
ಮಡಿಕೇರಿ ಜೂ.3 NEWS DESK : ಇದೇ ಜೂನ್ 21 ರಂದು ನಡೆಯುವ ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಬುಧವಾರ ನಡೆದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಂತರರಾಷ್ಟ್ರೀಯ ಯೋಗ ದಿನಾಚರಣೆ ಮಹತ್ವ ಅರಿತು ಸಂಬಂಧಪಟ್ಟ ವಿವಿಧ ಇಲಾಖೆಗಳು ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡಬೇಕು. ಶಾಲಾ, ಕಾಲೇಜು ಹಾಗೂ ಹಾಸ್ಟೇಲ್ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲು ಮತ್ತು ಬರಲು ಅಗತ್ಯ ಜವಾಬ್ದಾರಿ ವಹಿಸಿಕೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಆಯುಷ್ ಇಲಾಖೆಯಿಂದ ಯೋಗಾಭ್ಯಾಸ ಮಾಡಿಸಬೇಕು ಮತ್ತು ಆಯುಷ್ ಇಲಾಖೆಯಲ್ಲಿ ಲಭ್ಯವಾಗುವ ಸೌಲಭ್ಯಗಳನ್ನು ಒದಗಿಸಬೇಕು ಎಂದು ಹೇಳಿದರು. ಯೋಗ ಮತ್ತು ಪ್ರವಾಸೋದ್ಯಮದ ಸಹಯೋಗದಿಂದ ಜಿಲ್ಲೆಗೆ ಪ್ರವಾಸಿಗರು ಆಕರ್ಷಿಸುತ್ತಾರೆ. ಆ ಮೂಲಕ ಪ್ರವಾಸೋದ್ಯಮದ ಸೃಷ್ಟಿಯಾಗಲಿದೆ. ಈ ನಿಟ್ಟಿನಲ್ಲಿ ಪ್ರವಾಸೋದ್ಯಮಕ್ಕೆ ಆಯುಷ್ ಇಲಾಖೆ ಒತ್ತು ನೀಡಲು ಸಲಹೆ ಮಾಡಿದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜಾ ಜಿ. ಅವರು ಮಾತನಾಡಿ, ಆಯುಷ್ ಇಲಾಖಾ ಮಾರ್ಗಸೂಚಿಗಳ ಅನುಸಾರ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಸ್ಥಳ ನಿಗದಿ ಮಾಡುವುದು, ಯೋಗಭ್ಯಾಸಗಾರರನ್ನು ಸಜ್ಜುಗೊಳಿಸುವುದು, ಯೋಗ ಪ್ರೋಟೋಕಾಲ್ನ ಪ್ರಕಾರ ಯೋಗಾಸನಗಳನ್ನು ಪೂರ್ವಭ್ಯಾಸ ಮಾಡಿಸುವುದರ ಕುರಿತು ಮಾಹಿತಿ ನೀಡಿದರು. ಜೂನ್ 16 ರಂದು ಜಾಥ: ಆಯುಷ್ ವೈದ್ಯಾಧಿಕಾರಿ (ಪ್ರಕೃತಿ ಚಿಕಿತ್ಸೆ ಮತ್ತು ಯೋಗ) ಡಾ.ಅರುಣ್ ಅವರು ಮಾತನಾಡಿ, `ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಜೂನ್, 16 ರಂದು ಬೆಳಗ್ಗೆ 8.30 ಗಂಟೆಗೆ ಯೋಗ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಯೋಗ ಶಿಕ್ಷಕರು ಸಾರ್ವಜನಿಕರಿಗೆ, ಹಳ್ಳಿಗಳಲ್ಲಿ, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಯೋಗಭ್ಯಾಸ ಹಮ್ಮಿಕೊಳ್ಳಲಾಗಿದೆ. ಅಲ್ಲದೆ ಸಾರ್ವಜನಿಕರಿಗೆ ಮತ್ತು ಅಧಿಕಾರಿಗಳಿಗೆ 365 ದಿನಗಳ ಗೂಗಲ್ ಲಿಂಕ್ ಮೂಲಕ ಯೋಗಾಭ್ಯಾಸ ಹಮ್ಮಿಕೊಂಡಿದ್ದು, ಈ ಬಗ್ಗೆ ಆಯುಷ್ ಇಲಾಖೆಯಿಂದ, ಯೋಗ ಶಿಕ್ಷಕರಿಂದ ಅರಣ್ಯ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಆಯುಷ್ ವೈದ್ಯಾಧಿಕಾರಿ ಅವರು ತಿಳಿಸಿದರು. ಆಯುಷ್ ಆರೋಗ್ಯ ಕ್ಷೇಮ ಕೇಂದ್ರ ಯೋಗ ತರಬೇತಿದಾರರಿಂದ ಜಿಲ್ಲೆಯ ಬೇರೆ ಬೇರೆ ಶಾಲೆಗಳಲ್ಲಿ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಾ.ಅರುಣ್ ಅವರು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಬಿಳಿ ಸಮವಸ್ತ್ರದಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಕೋರಿದರು. ಎಲ್ಲಾ ಅಧಿಕಾರಿ ಮತ್ತು ಸಾರ್ವಜನಿಕರಿಗೆ ಯೋಗ ಲಿಂಕ್ ಉಪಯೋಗಿಸಿ 14 ದಿನಗಳ “ಯೋಗ ಸವಾಲು” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಯುಷ್ ಆರೋಗ್ಯ ಕ್ಷೇಮ ಕೇಂದ್ರಗಳು ಹಾಗೂ ಆಯುಷ್ ಆಸ್ಪತ್ರೆಗಳಲ್ಲಿ ಆಯುಷ್ ಅರಿವು ಹಾಗೂ ಯೋಗ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸೋಮಶೇಖರ್ ಅವರು ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಗಮನ ಹರಿಸಬೇಕು, ಸಾರ್ವಜನಿಕರ ಓಡಾಟಕ್ಕೆ ಟ್ರಾಫಿಕ್ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಸೂಕ್ತ ಕ್ರಮಕೈಗೊಳ್ಳಬೇಕು, ಜಾಥಾವನ್ನು ವ್ಯವಸ್ಥಿತವಾಗಿ ನಡೆಸಬೇಕು ಎಂದು ಹೇಳಿದರು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು ಅವರು ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳು, ಪ್ರೌಢಶಾಲೆಯ ವಿದ್ಯಾರ್ಥಿಗಳು, ಎನ್ಸಿಸಿ, ಎನ್ಎಸ್ಎಸ್, ಸ್ಕೌಟ್ಸ್ ಮತ್ತು ಗೈಡ್ಸ್ನ ವಿದ್ಯಾರ್ಥಿಗಳು ಸೇರಿದಂತೆ ಹಲವು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಪೊಲೀಸ್ ಉಪಾಧೀಕ್ಷಕರಾದ ಪಿ.ಎ.ಸೂರಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಜಿಲ್ಲಾ ಕೌಶಾಲ್ಯಾಭಿವೃದ್ಧಿ ಅಧಿಕಾರಿ ರೇಖಾ ಗಣಪತಿ, ನೀಮಾ ಕೊಡಗು ಅಧ್ಯಕ್ಷರಾದ ಡಾ.ರಾಜರಾಮ್, ಯೋಗ ಶಿಕ್ಷಕರಾದ ಮಹೇಶ್ ಕುಮಾರ್ ಇತರರು ಇದ್ದರು.









