
ಮಡಿಕೇರಿ NEWS DESK ಜೂ.17 : ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಇದೇ ಮೊದಲ ಬಾರಿಗೆ ಜೂ.23 ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಜಿಲ್ಲಾ ಮಟ್ಟದ ಪ್ರಥಮ ಶರಣ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಹಿತ್ಯ ಪರಿಷತ್ ನ ಜಿಲ್ಲಾಧ್ಯಕ್ಷ ಕೆ.ಎಸ್.ಮೂರ್ತಿ ಅವರು ಶರಣರ ಚಿಂತನೆಗಳ ಬೆಳಕಿನಿಂದ ಸಮಾನತೆಯ ಸಮಾಜ ಕಟ್ಟುವ ಸಂದೇಶಗಳೊoದಿಗೆ 12ನೇ ಶತಮಾನದ ವಚನಕಾರರ ಸಂದೇಶಗಳನ್ನು ಸಮಾಜದಲ್ಲಿ ಬಿತ್ತುವ ಮಹತ್ತರವಾದ ಕಾಯಕ ಕಳೆದ 40 ವರ್ಷಗಳಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಡೆಯುತ್ತಾ ಬಂದಿದೆ. ಸುತ್ತೂರು ಮಠದ 24ನೇ ಜಗದ್ಗುರುಗಳಾದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಅವರು ಗೌರವ ಅಧ್ಯಕ್ಷರಾಗಿದ್ದಾರೆ. ಇವರ ಸಾನಿಧ್ಯದಲ್ಲಿ ಶರಣ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದರು. ಸಮ್ಮೇಳನಾಧ್ಯಕ್ಷರಾಗಿರುವ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ, ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರಗೌಡ ಸೇರಿದಂತೆ ನಾಡಿನ ಅನೇಕ ಶರಣ ಸಾಹಿತ್ಯದ ಚಿಂತಕರು, ಸಮಾಜ ಸುಧಾರಕರು ನಾಡಿನ ವಿವಿಧ ಮಠಗಳ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 9 ಗಂಟೆಯಿoದ ಕುಶಾಲನಗರದ ಗಾಯತ್ರಿ ಕಲ್ಯಾಣ ಮಂಟಪದಿoದ ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ ಸಾಗಲಿದೆ. ವಿವಿಧ ಕಲಾತಂಡಗಳು, ಪೂರ್ಣ ಕುಂಭ ಹೊತ್ತ ಮಹಿಳೆಯರು, ಶರಣರ ವೇಷ ಧರಿಸಿದ ಶಾಲಾ ಕಾಲೇಜು ವಿದ್ಯಾರ್ಥಿ ಗಳು, ಮಾಜಿ ಯೋಧರು ಸೇರಿದಂತೆ ವಿವಿಧ ಸಮುದಾಯಗಳ ಮಂದಿ ಮೆರವಣಿಗೆಯಲ್ಲಿ ಸಾಗಲಿದ್ದಾರೆ. ಗಾಯತ್ರಿ ಕಲ್ಯಾಣ ಮಂಟಪದಿoದ ಹೊರಡುವ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಕೊಡಗು ಅಪರ ಜಿಲ್ಲಾಧಿಕಾರಿ ಡಾ.ಸಹನಾ ಹಾದಿಮನಿ ಹಾಗೂ ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಚಾಲನೆ ನೀಡಲಿದ್ದಾರೆ. ಸಮ್ಮೇಳನದ ಮೆರವಣಿಗೆ ರಥಬೀದಿಗಾಗಿ ಗಣಪತಿ ದೇವಾಲಯ ವೃತ್ತಕ್ಕೆ ಬಂದು ಮುಖ್ಯ ರಸ್ತೆಗಾಗಿ ರೈತ ಸಹಕಾರ ಭವನವನ್ನು ತಲುಪಲಿದೆ. ಮೆರವಣಿಗೆಗೂ ಮೊದಲು ಬೆಳಗ್ಗೆ 8.30 ಗಂಟೆಗೆ ರೈತ ಸಹಕಾರ ಭವನದ ಬಳಿ ರಾಷ್ಟ್ರಧ್ವಜ, ನಾಡ ಧ್ವಜ ಹಾಗೂ ಶರಣ ಸಾಹಿತ್ಯ ಪರಿಷತ್ತು ಧ್ವಜಗಳ ಆರೋಹಣ ನಡೆಯಲಿದೆ. 