
ಮಡಿಕೇರಿ, ಜು.6 NEWS DESK : ಕೊಡಗು ಜಿಲ್ಲಾ ಲೇಖಕರ ಹಾಗೂ ಕಲಾವಿದರ ಬಳಗದ ವತಿಯಿಂದ ಮಡಿಕೇರಿ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ 2024-25 ನೇ ಸಾಲಿನಲ್ಲಿ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದ ನಿಡ್ತ ಪ್ರೌಢಶಾಲೆಯ ಕು.ಜೆ.ಎಸ್. ಪೂರ್ವಿಕಾ ಎಂಬ ವಿದ್ಯಾರ್ಥಿನಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಸ್ಥಾಪಿಸಿರುವ ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿ ಗೌರವಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲೆಯ ಹಿರಿಯ ವಕೀಲರೂ ಆದ ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಎ.ಲೋಕೇಶ್ ಕುಮಾರ್, ಮಕ್ಕಳ ಪ್ರತಿಭೆ ಪ್ರೋತ್ಸಾಹಕ್ಕೆ ಇಂತಹ ಪುರಸ್ಕಾರಗಳು ಪೂರಕವಾಗಿವೆ. ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಲು ಪ್ರತಿಭಾ ಪುರಸ್ಕಾರ ಸಹಕಾರಿಯಾಗಿದ್ದು, ಇದರಿಂದ ಮತ್ತಷ್ಟು ಮಕ್ಕಳು ಪ್ರೇರೇಪಿತರಾಗಿ ಅವರೂ ಉತ್ತಮ ಸಾಧನೆ ಮಾಡಿ ಪುರಸ್ಕಾರಕ್ಕೆ ಭಾಜನರಾಗುತ್ತಾರೆ. ಈ ಮೂಲಕ ನವ ಸಮಾಜ ನಿಮಾರ್ಣದ ಶಿಲ್ಪಿಗಳಾಗಿ ಹೊರಹೊಮ್ಮುತ್ತಾರೆ ಎಂದರು. ವಿದ್ಯಾರ್ಥಿಗಳ ಶಿಕ್ಷಣ ಹಾಗೂ ಪ್ರೋತ್ಸಾಹಕ್ಕಾಗಿ ದತ್ತಿ ನಿಧಿ ಸ್ಥಾಪಿಸುವುದು ಒಂದು ಅತ್ಯುತ್ತಮ ಮತ್ತು ದೀರ್ಘಕಾಲೀನ ಕೊಡುಗೆಯಾಗಿದೆ. ಟಿ.ಪಿ.ರಮೇಶ್ ಅವರು ಪ್ರತಿಭಾವಂತ ಮಕ್ಕಳ ಶಿಕ್ಷಣದ ಪ್ರೋತ್ಸಾಹಕ್ಕೆ ಸ್ಥಾಪಿಸಿರುವ ದತ್ತಿ ನಿಧಿಯ ಮೂಲಕ ಬಡ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ನಿರಂತರವಾಗಿ ಆರ್ಥಿಕ ಸಹಾಯ ಮಾಡಲು ಸಾಧ್ಯವಾಗುತ್ತದೆ ಎಂದರು. ದತ್ತಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಬಳಗದ ಸಲಹೆಗಾರರೂ ಆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಅಭ್ಯಾಸ ಮಾಡುವ ಪ್ರತಿಭಾವಂತರನ್ನು ಶೈಕ್ಷಣಿಕವಾಗಿ ಸಬಲರಾಗಿ ಮಾಡಿ, ಅವರು ಭವಿಷ್ಯದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಂಡು ಸಮಾಜದಲ್ಲಿ ಸ್ವಾವಲಂಬಿಯಾಗಿ ಬದುಕುವಂತೆ ಮಾಡುವುದೇ ದತ್ತಿ ಪ್ರಶಸ್ತಿಯ ಉದ್ದೇಶವಾಗಿದೆ ಎಂದರು. ಜಿಲ್ಲೆಯಲ್ಲಿ ಸಾಹಿತಿ ಹಾಗೂ ಕಲಾವಿದರನ್ನು ಸಂಘಟಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸಾಹಿತ್ಯ, ಸಂಸ್ಕೃತಿ, ಪರಂಪರೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಈ ಬಳಗವನ್ನು ಗಟ್ಟಿಗೊಳಿಸಲು ಶ್ರಮಿಸಬೇಕಾಗಿದೆ. ಈಬಳಗದ ಸದಸ್ಯರ ಸಂಖ್ಯೆಯನ್ನು ವೃದ್ಧಿಸುವುದರ ಜತೆಗೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಸಂಘಟಿಸಬೇಕಾಗಿದೆ ಎಂದು ಸಲಹೆ ನೀಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಮಾತನಾಡಿ, ಇಂತಹ ಕಾರ್ಯಕ್ರಮಗಳು ಪ್ರತಿಭಾವಂತ ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗಿವೆ. ಇನ್ನು ಮುಂದೆ ಈ ಬಳಗಕ್ಕೆ
ಸೂಕ್ತ ಕ್ಷೇತ್ರದಲ್ಲಿ ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸುವ ದಿಸೆಯಲ್ಲಿ ತಾವು ಕೂಡ ತಮ್ಮ ತಂದೆ- ತಾಯಿಯ ಹೆಸರಿನಲ್ಲಿ ದತ್ತಿ ನಿಧಿ ಸ್ಥಾಪಿಸುವುದಾಗಿ ಕೇಶವಕಾಮತ್ ಪ್ರಕಟಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಬಳಗದ ಅಧ್ಯಕ್ಷ ಲೋಕನಾಥ್ ಅಮೆಚೂರು, ಬಳಗದ ವತಿಯಿಂದ ಜಿಲ್ಲೆಯಲ್ಲಿ ಲೇಖಕರು, ಸಾಹಿತಿಗಳು ಹಾಗೂ ಕಲಾವಿದರನ್ನು ಸಂಘಟಿಸುವ ಮೂಲಕ ಅವರಿಗೆ ಸೂಕ್ತ ಅವಕಾಶ ಕಲ್ಪಿಸುವ ಕಾರ್ಯಕ್ರಮಗಳೊಂದಿಗೆ ಜಿಲ್ಲೆಯ ಸಾಂಸ್ಕೃತಿಕ ಪರಂಪರೆಯನ್ನು ಪುನರುಜ್ಜೀವನಗೊಳಿಸುವ ದಿಸೆಯಲ್ಲಿ ಶ್ರಮಿಸಲಾಗುತ್ತಿದೆ ಎಂದರು. ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಹಲವು ವೈವಿಧ್ಯಮಯ ಚಟುವಟಿಕಗಳ ಮೂಲಕ ಲೇಖಕರ ಮತ್ತು ಕಲಾವಿದರ ಬಳಗವು ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸಿರುವುದು ಹೆಮ್ಮೆಯ ಸಂಗತಿ ಎಂದರು. ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿನಿ ಜೆ.ಎಸ್.ಪೂರ್ವಿಕ ಅನಿಸಿಕೆ ವ್ಯಕ್ತಪಡಿಸಿದರು. ಬಳಗದ ಉಪಾಧ್ಯಕ್ಷರಾದ ಪುದಿನೆರವನ ರೇವತಿ ರಮೇಶ್, ಎಂ.ಇ.ಮೊಹಿದ್ದೀನ್, ಪ್ರಧಾನ ಕಾರ್ಯದರ್ಶಿ ಭಾರತಿ ರಮೇಶ್, ಕೋಶಾಧಿಕಾರಿ ಕಡ್ಲೇರ ತುಳಸಿ ಮೋಹನ್, ನಿರ್ದೇಶಕರುಗಳಾದ ಅಂಬೇಕಲ್ ನವೀನ್, ನೆರವಂಡ ಉಮೇಶ್, ಶ್ರೀಮತಿ ಶ್ವೇತಾ ರವೀಂದ್ರ, ಬಿ ಆರ್ ಜೋಯಪ್ಪ, ಶ್ರೀಮತಿ ಸುಶೀಲಾ, ಶ್ರೀಮತಿ ಸುನಿತಾ ಪಿ.ಪಿ, ಚಂದನ್ ಕಾಮತ್, ಪ್ರೇಮ ರಾಘವಯ್ಯ, ಕೆ.ವಿ.ಉಮೇಶ್, ಇನ್ನಿತರರು ಉಪಸ್ಥಿತರಿದ್ದರು. ಶ್ರೀಮತಿ ರೇವತಿ ರಮೇಶ್ ಸ್ವಾಗತಿಸಿ ಭಾರತಿ ರಮೇಶ್ ನಿರೂಪಿಸಿದರು.









