
ಮಡಿಕೇರಿ ಮೇ 20 NEWS DESK : ಕನ್ನಡ ಭಾಷೆ, ನಾಡು-ನುಡಿ ಬಗ್ಗೆ ಪ್ರತಿಯೊಬ್ಬರಲ್ಲೂ ಅಭಿಮಾನ ಮತ್ತು ಸ್ವಾಭಿಮಾನ ಇರಬೇಕು ಎಂದು ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ಕೆ.ಜಿ.ಬೋಪಯ್ಯ ಅವರು ತಿಳಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕಡಂಗ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ವೇದಿಕೆಯಲ್ಲಿ ಬುಧವಾರ ನಡೆದ ತಾಲ್ಲೂಕಿನ 12ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಮೊದಲ ಸ್ಥಾನ. ಆದರೆ ವಾಸ್ತವ ಪರಿಸ್ಥಿತಿ ಹೇಗಿದೆ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು. ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಸಹ ಸ್ಥಳೀಯ ಹಾಗೂ ನಾಡಿನ ಭಾಷೆಗಳು ಬಲಯುತವಾಗಿದೆ. ಆದರೆ ನಗರ, ಮಹಾನಗರ ಪ್ರದೇಶಗಳಲ್ಲಿ ಪರಿಸ್ಥಿತಿ ಯಾವ ರೀತಿ ಇದೆ ಎಂಬ ಬಗ್ಗೆ ಗಂಭೀರವಾಗಿ ಚಿಂತಿಸಬೇಕಿದೆ ಎಂದು ಕೆ.ಜಿ.ಬೋಪಯ್ಯ ಅವರು ಒತ್ತಿ ಹೇಳಿದರು. ಕನ್ನಡ ಭಾಷೆ ಬಗ್ಗೆ ತಾತ್ಸಾರ ಇರಬಾರದು. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕನ್ನಡ ಶಾಲೆಗಳ ಪರಿಸ್ಥಿತಿ ಹೇಗಿದೆ ಎಂಬ ಬಗ್ಗೆ ಚಿಂತಿಸಬೇಕಿದೆ ಎಂದರು. ಎಲ್ಲರಲ್ಲೂ ಸ್ವಾಭಿಮಾನ ಬಿತ್ತಬೇಕು. ಕನ್ನಡ, ಕೊಡವ, ಅರೆಭಾಷೆ ಜನರ ಅರೆಭಾಷೆ ಉಳಿಯಬೇಕು. ರಾಜ್ಯದಲ್ಲಿ ಇತರೆ ಭಾಷೆಗಳನ್ನು ಸಮಾನವಾಗಿ ಕಾಣುತ್ತೇವೆ. ಆದರೆ ಹತ್ತಿರದ ರಾಜ್ಯಗಳಿಗೆ ತೆರಳಿದಾಗ ಪರಿಸ್ಥಿತಿ ಬೇರೆ ಇದೆ ಎಂಬುದನ್ನು ಮನಗಾಣಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ಅವರು ಮಾತನಾಡಿ ಕನ್ನಡ ಭಾಷೆ, ನಾಡು-ನುಡಿ, ವಿಚಾರಧಾರೆಗಳು ಎಲ್ಲೆಡೆ ತಲುಪಿಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಸಹಕಾರಿ ಆಗಿದೆ ಎಂದರು. ಪುಸ್ತಕ ಬಿಡುಗಡೆ, ಸ್ಮರಣ ಸಂಚಿಕೆ ಹೊರತರುವುದು, ಕವಿಗೋಷ್ಠಿ, ವಿಚಾರಗೋಷ್ಠಿ, ಕೃಷಿ, ಸಾಹಿತ್ಯ ಹೀಗೆ ಪ್ರತಿಯೊಂದು ಬಗ್ಗೆಯೂ ಸಾಹಿತ್ಯ ಸಮ್ಮೇಳನದಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಕನ್ನಡ ಜೊತೆಗೆ ಕೊಡವ, ಅರೆಭಾಷೆ ಸೇರಿದಂತೆ ಹಲವು ಭಾಷೆಗಳ ಬೆಳವಣಿಗೆಗೆ ಇಲ್ಲಿನ ಸ್ಥಳೀಯರು ಶ್ರಮಿಸಿದ್ದಾರೆ. ಅವರನ್ನು ಸದಾ ಸ್ಮರಿಸಬೇಕಿದ್ದು, ಆ ನಿಟ್ಟಿನಲ್ಲಿ ಯುವಜನರಿಗೆ ಪರಿಚಯಿಸುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು. ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ, ನಡಿಕೇರಿಯಂಡ ಚಿಣ್ಣಪ್ಪ, ಸೇರಿದಂತೆ ಹಲವರು ಕನ್ನಡ ಮತ್ತು ಕೊಡವ ಭಾಷೆ ಬೆಳವಣಿಗೆಗೆ ಶ್ರಮಿಸಿದ್ದು, ಸ್ಥಳೀಯ ಭಾಷೆ ಜೊತೆಗೆ ನಾಡುನುಡಿ ಭಾಷೆ ಬೆಳೆಸಬೇಕು ಎಂದರು. ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರು ಮಾತನಾಡಿ ನಾಡಿನಲ್ಲಿ ಕನ್ನಡ ಭಾಷೆಗೆ ಮೊದಲ ಸ್ಥಾನವಿದೆ. ಅದನ್ನು ಉಳಿಸಿಕೊಂಡು ಹೋಗಬೇಕು. ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕು. ಕನ್ನಡ ಭಾಷೆಗೆ ಮತ್ತಷ್ಟು ಉತ್ತೇಜನ ನೀಡಬೇಕು ಎಂದರು. ತಾಲ್ಲೂಕು 12ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಐತಿಚಂಡ ರಮೇಶ್ ಉತ್ತಪ್ಪ ಅವರು ಮಾತನಾಡಿ ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದಲ್ಲಿ 19 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, ಇವರಲ್ಲಿ 18,678 ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡ ಭಾಷೆಯಲ್ಲಿಯೇ ಅನುತ್ತೀರ್ಣರಾಗಿರುವ ಬಗ್ಗೆ ಚಿಂತಿಸಬೇಕಿದೆ ಎಂದರು.
ನಮ್ಮದೇ ಭಾಷೆ, ನಮ್ಮದೇ ಉಸಿರಾಗಿರುವ ಕನ್ನಡದಲ್ಲಿ ನಮ್ಮ ಮಕ್ಕಳೇ ಅನುತ್ತೀರ್ಣರಾಗುತ್ತಿದ್ದಾರೆ. ಇದಕ್ಕೊಂದು ಪರಿಹಾರವೇನು ಎಂಬುದನ್ನು ಎಲ್ಲರೂ ಅವಲೋಕನ ಮಾಡಬೇಕಿದೆ ಎಂದರು. ನಾಡಿನ ಮಕ್ಕಳಿಗೆ ಕನ್ನಡ ಭಾಷೆ ಕಬ್ಬಿಣದ ಕಡಲೆಯೇ, ಪಠ್ಯ ಪುಸ್ತಕ ದೋಷವೇ, ಕಲಿಸುವಲ್ಲಿ ದೋಷವೇ, ಅಥವಾ ವ್ಯವಸ್ಥೆಯ ದೋಷವೇ ಎಂಬ ಬಗ್ಗೆ ಆತ್ಮವಲೋಕನ ಮಾಡಿಕೊಳ್ಳಬೇಕಿದೆ ಎಂದು ರಮೇಶ್ ಉತ್ತಪ್ಪ ಅವರು ಪ್ರತಿಪಾದಿಸಿದರು. ಕನ್ನಡ ಉಪ ಭಾಷೆಯಾಗಿ ಕನ್ನಡದೊಂದಿಗೆ ಬೆಳೆದು ಬಂದ ಗ್ರಾಮಾಂತರ ಪ್ರದೇಶಗಳಲ್ಲಿ ಇರುವ ಬುಡಕಟ್ಟು ಜನರ ಪರಿಸ್ಥಿತಿ ಬದಲಾಗಿಲ್ಲ. ಇಲ್ಲಿನ ಯರವರ ಸಂಖ್ಯೆ ಕಡಿಮೆಯಾಗುತ್ತಿದೆ. ಯರವರು ಸೇರಿದಂತೆ ಆದಿವಾಸಿ ಮಕ್ಕಳು ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಬೇಕು ಎಂದು ಸಲಹೆ ಮಾಡಿದರು.