10.30 ಗಂಟೆಗೆ ದೊಡ್ಡವೀರರಾಜೇಂದ್ರ ವೇದಿಕೆಯಲ್ಲಿ ನಡೆಯುವ ಸಮಾರಂಭವನ್ನು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸಾನಿಧ್ಯದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೊಡಗು ವಿವಿ ಕುಲಪತಿ ಡಾ.ಅಶೋಕ್ ಸಂಗಪ್ಪ ಅನುಭಾವದ ನುಡಿಯಾಡಲಿದ್ದಾರೆ. ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಡಾ.ಮಂತರಗೌಡ ಅವರು ಆಶಯ ನುಡಿಗಳನ್ನಾಡಲಿದ್ದಾರೆ. ಸಂಸದ ಯದುವೀರ್ ವಚನಗಳ ಹೊತ್ತಿಗೆ ಬಿಡುಗಡೆ ಮಾಡುವರು. ಸಮ್ಮೇಳನದ ಅನುಭವ ಮಂಟಪದಲ್ಲಿ ವಚನ ಸಾಹಿತ್ಯದ ವಿವಿಧ ವಿಚಾರ ಗೋಷ್ಠಿಗಳು, ವಚನ ಗಾಯನಗಳು ಗಮನ ಸೆಳೆಯಲಿವೆ. ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ನಂತರ ಸಂಜೆ 6 ಗಂಟೆಯಿoದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸುವ ಸಂಬoಧ ಈಗಾಗಲೇ ಹಲವು ಸಮಿತಿಗಳನ್ನು ರಚಿಸಲಾಗಿದೆ. ಕೊಡಗು ಜಿಲ್ಲೆಯ ವಿವಿಧೆಡೆಗಳ ಶರಣ ಚಿಂತಕರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದು ಎಲ್ಲರಿಗೂ ಶರಣ ದಾಸೋಹದ ವ್ಯವಸ್ಥೆ ಮಾಡಲಾಗಿದೆ ಎಂದು ಕೆ.ಎಸ್.ಮೂರ್ತಿ ಮಾಹಿತಿ ನೀಡಿದರು. ರಾಜ್ಯ ಮತ್ತು ದೇಶ ಮಾತ್ರವಲ್ಲದೆ ಜಗತ್ತಿನ ಅನೇಕ ರಾಷ್ಟ್ರಗಳಲ್ಲಿ ಶಿಕ್ಷಣ ಹಾಗೂ ಆರೋಗ್ಯ ಸಂಸ್ಥೆಗಳನ್ನು ತೆರೆಯುವ ಮೂಲಕ ಮಹತ್ತರವಾದ ಸೇವೆಗೈಯುತ್ತಿರುವ ಸುತ್ತೂರು ಮಠದ 23 ನೇ ಜಗದ್ಗುರುಗಳಾದ ಡಾ.ರಾಜೇಂದ್ರ ಸ್ವಾಮೀಜಿ ಯವರು ಶರಣ ಸಾಹಿತ್ಯ ಪರಿಷತ್ತನ್ನು 1986 ರಲ್ಲಿ ಕಟ್ಟಿದರು. ಈ ಪರಿಷತ್ತು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಲ್ಲದೇ ನೆರೆಯ ಮಹಾರಾಷ್ಟ್ರ, ಗೋವಾ, ಆಂಧ್ರ ಹಾಗೂ ಕೇರಳದಲ್ಲಿ ಕಾರ್ಯನಿರ್ವಹಿಸುತ್ತಿದೆ. ಕೊಡಗು ಜಿಲ್ಲೆಯಲ್ಲೂ ಕೂಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜು ಗಳ ಎಳೆಯ ಮಕ್ಕಳಲ್ಲಿ ಶರಣರ ಚಿಂತನೆಗಳನ್ನು ಬಿತ್ತುವ ಕೆಲಸ ವಾಗುತ್ತಿದೆ ಎಂದು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷ ಹೆಚ್.ವಿ.ಶಿವಪ್ಪ, ಹಣಕಾಸು ಸಮಿತಿ ಅಧ್ಯಕ್ಷ ಶಾಂಬಶಿವಯ್ಯ, ಯುವ ಘಟಕದ ಅಧ್ಯಕ್ಷ ಮೋಹನ್ ಹಕ್ಕೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು ಹಾಗೂ ಮಹಿಳಾ ಘಟಕ ಕದಳಿ ವೇದಿಕೆಯ ಮಡಿಕೇರಿ ತಾಲ್ಲೂಕು ಪದಾಧಿಕಾರಿ ವಿಜಯಲಕ್ಷ್ಮಿ ಉಪಸ್ಥಿತರಿದ್ದರು.








