
ಕುಶಾಲನಗರ ಜೂ.13 NEWS DESK : ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು(ಕೂಡ್ಲೂರು)
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆರಂಭಗೊಂಡ ಪೂರ್ವ ಪ್ರಾಥಮಿಕ ತರಗತಿ( ಎಲ್.ಕೆ.ಜಿ.,ಮತ್ತು ಯು.ಕೆ.ಜಿ.)ಗಳನ್ನು
ಕೂಡುಮಂಗಳೂರು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರೂ ಆದ ದಾನಿ ಕೆ.ಕೆ.ಭೋಗಪ್ಪ ಪೂರ್ವ ಪ್ರಾಥಮಿಕ ತರಗತಿಗಳ ಉದ್ಘಾಟಿಸಿದರು. ಎಲ್ ಕೆ ಜಿ ಮತ್ತು ಯು ಕೆ ಜಿ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದ ಕೆ.ಕೆ.ಭೋಗಪ್ಪ, ಹಳ್ಳಿಗಳಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಬಡವರಿಗೆ ತಮ್ಮ ಮಕ್ಕಳಿಗೆ ಎಲ್ಕೆಜಿ ಮತ್ತು ಯುಕೆಜಿ ಶಿಕ್ಷಣ ಕೊಡಿಸುವುದು ಗಗನ ಕುಸುಮವಾಗಿತ್ತು. ಈಗ ಹಳ್ಳಿಯ ಈ ಶಾಲೆಯಲ್ಲಿ ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣವು ಉತ್ತಮವಾಗಿ ದೊರಕುತ್ತಿದೆ. ಪೋಷಕರು ಸರ್ಕಾರಿ ಶಾಲೆಯಲ್ಲಿನ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ತಮ್ಮ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂದರು. ಸದ್ಯ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಮಾತ್ರವೇ ಮಕ್ಕಳಿಗೆ ಕಲಿಕೆಗೆ ಆರಂಭವಾಗುತ್ತಿತ್ತು. ಹೀಗಾಗಿ ಎಲ್ಕೆಜಿ, ಯುಕೆಜಿ ತರಗತಿಗಳಿಗಾಗಿ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಲ್ಲಿ ದಾಖಲು ಮಾಡುತ್ತಿದ್ದರು. ಆದರೆ ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳು ಶುರುವಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕು ಎಂದು ಮನವಿ ಮಾಡಿದರು. ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಆಯ್ದ ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ ತರಗತಿಗಳನ್ನು
ಆರಂಭಿಸಲಾಗುತ್ತಿದ್ದು, ಗ್ರಾಮಾಂತರ ಪ್ರದೇಶದ ನಮ್ಮ ಕೂಡ್ಲೂರು ಶಾಲೆಯಲ್ಲಿ ಕೂಡ ಈ ತರಗತಿಗಳು ಆರಂಭವಾಗುತ್ತಿರುವುದರಿಂದ ಮಕ್ಕಳ ಕಲಿಕೆಗೆ ಸಹಕಾರಿಯಾಗಿದೆ ಎಂದು ಭೋಗಪ್ಪ ಹೇಳಿದರು. ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾ ಧ್ಯಾಯ ಟಿ.ಜಿ.ಪ್ರೇಮಕುಮಾರ್
