
ಮಡಿಕೇರಿ ಏ.27 NEWS DESK : ಮಹಿಳೆಯರ ಬಗ್ಗೆ ನೈಜ ಕಾಳಜಿ ಇಲ್ಲದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡುವಲ್ಲಿ ವಿಫಲವಾಗಿದೆ. ಈ ವಿಚಾರದಲ್ಲಿ ಸುಳ್ಳು ಹೇಳುತ್ತಿರುವ ಕೇಂದ್ರ ಸರಕಾರ ಕಾಂಗ್ರೆಸ್ ವಿರುದ್ಧ ಗೂಬೆ ಕೂರಿಸುವ ಯತ್ನ ಮಾಡುತ್ತಿದೆ ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಹಾಗೂ ಮಹಿಳಾ ಕಾಂಗ್ರೆಸ್ ನ ಕೊಡಗು ಉಸ್ತುವಾರಿ ಮಮತಾ ಗಟ್ಟಿ ಅವರು ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಹಿಳಾ ಮೀಸಲಾತಿ ಪರ ಸುಮಾರು 10ಲಕ್ಷ ಸಹಿ ಸಂಗ್ರಹದ ಗುರಿಯೊಂದಿಗೆ ಮಹಿಳಾ ಕಾಂಗ್ರೆಸ್ ರಾಜ್ಯವ್ಯಾಪಿ ಅಭಿಯಾನ ನಡೆಸುತ್ತಿದೆ ಎಂದರು. ಭಾರತದ ರಾಜಕೀಯ ಮತ್ತು ಸಾಮಾಜಿಕ ಇತಿಹಾಸದಲ್ಲಿ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ನೀಡುವಲ್ಲಿ ಕಾಂಗ್ರೆಸ್ ಪಕ್ಷವು ಮಹತ್ತರ ಪಾತ್ರ ವಹಿಸಿದೆ. ಆದರೆ ಮಹಿಳಾ ಸಬಲೀಕರಣಕ್ಕೆ ಯಾವುದೇ ಕೊಡುಗೆ ನೀಡದ ಪ್ರಧಾನಿ ಮೋದಿ ನೇತೃತ್ವದ ಸರಕಾರ ಸುಳ್ಳು ಹೇಳುತ್ತಾ ಕಾಲಹರಣ ಮಾಡುತ್ತಿದೆ ಎಂದು ಟೀಕಿಸಿದರು. ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರು ನೀಡಿದ ಮಹಿಳಾ ಸಬಲೀಕರಣದ ಕಾರ್ಯಕ್ರಮಗಳಿಂದಾಗಿ ಪ್ರತಿಯೊಂದು ಕ್ಷೇತ್ರದಲ್ಲೂ ಇಂದು ಮಹಿಳೆಯರು ಸಮಾನ ಅವಕಾಶಗಳನ್ನು ಪಡೆಯುತ್ತಿದ್ದಾರೆ. ಇಂದಿರಾ ಗಾಂಧಿ ಅವರ ಪರಿಕಲ್ಪನೆಯ ಅಂಗನವಾಡಿಗಳಿಂದ ಲಕ್ಷಾಂತರ ಮಂದಿ ಉದ್ಯೋಗಾವಕಾಶ ಪಡೆದುಕೊಂಡಿದ್ದಾರೆ. ಸ್ವಸಹಾಯ ಸಂಘಗಳ ರಚನೆಯಿಂದ ಮಹಿಳೆಯರು ಸಂಘಟಿತರಾಗಿದ್ದಾರೆ. ಆರೋಗ್ಯ ಮತ್ತು ಶಿಕ್ಷಣಕ್ಕೆ ಕಾಂಗ್ರೆಸ್ ಸರಕಾರ ಒತ್ತು ನೀಡಿದ ಪರಿಣಾಮವಾಗಿ ಇಂದು ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ಸಾಗಿಸುತ್ತಿದ್ದಾರೆ. ರಾಜಕೀಯವಾಗಿಯೂ ಸಬಲರಾಗಿ ಅಧಿಕಾರದಲ್ಲಿದ್ದಾರೆ. ಆದರೆ ಮಹಿಳೆಯರ ಬಗ್ಗೆ ಕಾಳಜಿಯೇ ಇಲ್ಲದ ಈಗಿನ ಕೇಂದ್ರ ಸರಕಾರ ಶೇ.33 ಮೀಸಲಾತಿಯ ವಿಧೇಯಕಕ್ಕೆ ಸೋಲಾಗುತ್ತದೆ ಎಂದು ತಿಳಿದುಕೊಂಡೇ ಕ್ಷೇತ್ರ ಪುನರ್ ವಿಂಗಡಣೆಯ ವಿಚಾರವನ್ನು ಕೂಡ ಪ್ರಸ್ತಾಪಿಸಿತು. ಆದರೆ ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ಅಷ್ಟೊಂದು ಸುಲಭವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷ ಬಹಳ ಹಿಂದಿನಿಂದಲೂ ಮಹಿಳಾ ಸಮಾನತೆ ಮತ್ತು ಶೇ.33ರ ಮೀಸಲಾತಿ ಪರ ಇದ್ದು, ಅಧಿಕಾರದಲ್ಲಿ ಇದ್ದಾಗಲೆಲ್ಲ ಮಹಿಳಾ ಸಬಲೀಕರಣಕ್ಕೆ ಪೂರಕವಾದ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಧಾನಮಂತ್ರಿ ಮೋದಿ ಅವರಿಗೆ ಈ ದೇಶದ ಮಹಿಳೆಯರ ಬಗ್ಗೆ ನೈಜ ಕಾಳಜಿ ಇದ್ದರೆ ಸುಳ್ಳು ಹೇಳುವುದನ್ನು ಬಿಟ್ಟು ಶೀಘ್ರ ಶೇ.33 ರಷ್ಟು ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲಿ ಎಂದು ಮಮತಾ ಗಟ್ಟಿ ಒತ್ತಾಯಿಸಿದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮಹಿಳಾ ಮೀಸಲಾತಿ ಕುರಿತು ಸುಳ್ಳು ಆರೋಪಗಳನ್ನು ಮಾಡಿ ಕಾಂಗ್ರೆಸ್ ವಿರುದ್ಧ ಗೂಬೆ ಕೂರಿಸುತ್ತಿದ್ದಾರೆ. ಕಾಂಗ್ರೆಸ್ ಹಾಕಿಕೊಟ್ಟ ಮಹಿಳಾ ಸಬಲೀಕರಣದ ಅಡಿಪಾಯವೇ ಶೋಭಾ ಅವರು ಇಂದು ಸಚಿವರಾಗಿ ಅಧಿಕಾರದಲ್ಲಿರಲು ಕಾರಣವಾಗಿದೆ. ಶೋಭಾ ಕರಂದ್ಲಾಜೆ ಅವರಿಗೆ ಪ್ರಾಮಾಣಿಕತೆ ಇದ್ದರೆ ಮಹಿಳೆಯರ ಪರ ಧ್ವನಿ ಎತ್ತಲಿ ಎಂದು ಸವಾಲು ಹಾಕಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಅವರು ಮಾತನಾಡಿ ಶೇ.33ರ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲಾಗಿರುವುದರಿಂದ ಪಕ್ಷಾತೀತವಾಗಿ ದೇಶದ ಸರ್ವ ಮಹಿಳೆಯರಿಗೆ ಬೇಸರವಾಗಿದೆ. ಮಹಿಳಾ ಸಮಾನತೆಗಾಗಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಅಪಾರ ಕೊಡುಗೆಯನ್ನು ನೀಡಿದ್ದಾರೆ. ಪ್ರಸ್ತುತ ಇರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಹಿಳೆಯರ ಬಗ್ಗೆ ನೈಜ ಪ್ರೀತಿಯೇ ಇಲ್ಲವೆಂದು ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ ಜಿ.ಆರ್, ಪ್ರಧಾನ ಕಾರ್ಯದರ್ಶಿ ರೂಪ ಭೀಮಯ್ಯ, ಉಪಾಧ್ಯಕ್ಷೆ ಶೀಲಾ ಡಿಸೋಜ ಹಾಗೂ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷೆ ಜೆ.ಫಿಲೋಮಿನಾ ಉಪಸ್ಥಿತರಿದ್ದರು.