ಕೊಡಗಿನಲ್ಲಿ ವಾಸಿಸುವ ಬುಡಕಟ್ಟು ಜನರಿಗೆ ಸ್ವಂತ ಜಾಗವಿಲ್ಲ. ಇಂದಿಗೂ ಸಹ ನಿವೇಶನಕ್ಕಾಗಿ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದಾರೆ. ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ ಎಂದರು. ಕೊಡಗು ಪ್ರವಾಸೋದ್ಯಮದಿಂದಾಗಿ ಎರಡನೇ ಗೋವಾ ಆಗುತ್ತಿದ್ದು, ಇದು ಒಳ್ಳೆಯ ಬೆಳವಣಿಗೆ ಅಲ್ಲ. ಇಲ್ಲಿನ ಪರಿಸರ ಮತ್ತು ಜಲಮೂಲಗಳನ್ನು ಉಳಿಸಬೇಕು. ಆ ನಿಟ್ಟಿನಲ್ಲಿ ಕೊಡಗು ಕೊಡಗಾಗಿ ಉಳಿಯುವಲ್ಲಿ ಎಲ್ಲರೂ ಗಮನಹರಿಸಬೇಕಿದೆ ಎಂದರು.
ಕೊಡವ, ಅರೆಭಾಷೆ, ತುಳು ಮತ್ತಿತರ ಕನ್ನಡ ಉಪ ಭಾಷೆಗಳಿಗೆ ಕನ್ನಡವೇ ಲಿಪಿಯಾಗಿದ್ದು, ಇದನ್ನು ಮುಂದುವರಿಸಿಕೊಂಡು ಹೋಗಬೇಕು. ಅದನ್ನು ಬಿಟ್ಟು ಪ್ರತ್ಯೇಕ ಲಿಪಿ ಅಗತ್ಯವಿಲ್ಲ ಎಂದು ಒತ್ತಿ ಹೇಳಿದರು. ಕೊಡವ ಭಾಷೆಗೆ ಪ್ರತ್ಯೇಕ ಲಿಪಿ ಅಳವಡಿಸುವ ಬಗ್ಗೆ ಹಿಂದಿನಿಂದಲೂ ಪ್ರಯತ್ನಗಳು ನಡೆದೇ ಇವೆ. ಆದರೆ ಇದು ಪರಿಪೂರ್ಣವಾಗಿಲ್ಲ. 1978 ರಲ್ಲಿ ವಿರಾಜಪೇಟೆಯಲ್ಲಿ ಮೊದಲ ಬಾರಿಗೆ ಕೊಡವ ತಕ್ ಪರಿಷತ್ತಿನ ಬೃಹತ್ ಸಮ್ಮೇಳನದಲ್ಲಿ ಖ್ಯಾತ ಸಾಹಿತಿಗಳು, ಸಂಶೋಧಕರು, ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಕೊಡವ ಭಾಷೆಗೆ ಪ್ರತ್ಯೇಕ ಲಿಪಿ ಬಳಸದೆ ಕನ್ನಡ ಲಿಪಿಯನ್ನೇ ಬಳಸಿಕೊಂಡು ಹೋಗಲು ನಿರ್ಧರಿಸಲಾಗಿತ್ತು ಎಂಬುದನ್ನು ಸ್ಮರಿಸಿದರು. ನಡಿಕೇರಿಯಂಡ ಚಿಣ್ಣಪ್ಪ ಅವರು ಕರಡ ಗ್ರಾಮ, ತಾಲ್ಲೂಕಿಗೆ, ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಅವರ ಹೆಸರಿನಲ್ಲಿ ವಸ್ತು ಸಂಗ್ರಹಾಲಯ ಆಗಬೇಕು ಎಂದು ರಮೇಶ್ ಉತ್ತಪ್ಪ ಅವರು ಒತ್ತಾಯಿಸಿದರು. ಕೊಡಗು ಜಿಲ್ಲೆಯಲ್ಲಿ ಸಾಹಿತ್ಯ ಮತ್ತು ಬರಹಗಾರರಿಗೆ ಇನ್ನಷ್ಟು ಪ್ರೋತ್ಸಾಹ ನೀಡಬೇಕು. ಕೊಡಗು ಜಿಲ್ಲೆಯಲ್ಲಿ ಪ್ರತೀ ಗ್ರಾಮದಲ್ಲಿಯೂ ಸಹ ದಾಖಲೀಕರಣ ಆಗಬೇಕು ಎಂದು ಸಲಹೆ ಮಾಡಿದರು. ಕೊಡಗಿನ ಗಾಂಧಿ ಪಂದ್ಯಂಡ ಬೆಳ್ಯಪ್ಪ ಅವರು ಕೊಡಗಿನ ಇತಿಹಾಸದ ಬಗ್ಗೆ ಸಮಗ್ರವಾಗಿ ಚಿತ್ರೀಸಿದ್ದಾರೆ. ಅದರಂತೆ ಅವುಗಳನ್ನು ಅಧ್ಯಯನ ಮಾಡಬೇಕು. ಹಾಗೆಯೇ ಶತಮಾನೋತ್ಸವ ಆಚರಿಸುವ ಶಾಲೆಗಳಲ್ಲಿ ಕನ್ನಡ ಹಬ್ಬವನ್ನು ಆಚರಿಸಬೇಕು ಎಂದರು. ತಾ.