
ಸೋಮವಾರಪೇಟೆ ಜು.16 NEWS DESK : ಸಮಾಜದ ಕುಂದುಕೊರತೆಗಳನ್ನು ಜನರ ಮುಂದಿಡುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮಹತ್ತರ ಜವಾಬ್ದಾರಿಯನ್ನು ಪತ್ರಿಕೆಗಳು ನಿರ್ವಹಿಸುತ್ತಿವೆ ಎಂದು ಶ್ರೀ ನಂಜುಂಡಸ್ವಾಮಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಶ್ರೀ ಮಹಾಂತ ಸ್ವಾಮೀಜಿ ಹೇಳಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸೋಮವಾರಪೇಟೆ ತಾಲೂಕು ಘಟಕದ ವತಿಯಿಂದ ಕೊಡ್ಲಿಪೇಟೆಯ ಶ್ರೀ ನಂಜುಂಡಸ್ವಾಮಿ ವಿದ್ಯಾಸಂಸ್ಥೆ ಆವರಣದಲ್ಲಿ ಗುರುವಾರ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು. ನಾಲ್ಕು ದಿಕ್ಕುಗಳಲ್ಲಿ ನಡೆಯುವ ಘಟನೆಗಳು, ಬೆಳವಣಿಗೆಗಳು ಹಾಗೂ ಸಮಾಜದ ವಿವಿಧ ವಿಚಾರಗಳನ್ನು ಒಂದೆಡೆ ತಂದು ಜನರಿಗೆ ತಲುಪಿಸುವ ಕೆಲಸವನ್ನು ಪತ್ರಿಕೆಗಳು ಮಾಡುತ್ತಿವೆ. ಆದ್ದರಿಂದ ಪತ್ರಿಕೆಗಳ ಪಾತ್ರ ಸಮಾಜದಲ್ಲಿ ಅತ್ಯಂತ ಮಹತ್ವದ್ದಾಗಿದೆ ಎಂದರು. ವಿದ್ಯಾರ್ಥಿಗಳು ಪ್ರತಿದಿನ ಪತ್ರಿಕೆ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಪತ್ರಿಕೆಗಳನ್ನು ಖರೀದಿಸಿ ಓದುವ ಮೂಲಕ ಮಾಧ್ಯಮಗಳನ್ನು ಪ್ರೋತ್ಸಾಹಿಸಬೇಕು. ಪತ್ರಿಕೆಗಳಲ್ಲಿ ದೊರೆಯುವ ಮಾಹಿತಿಗಳು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವುದರ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಇತರ ಪರೀಕ್ಷೆಗಳ ಬಗ್ಗೆ ಅರಿವು ಮೂಡಿಸುತ್ತವೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ನಿರ್ದೇಶಕಿ ಸವಿತಾ ರೈ ಅವರು, ನಿಖರ ಹಾಗೂ ವಿಶ್ವಾಸಾರ್ಹ ಮಾಹಿತಿಯನ್ನು ಸಮಾಜಕ್ಕೆ ತಲುಪಿಸುವಲ್ಲಿ ಮಾಧ್ಯಮಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇಂದಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆ (AI) ಮಾಧ್ಯಮ ಕ್ಷೇತ್ರದಲ್ಲಿಯೂ ಬಳಕೆಯಾಗುತ್ತಿದೆ. ಆದರೂ ಪತ್ರಿಕೆಯ ಮಹತ್ವವನ್ನು ವಿದ್ಯಾರ್ಥಿಗಳು ಮೊದಲು ಅರಿತುಕೊಳ್ಳಬೇಕು. ಪ್ರತಿದಿನ ಸುದ್ದಿಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಗುರುವಿನ ಆಶೀರ್ವಾದ ಇದ್ದಾಗ ಮಾತ್ರ ವಿದ್ಯಾರ್ಥಿಗಳು ಯಶಸ್ಸಿನತ್ತ ಸಾಗಲು ಸಾಧ್ಯ. ಹಿಂದೆ ಗುರು- ಮುಂದೆ ಗುರಿ ಇರಬೇಕು. ವಿದ್ಯಾರ್ಥಿಗಳು ತಮ್ಮದೇ ಆದ ಛಾಪು ಮೂಡಿಸಿಕೊಂಡು ಮುನ್ನಡೆಯಬೇಕು ಎಂದರು. ಹಿರಿಯ ಪತ್ರಕರ್ತ ಎಸ್. ಮಹೇಶ್ ಮಾತನಾಡಿ, ಸಮಾಜದಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳು, ಬೆಳವಣಿಗೆಗಳು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಪತ್ರಿಕೆಗಳ ಮೂಲಕ ಜನರಿಗೆ ತಲುಪಿಸುವ ಮಹತ್ತರ ಕಾರ್ಯವನ್ನು ಮಾಧ್ಯಮಗಳು ನಿರ್ವಹಿಸುತ್ತಿವೆ. ಪತ್ರಿಕೆಗಳು ಕೇವಲ ಸುದ್ದಿಮಾಧ್ಯಮವಲ್ಲ, ಅವುಗಳಲ್ಲಿ ಬರುವ ಸುದ್ದಿಗಳು ಭವಿಷ್ಯಕ್ಕೆ ದಾಖಲೆಯಾಗಿ ಉಳಿಯುತ್ತದೆ. ಆದ್ದರಿಂದ ಸಾಮಾಜಿಕ ಜಾಲತಾಣಗಳಿಗಷ್ಟೇ ಸೀಮಿತವಾಗದೆ, ವಿಶ್ವಾಸಾರ್ಹ ಮಾಧ್ಯಮ ಹಾಗೂ ಪತ್ರಿಕೆಗಳನ್ನು ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದರು ಪತ್ರಿಕಾ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. 5 ರಿಂದ 7ನೇ ತರಗತಿ ವಿಭಾಗದಲ್ಲಿ ಚಿಂತನ ಡಿ.ಎನ್. ಪ್ರಥಮ, ಬಿಲ್ವಿಕ್ ಎಸ್.ಜಿ. ದ್ವಿತೀಯ ಹಾಗೂ ವರ್ಷಿತಾ ಕೆ.ಆರ್. ತೃತೀಯ ಸ್ಥಾನ ಪಡೆದರು. 8 ರಿಂದ 10ನೇ ತರಗತಿ ವಿಭಾಗದಲ್ಲಿ ಮೋಕ್ಷ ಹೆಚ್.ಎಂ. ಪ್ರಥಮ, ಸಾನಿಕ ಡಿ. ದ್ವಿತೀಯ ಹಾಗೂ ಜವೇರಿಯ ತೃತೀಯ ಸ್ಥಾನ ಗಳಿಸಿದರು. ಹಿರಿಯ ಪತ್ರಕರ್ತ ಎಸ್.ಮಹೇಶ್, ಜಿಲ್ಲಾ ಪ್ರಶಸ್ತಿ ಪುರಸ್ಕೃತರಾದ ಹಿರಿಕರ ರವಿ ಹಾಗೂ ಲಕ್ಷ್ಮೀಕಾಂತ್ ಕೊಮಾರಪ್ಪ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಮುಳ್ಳೂರು ವಹಿಸಿದ್ದರು. ವಿಜಯ್ ಹಾನಗಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿತಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿಶ್ವ ಕುಂಬೂರು, ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯ ಅಭಿಲಾಶ್, ಸಂಸ್ಥೆಯ ಕಾರ್ಯದರ್ಶಿ ದಿವಾಕರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.









