
ಮಡಿಕೇರಿ ಮೇ 12 NEWS DESK : ಶ್ರೇಷ್ಠ ಅಂಕಗಳಿಂದ ಮಾತ್ರವೇ ಜೀವನವನ್ನು ನಿರ್ಧರಿಸಲು ಸಾಧ್ಯವಿಲ್ಲ, ಇದರ ಹೊರತಾಗಿಯೂ ಒಂದು ಬದುಕಿದೆ ಎಂಬುವುದನ್ನು ಪ್ರತಿಯೊಬ್ಬ ವಿದ್ಯಾರ್ಥಿ ಅರಿತುಕೊಳ್ಳಬೇಕು. ಜೀವನ ಕೇವಲ ಅಂಕಗಳಿಗೆ ಸೀಮಿತವಾಗಬಾರದು ಎಂದು ಲೇಖಕ ಹಾಗೂ ಪ್ರಾಧ್ಯಾಪಕ ಅರ್ಜುನ್ ಮೌರ್ಯ ಅವರು ಸಲಹೆ ನೀಡಿದ್ದಾರೆ. ಉಮ್ಮತ್ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ನಡೆದ ಶಿಕ್ಷಣ ಮೇಳ, ಪ್ರತಿಭಾ ಪುರಸ್ಕಾರ, 10ನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.100ರಷ್ಟು ಸಾಧನೆ ಮಾಡಿದ ಶಾಲಾ ಕಾಲೇಜುಗಳ ಪ್ರಾಂಶುಪಾಲರನ್ನು, ಸಾಧಕರನ್ನು ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಅವಕಾಶಗಳ ಜೊತೆಯಲ್ಲಿಯೇ ಸವಾಲುಗಳಿವೆ. ಅವುಗಳ ಬಗ್ಗೆಯೂ ಜವಾಬ್ದಾರಿ ವಹಿಸಬೇಕು. ಶಿಕ್ಷಣ ಮಾತ್ರವೇ ವ್ಯಕ್ತಿಯ ಧರ್ಮವನ್ನು ನಿರ್ಧರಿಸುತ್ತದೆಯೇ ಹೊರತು, ಚೌಕಟ್ಟಿನ ಧರ್ಮ ಶಿಕ್ಷಣವನ್ನು ನಿರ್ಧರಿಸುವುದಿಲ್ಲ ಎಂದು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಪೋಷಕರ ನಿರೀಕ್ಷೆಗಳ ಮೇಲೆ ಕಲ್ಲು ಎತ್ತಿ ಹಾಕುವ ಕೆಲಸ ಮಾಡಬಾರದು. ಇಂದು ಶಿಕ್ಷಣ ಕ್ಷೇತ್ರ ಕೂಡ ಮಾಫಿಯಾದಲ್ಲಿ ಸಿಲುಕಿಕೊಂಡಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಬದುಕಿನ ಕುರಿತು ಮಾರ್ಗದರ್ಶನ ಮಾಡುವಲ್ಲಿ ಬೋಧಕ ವರ್ಗ ಕೂಡ ಎಡವುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಉಮ್ಮತ್ ಒನ್ ಸಂಸ್ಥೆ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರೇರಣೆ, ಪ್ರೋತ್ಸಾಹ ನೀಡುವ ಮೂಲಕ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಎಂದು ಅರ್ಜುನ್ ಮೌರ್ಯ ಮೆಚ್ಚುಗೆ ವ್ಯಕ್ತಪಡಿಸಿದರು. *ಸೌಲಭ್ಯ ಬಳಸಿಕೊಳ್ಳಿ* ಕೊಡ್ಲಿಪೇಟೆಯ ಎಪಿಜೆ ಅಬ್ದುಲ್ ಕಲಾಂ ಶಾಲೆಯ ಪ್ರಾಂಶುಪಾಲ ಡಾ.ಗುರುಸ್ವಾಮಿ ಅವರು ಮಾತನಾಡಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಮೂಲಕ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ನೆರವಿಗೆ ಹಲವು ಸೌಲಭ್ಯಗಳನ್ನು ಸರಕಾರ ಒದಗಿಸುತ್ತಿದೆ. ಇದನ್ನು ಸದುಪಯೋಗ ಪಡಿಸಿಕೊಂಡು ಶೈಕ್ಷಣಿಕ ಸಾಧನೆ ಮಾಡಬೇಕು ಎಂದು ಹೇಳಿದರು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಹಲವು ಶಾಲಾ ಕಾಲೇಜುಗಳಿದ್ದು, ಬಡ ಮಕ್ಕಳಿಗೆ ಉಚಿತವಾಗಿ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಇದೀಗ ಸಿಬಿಎಸ್ಸಿ ಶಿಕ್ಷಣವನ್ನು ಕೂಡ ಜಾರಿಗೆ ತರಲಾಗಿದೆ. ಕುಶಾಲನಗರದಲ್ಲೂ ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ಮಹಿಳಾ ಕಾಲೇಜು ಆರಂಭಿಸಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು. *ಹೆಣ್ಣಿಗೆ ಶಿಕ್ಷಣವೇ ಮುಖ್ಯ* ನ್ಯಾಯಾಧೀಶೆ ಸಯಿದಾ ಕಶ್ಮೀರ ಸಿಮ್ರಾನ್ ಅವರು ಮಾತನಾಡಿ, ಪ್ರಪಂಚದ ಯಾವುದೇ ಮೂಲೆಯಲ್ಲಿಯೂ ಬದುಕು ಕಟ್ಟಿಕೊಳ್ಳಲು ಶಿಕ್ಷಣದಿಂದ ಮಾತ್ರವೇ ಸಾಧ್ಯ. ಅದರಲ್ಲೂ ಹೆಣ್ಣಿಗೆ ಶಿಕ್ಷಣವೇ ಅತೀ ಮುಖ್ಯವಾಗಿದ್ದು, ಈ ಕುರಿತು ವಿದ್ಯಾರ್ಥಿಗಳು ಹಾಗೂ ಪೋಷಕರು ಮನವರಿಕೆ ಮಾಡಿಕೊಳ್ಳಬೇಕು ಎಂದರು. ಪತ್ರಕರ್ತ ಇಸ್ಮಾಯಿಲ್ ಕಂಡಕರೆ ಮಾತನಾಡಿ, ಇಂದು ಪೋಷಕರು ತಮ್ಮ ಮಕ್ಕಳನ್ನು ದೂರದ ಊರುಗಳ ಪ್ರಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಸೇರ್ಪಡೆ ಮಾಡುತ್ತಿದ್ದಾರೆ. ಇದು ಸಂತೋಷದ ವಿಚಾರವಾದರು ತಮ್ಮ ಮಕ್ಕಳ ದಿನಚರಿಯನ್ನು ಗಮನಿಸುವಲ್ಲಿ ವಿಫಲರಾಗುತ್ತಿದ್ದಾರೆ. ಇದರಿಂದ ಪೋಷಕರ ನಿರೀಕ್ಷೆಗಳು ಹುಸಿಯಾಗುತ್ತಿದೆ ಎಂದು ಉದಾಹರಣೆಗಳ ಸಹಿತ ವಿವರಿಸಿದರು. ಮಕ್ಕಳ ಶೈಕ್ಷಣಿಕ ಪ್ರಗತಿಯ ಜೊತೆಯಲ್ಲಿ ಅವರ ಚಟುವಟಿಕೆಗಳ ಮೇಲೂ ಪೋಷಕರು ಕಣ್ಣಿಡಬೇಕು ಎಂದು ಸಲಹೆ ನೀಡಿದರು. *ಸಾಧಕರಿಗೆ ಸನ್ಮಾನ* ಕಾರ್ಯಕ್ರಮದಲ್ಲಿ ಉಮ್ಮತ್ ಒನ್ ಕೊಡಗು ಸಂಸ್ಥೆ ಮೂಲಕ ನ್ಯಾಯಾಧೀಶೆ ಸಯಿದಾ ಕಶ್ಮೀರ ಸಿಮ್ರಾನ್, ಪತ್ರಕರ್ತ ಇಸ್ಮಾಯಿಲ್ ಕಂಡಕರೆ, ಮೈಸೂರಿನ ಉದ್ಯಮಿ ಸಿದ್ದಿಕ್ ಹಂಸ ಹಾಗೂ ಸಿವಿಲ್ ಇಂಜಿನಿಯರ್ ಅಲ್ಫೀಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. *ಶೈಕ್ಷಣಿಕ ಸಾಧನೆಗೆ ಸನ್ಮಾನ* 10ನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದು ಸಾಧನೆ ತೋರಿದ ಜಿಲ್ಲೆಯ ಐವರು ವಿದ್ಯಾರ್ಥಿಗಳನ್ನು ಗಣ್ಯರು ಸನ್ಮಾನಿಸಿ ಗೌರವಿಸಿ ಪ್ರೋತ್ಸಾಹ ಧನ ವಿತರಿಸಿದರು. ಇದೇ ವೇಳೆ ಜಿಲ್ಲೆಯ 200 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವಿಗೆ ಪ್ರೋತ್ಸಾಗ ಧನ ವಿತರಿಸಲಾಯಿತು. 10ನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.100 ಫಲಿತಾಂಶ ಪಡೆಯುವ ಮೂಲಕ ಸಾಧನೆ ಮಾಡಿದ ಜಿಲ್ಲೆಯ ಒಟ್ಟು 47 ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳ ಪ್ರಾಂಶುಪಾಲರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಇದೇ ಸಂದರ್ಭ ಪುಣೆಯ ಅನೀಸ್ ಡಿಫೆನ್ಸ್ ಕೆರಿಯರ್ ಇನ್ಸಿಟ್ಯೂಟ್ ಸಂಸ್ಥಾಪಕ ಅನೀಸ್ ಕುಟ್ಟಿ ಹಾಗೂ ವೃತ್ತಿ ಮಾರ್ಗದರ್ಶಕರು ಮತ್ತು ಪ್ರೇರಕ ಭಾಷಣಕಾರ ರಫೀಕ್ ಮಾಸ್ಟರ್ ಅವರುಗಳು ಶೈಕ್ಷಣಿಕ ವಲಯದಲ್ಲಿರುವ ಅವಕಾಶ, ವಿವಿಧ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೇರ್ಪಡೆಯಾಗುವ ಬಗೆ, ವೃತ್ತಿ ಶಿಕ್ಷಣ, ಸರಕಾರದ ಸೌಲಭ್ಯಗಳು, ಉದ್ಯೋಗಾವಕಾಶ ಮತ್ತಿತ್ತರ ವಿಚಾರಗಳ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಾರ್ಗದರ್ಶನ ನೀಡಿದರು.
ಉಮ್ಮತ್ ಒನ್ ಸಂಸ್ಥೆಯ ಪ್ರಮುಖರಾದ ಎಂ.ಎಂ.ಹಾರೂನ್, ಸಿಇಓ ತನ್ವೀರ್, ಅಬ್ದುಲ್ ಮಜೀದ್, ಖಾಲಿದ್ ಹಾಕತ್ತೂರು, ಅಬ್ದುಲ್ ಲತೀಫ್, ನಿಸಾರ್ ಅಹಮ್ಮದ್ ಮತ್ತಿತರರು ಉಪಸ್ಥಿತರಿದ್ದರು.