ಪಂ.ಇಒ ಶೇಖರ್ ಅವರು ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ತನವನ್ನು ಉಳಿಸಿಕೊಂಡು ಬೆಳೆಯಬೇಕು. ಮನೆಯಿಂದಲೇ ಕನ್ನಡ ಭಾಷೆ ಉಳಿಯಬೇಕು ಎಂದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಕಳುಹಿಸಿದ್ದ ಸಂದೇಶವನ್ನು ಬಾಳೆಯಡ ದಿವ್ಯ ಮಂದಪ್ಪ ಅವರು ಓದಿದರು. ಕಸಾಪ ತಾಲ್ಲೂಕು ನಿಕಟಪೂರ್ವ ಅಧ್ಯಕ್ಷರಾದ ಅಂಬೆಕಲ್ಲು ನವೀನ್, ಕಸಾಪ ಗೌರವ ಕಾರ್ಯದರ್ಶಿ ಮುನೀರ್ ಅಹಮದ್, ರೇವತಿ ರಮೇಶ್, ಕೋಶಾಧಿಕಾರಿ ಸಂಪತ್ ಕುಮಾರ್, ಸಂಘಟನಾ ಕಾರ್ಯದರ್ಶಿ ವಾಸು ರೈ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷರಾದ ಎಸ್.ಡಿ.ವಿಜೇತ್, ರಾಜೇಶ್ ಪದ್ಮನಾಭ, ಹೋಬಳಿ ಘಟಕದ ಅಧ್ಯಕ್ಷರಾದ ನೆರವಂಡ ಉಮೇಶ್, ಈರಮಂಡ ಹರಿಣಿ ವಿಜಯ್, ಎ.ಲೋಕೇಶ್ ಕುಮಾರ್ ಇತರರು ಇದ್ದರು. ಕೋಡಿರ ವಿನೋದ್ ನಾಣಯ್ಯ ಸ್ವಾಗತಿಸಿದರು. ಲಹರಿ ತಂಡದವರು ನಾಡಗೀತೆ ಮತ್ತು ರೈತಗೀತೆ ಹಾಡಿದರು. ಬಾಳೆಯಡ ದಿವ್ಯ ಮಂದಪ್ಪ ಮತ್ತು ಬಿದ್ದಂಡ ನಾಣಿ ದೇವಯ್ಯ ನಿರೂಪಿಸಿದರು. ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ವಂದಿಸಿದರು. ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಮಂಗಳವಾದ್ಯ, ಚೆಂಡೆವಾದ್ಯ, ಕಳಸ ಹೊತ್ತ ಮಹಿಳೆಯರು, ಸ್ಥಬ್ಧಚಿತ್ರಗಳು, ಗೊಂಬೆಗಳು, ಪೂಜಾ ಕುಣಿತ, ಡೊಳ್ಳು ಕುಣಿತ, ವೀರಗಾಸೆ, ಕೊಡಗಿನ ವಾಲಗ, ಬ್ಯಾಂಡ್ ಸೆಟ್, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಜೀವಿನಿ ಮಹಿಳಾ ಒಕ್ಕೂಟ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘ, ಅಂಗನವಾಡಿ ಸಂಘಟನೆ, ಸ್ತ್ರೀಶಕ್ತಿ ಒಕ್ಕೂಟ, ಆಶಾ ಕಾರ್ಯಕರ್ತೆಯರು, ಶಿಕ್ಷಕರುಗಳು, ಸಂಘ ಸಂಸ್ಥೆಗಳ ಮತ್ತು ಸಮಾಜಗಳ ಪ್ರತಿನಿಧಿಗಳು, ಆಟೋ ಮತ್ತು ವಾಹನ ಚಾಲಕರ ಸಂಘದವರು, ಎನ್ಸಿಸಿ ತಂಡ, ಸ್ಕೌಟ್ಸ್ ಮತ್ತು ಗೈಡ್ಸ್ ಮೆರವಣಿಗೆಯಲ್ಲಿ ಗಮನ ಸೆಳೆದರು. ರಸ್ತೆ ಯುದ್ದಕ್ಕೂ 11 ದ್ವಾರಗಳು ಗಮನ ಸೆಳೆದವು.









