಾಮಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆ ತೋಟಗಳಲ್ಲಿ ದಾಂಧಲೆ ನಡೆಸಿ ಕೃಷಿ ಫಸಲು ನಷ್ಟಕ್ಕೆ ಕಾರಣವಾಗಿತ್ತು ಮತ್ತು ಸ್ಥಳೀಯರ ಮೇಲೆ ದಾಳಿಗೂ ಯತ್ನಿಸಿತ್ತು. ಗ್ರಾಮಸ್ಥರ ಒತ್ತಾಯದ ಹಿನ್ನೆಲೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕಾಡಾನೆ ಸೆರೆಗೆ ಸೂಚನೆ ನೀಡಿದ್ದರು.
ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಾಲ್ ವೃಷ್ಣಿ ಹಾಗೂ ವೀರಾಜಪೇಟೆ ತಾಲ್ಲೂಕು ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯಿತು. ಮಡಿಕೇರಿ ಡಿಸಿಎಫ್ ರಮೇಶ್, ಎಸಿಎಫ್ ಗೋಪಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ವೀರಾಜಪೇಟೆ ವಲಯ ಅರಣ್ಯ ಅಧಿಕಾರಿ ಶಿವರಾಮ್, ತಿತಿಮತಿ ವಲಯ ಅರಣ್ಯ ಅಧಿಕಾರಿ ಗಂಗಾಧರ್, ಡಾ.ಚೆಟ್ಟಿಯಪ್ಪ, ಅರಣ್ಯ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ನೂರಕ್ಕೂ ಅಧಿಕ ಮಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.









