
ಸೋಮವಾರಪೇಟೆ ಏ.24 NEWS DESK : ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ದೊಡ್ಡಮನೆಕೊಪ್ಪ, ಊರೊಳಕೊಪ್ಪ, ಸಿಂಗನಳ್ಳಿ, ನಡ್ಲಕೊಪ್ಪ, ಇನಕನಹಳ್ಳಿ, ಹರಪಳ್ಳಿ, ವಣಗೂರುಕೊಪ್ಪ, ಶುಭಾಷ್ನಗರ, ಕರಡಿಕೊಪ್ಪ, ದೊಡ್ಡತೋಳೂರು, ಚಿಕ್ಕತೋಳೂರು, ಗ್ರಾಮಗಳ ವ್ಯಾಪ್ತಿಗೆ ಒಳಪಡುವ ನಿವಾಸಿಗಳು ಸುಗ್ಗಿ ಉತ್ಸವದಲ್ಲಿ ದೇವಿಗೆ ಮಡೆ ಅರ್ಪಿಸುವ ಮೂಲಕ ಗ್ರಾಮದ ಸಮೃದ್ಧಿಗಾಗಿ, ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸುಗ್ಗಿ ಕುಣಿತ, ಗ್ರಾಮಸ್ಥರ ವಾದ್ಯ ಕುಣಿತ ಉತ್ಸವದಲ್ಲಿ ಆಕರ್ಷಣಿಯಾವಾಗಿತ್ತು. ಮಕ್ಕಳು, ಪುರುಷರು, ಮಹಿಳೆಯರು ಸಂಪ್ರಾದಾಯದಂತೆ ಸುಗ್ಗಿ ಕುಣಿತದಲ್ಲಿ ಪಾಲ್ಗೊಂಡರು. ಉತ್ಸವ ಮೂರ್ತಿಯನ್ನು ಅಡ್ಡಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ಸುಗ್ಗಿ ಕಟ್ಟೆಯ ಮುಖ್ಯ ರಂಗಕ್ಕೆ ಪ್ರದಕ್ಷಿಣೆ ಹಾಕಲಾಯಿತು. ಹರಕೆ ಮಾಡಿಕೊಂಡ ಭಕ್ತರು ಈಡುಗಾಯಿ ಸೇವೆ ಅರ್ಪಿಸಿದರು. ಮಹಿಳೆಯರು, ಮಕ್ಕಳು, ಹಿರಿಯರು ಉತ್ಸವದಲ್ಲಿ ಭಾಗವಹಿಸಿ ಗ್ರಾಮದೇವತೆಗೆ ಇಷ್ಟಾರ್ಥಗಳ ನೆರವೇರಿಕೆಗೆ ಪ್ರಾರ್ಥಿಸಿದರು. ಕುಟುಂಬ ಸಮೇತ ತವರಿನ ಸುಗ್ಗಿಯಲ್ಲಿ ಭಾಗವಹಿಸುವುದು, ಗ್ರಾಮದ ಹೆಣ್ಣುಮಕ್ಕಳಿಗೆ ವಿಶೇಷ ದಿನ. ಈ ಭಾಗದಿಂದ ಮದುವೆಯಾಗಿ ಹೋದ ಹೆಣ್ಣು ಮಕ್ಕಳು ತವರಿನ ಸುಗ್ಗಿಯಲ್ಲಿ ಸಂಭ್ರಮದಿಂದ ಪಾಲ್ಗೊಂಡರು. ದೇವತಾ ಕಾರ್ಯದಲ್ಲಿ ಪ್ರದಾನ ಅರ್ಚಕರಾಗಿ ಊರೊಳಗಿನಕೊಪ್ಪದ ಡಿ.ಎನ್. ಶಿವಕುಮಾರ್, ಊರು ಒಡೆಯನ ದೇವರ ಅರ್ಚಕರಾದ ದೊಡ್ಡಮನೆ ಕೊಪ್ಪದ ಡಿ.ಎಂ.ದಿಲೀಪ್, ಮದನೆ ದೇವರ ಅರ್ಚಕರಾಗಿ ಶಿವಕುಮಾರ್, ಸುಗ್ಗಿ ಉತ್ಸವ ಸಮಿತಿಯ ಅಧ್ಯಕ್ಷ ಡಿ.ಎನ್. ರಾಜ್ ಗೋಪಾಲ್, ಕಾರ್ಯದರ್ಶಿ ಎಚ್. ಜೆ, ಮಹೇಶ್, ಖಜಾಂಚಿ ಎಂ.ಈ. ಕೃಷ್ಣಪ್ಪ, ಡಿ.ಪಿ.ಕುಶಾಲಪ್ಪ ಮತ್ತಿತರರು ಸುಗ್ಗಿಯ ಉಸ್ತುವಾರಿ ವಹಿಸಿದ್ದರು. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉತ್ಸವದಲ್ಲಿ ಭಾಗವಹಿಸಿದ್ದರು.









