
ಮಡಿಕೇರಿ ಮಾ.23 NEWS DESK : ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯಲ್ಲಿ ರಸ್ತೆಗಳು ಸೇರಿದಂತೆ ಅನೇಕ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಕಾರ್ಯ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರ ಅಧಿಕಾರವಧಿಯಲ್ಲೇ ನಡೆದಿದೆ. ಆದರೆ ಕಾಂಗ್ರೆಸ್ಸಿಗರು ಕಳೆದ 20 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲವೆಂದು ಸುಳ್ಳು ಹೇಳಿಕೆ ನೀಡುವ ಮೂಲಕ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಬಿಜೆಪಿ ಎಸ್.ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು 2016ರಲ್ಲಿ ಆಗಿನ ಶಾಸಕರಾದ ಕೆ.ಜಿ.ಬೋಪಯ್ಯ ಅವರು ವಿರಾಜಪೇಟೆ- ಕರಡ ರಸ್ತೆಯನ್ನು ಜಿಲ್ಲಾ ಮುಖ್ಯ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಿ ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯ ಸಾರ್ವಜನಿಕರಿಗೆ ಉತ್ತಮ ದರ್ಜೆಯ ರಸ್ತೆಯನ್ನು ನಿರ್ಮಾಣ ಮಾಡಲು ಅಡಿಗಲ್ಲು ಹಾಕಿದರು. ಇದೇ ಅವಧಿಯಲ್ಲಿ 3 ಕಿ.ಮೀ ಉತ್ತಮ ರಸ್ತೆಯನ್ನು ಮರು ಡಾಂಬರೀಕರಣ ಮಾಡಿ ಅನುಕೂಲ ಕಲ್ಪಿಸಿಕೊಟ್ಟರು. ಇದೀಗ ಕಾಂಗ್ರೆಸ್ ಸರಕಾರ ಬಂದ ನಂತರ ಕಳೆದ ಮೂರು ವರ್ಷಗಳಲ್ಲಿ ಒಂದು ಕಿ.ಮೀ 350 ಮೀಟರ್ ರಸ್ತೆಯನ್ನು ನಿರ್ಮಾಣ ಮಾಡಿ ಕಳೆದ 20 ವರ್ಷಗಳಿಂದ ಇಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲವೆಂದು ಗ್ರಾ.ಪಂ ಮಾಜಿ ಸದಸ್ಯರು ನೀಡಿರುವ ಹೇಳಿಕೆ ಬಾಲಿಶವಾಗಿದೆ ಎಂದು ಟೀಕಿಸಿದ್ದಾರೆ. ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರು ನೂರಾರು ಕೋಟಿ ರೂ. ಅನುದಾನವನ್ನು ತಂದು ಗ್ರಾಮದ ಅಭಿವೃದ್ಧಿಗೆ ಸಹಕಾರ ನೀಡಿದ್ದಾರೆ. ಇದರ ಪರಿಣಾಮ ಗ್ರಾಮೀಣ ರಸ್ತೆಗಳು ಕೂಡ ಅಭಿವೃದ್ಧಿಯಾಗಿವೆ. ಕೆದಮುಳ್ಳೂರು- ಕಡಂಗ ರಸ್ತೆಯನ್ನು ಲೋಕೋಪಯೋಗಿ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಿದ ಹೆಗ್ಗಳಿಕೆ ಕೆ.ಜಿ.ಬೋಪಯ್ಯ ಅವರಿಗೆ ಸಲ್ಲುತ್ತದೆ. ಸುಮಾರು 13.5 ಕಿ.ಮೀ ರಸ್ತೆಯನ್ನು ಡಾಂಬರೀಕರಣ ಮಾಡಲಾಗಿತ್ತು. ಉಳಿದ ಕೇವಲ ಒಂದೂವರೆ ಕಿ.ಮೀ ರಸ್ತೆಯನ್ನು ಪೂರ್ಣಗೊಳಿಸಲು ಮೂರು ವರ್ಷ ಕಾದಿರುವ ಈಗಿನ ಕಾಂಗ್ರೆಸ್ ಸರಕಾರ ಕೊಡಗಿನಲ್ಲಿ ಯಾವುದೇ ಹೊಸ ರಸ್ತೆ ಕಾಮಗಾರಿಯನ್ನು ನಿರ್ವಹಿಸದೆ ಸಾರ್ವಜನಿಕರ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ. ಕೆ.ಜಿ.ಬೊಪ್ಪಯ್ಯ ಅವರು ಜನಪರ ಕಾಳಜಿಯಿಂದ ಕೋಟ್ಯಾಂತರ ಅನುದಾನದಲ್ಲಿ ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಕೇವಲ ರಾಜಕೀಯ ಕಾರಣಕ್ಕಾಗಿ ಇವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವುದು ಸರಿಯಲ್ಲ. ರಾಜ್ಯದಲ್ಲಿ ಬಹುಮತದ ಕಾಂಗ್ರೆಸ್ ಸರಕಾರವಿದ್ದು, ಉಳಿದಿರುವ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆ ಹೊರತು ಕೇವಲ ಪ್ರಚಾರಕ್ಕಾಗಿ ಜನರ ಹಾದಿ ತಪ್ಪಿಸಬಾರದು ಎಂದು ಒತ್ತಾಯಿಸಿದ್ದಾರೆ. ಗ್ರಾಮಕ್ಕೆ ಹೊಸ ಯೋಜನೆಗಳನ್ನು ತಂದು ಅಭಿವೃದ್ಧಿ ಕಾರ್ಯದಲ್ಲಿ ತೊಡಗುವ ಜನಪ್ರತಿನಿಧಿಗಳ ಬಗ್ಗೆ ನಮಗೆ ಗೌರವವಿದೆ. ಈಗಾಗಲೇ ಗ್ರಾ.ಪಂ ವ್ಯಾಪ್ತಿಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಅತ್ಯಂತ ಗೌರವದಿಂದ ಸ್ವಾಗತಿಸುತ್ತೇವೆ, ಇದಕ್ಕೆ ಸಹಕರಿಸಿದ ಶಾಸಕರನ್ನು ಅಭಿನಂದಿಸುತ್ತೇವೆ. ಉತ್ತಮ ಕಾರ್ಯಗಳಿಗೆ ನಾವು ಸದಾ ನಿಮ್ಮ ಜೊತೆಗಿರುತ್ತೇವೆ. ಆದರೆ ಯಾವುದೇ ಅಭಿವೃದ್ಧಿ ಮಾಡದೆ ಹಳೆಯ ಕಾಮಗಾರಿಯನ್ನು ಮುಂದುವರಿಸಿ ಇದುವರೆಗೆ ಯಾವುದೇ ಪೂರ್ಣ ಪ್ರಮಾಣದ ಹೊಸ ಕೆಲಸ ಮಾಡದೆ ಕಾಲಹರಣ ಮಾಡುತ್ತಾ ಜನರ ಹಾದಿ ತಪ್ಪಿಸುವ ಹೇಳಿಕೆಗಳನ್ನು ನೀಡುವುದನ್ನು ಖಂಡಿಸುವುದಾಗಿ ಎಂ.ಎಂ.ಪರಮೇಶ್ವರ್ ತಿಳಿಸಿದ್ದಾರೆ.