ಮಾತಾನಾಡಿ, ಎಲ್ಕೆಜಿ, ಯುಕೆಜಿ ಕಲಿಕೆಯ ಪರಿಣಾಮದ ಸಾಧ್ಯತೆಗಳ ಬಗ್ಗೆ ವಿವರಿಸಿದರು. ಹಳ್ಳಿ ಮಕ್ಕಳಿಗೆ ಉತ್ತಮ ಕಲಿಕೆ ಸೂಕ್ತವಾಗಿದೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಸಂಖ್ಯೆಯ ಹೆಚ್ಚಳ ಆಗುವುದರ ಬಗ್ಗೆ ಗ್ರಾಮಸ್ಥರಿಗೆ ತಿಳಿ ಹೇಳಿದರು. ಹಿಂದುಳಿದ ಪ್ರದೇಶಗಳಿಗೆ ಶಿಕ್ಷಣವೇ ಅಸ್ತ್ರ. ಇಲ್ಲಿನ ಪೋಷಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ಮೂಲಕ ಕಲಿಕೆಗೆ ಹೆಚ್ಚಿನ ಒತ್ತನ್ನು ನೀಡಬೇಕು. ಮುಂದೆ ಬರುವ ಕಾಲಕ್ಕೆ ನಮ್ಮ ಮಕ್ಕಳು ಉತ್ತಮ ಸೌಕರ್ಯಗಳಿಂದ ಬದುಕಬೇಕಾದರೆ ಶಿಕ್ಷಣ ಮಾತ್ರ ಏಕೈಕ ದಾರಿ. ಅದಕ್ಕಾಗಿ ಎಲ್ಲರೂ ಶ್ರಮಿಸಬೇಕಿದೆ. ಈ ನಿಟ್ಟಿನಲ್ಲಿ ಶಾಲಾ ಸಮಿತಿ ಒಂದು ಹೆಜ್ಜೆ ಮುಂದೆ ಇಟ್ಟು, ಪೂರ್ವ ಪ್ರಾಥಮಿಕ ತರಗತಿಗಳು ಆರಂಭವಾಗಲು ಕಾರಣಕರ್ತರಾಗಿದ್ದೀರಿ ಎಂದು ಶಾಲಾ ಸಮಿತಿ ಮತ್ತು ಶಿಕ್ಷಕಿಯರ ತಂಡದ ಉತ್ತಮ ಸೇವಾಕಾರ್ಯವನ್ನು ಶ್ಲಾಘಿಸಿದರು. ಗ್ರಾಮಾಂತರ ಸರ್ಕಾರಿ ಶಾಲೆಗಳ ಮಕ್ಕಳ ಆರಂಭಿಕ ಶಿಕ್ಷಣ ಇನ್ನು ಮುಂದೆ ಮತ್ತಷ್ಟು ಸುಲಭ, ಸುರಕ್ಷಿತ ಮತ್ತು ಉನ್ನತ ಗುಣಮಟ್ಟದ್ದಾಗಲಿದೆ.ಇದಕ್ಕೆ ಪೋಷಕರು ಹೆಚ್ಚಿನ ಸಹಕಾರ ನೀಡಬೇಕು ಎಂದು ಪ್ರೇಮಕುಮಾರ್ ಮನವಿ ಮಾಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ
ಶಾಲಾ ಮುಖ್ಯ ಶಿಕ್ಷಕಿ ಎಚ್.ಎಸ್.ಸುಜಾತ , ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿಗಳಾದ ಎಲ್.ಕೆ.ಜಿ, ಯು.ಕೆ.ಜಿ ಆರಂಭಿಸಲಾಗುತ್ತಿದ್ದು, ಪೂರ್ವ ಪ್ರಾಥಮಿಕವನ್ನು ತರಗತಿವಾರು ಪ್ರತ್ಯೇಕವಾಗಿ ದ್ವಿಭಾಷಾ ಮಾಧ್ಯಮದಲ್ಲಿ ನಡೆಸಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಎಸ್ ಡಿ ಎಂ ಸಿ ಅಧ್ಯಕ್ಷ ಎಂ. ಸಂತೋಷ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳನ್ನು ತೆರೆಯಲು ಮುಂದಾಗಿರುವ ಸರ್ಕಾರದ ನಿರ್ಧಾರ ಸಂತೋಷ ತಂದಿದೆ. ಇದರಿಂದ ಹಳ್ಳಿ ಮಕ್ಕಳು ಕೂಡ ಕಾನ್ವೆಂಟ್ ಮಾದರಿಯಲ್ಲಿ ಕನ್ನಡ ಭಾಷೆ ಜತೆಗೆ ಇಂಗ್ಲೀಷ್ ಭಾಷೆ ಕಲಿಯಲು ಸಹಕಾರಿಯಾಗಿದೆ ಎಂದರು. ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಕೆ.ಆರ್.ಪವಿತ್ರ, ಶಿಕ್ಷಕಿಯರಾದ ಕೆ.ಬಿ.ಗೀತಾರಾಣಿ, ಜಿ.ಮೇರಿ ಮಾರ್ಗರೇಟ್, ಜಿ.ನಳಿನಿ, ಪೂರ್ವ ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕಿ ಪಿ.ಆರ್. ಶ್ಯಾಮಿಲ , ಅಂಗನವಾಡಿ ಕಾರ್ಯಕರ್ತೆ ಕಲಾವತಿ, ಸಹಾಯಕಿ ಎನ್.ಪಿ.ತ್ರಿಪುರ ಹಾಗೂ ಪೋಷಕರು ಇದ್ದರು.









