

ಮಡಿಕೇರಿ NEWS DESK ಜು.25 : ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ತನಿಖೆಗೆ ಆದೇಶಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದರೂ ಸಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ರಾಜಕೀಯ ಲಾಭಕ್ಕಾಗಿ ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿವೆ ಎಂದು ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಿಜೆಪಿ ಮತ್ತು ಕಾಂಗ್ರೆಸ್ ನೀಟ್ ಪ್ರಕರಣವನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿವೆ ಎಂದು ಟೀಕಿಸಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲು ಸಾಧ್ಯವಿಲ್ಲ. ಇದು ಕ್ಷಮಿಸಲಾಗದ ಅಪರಾಧವಾಗಿದ್ದು, ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಕರಣದ ತ್ವರಿತ ವಿಚಾರಣೆ ನಡೆಸಿ ಕಾನೂನು ಪ್ರಕಾರ ಶಿಕ್ಷೆ ವಿಧಿಸಲು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದ ಮೂಲಕ ಕ್ರಮ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೂಡ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಈ ಪ್ರಕರಣದ ಹಿಂದೆ ಇರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಹಾಗೂ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಹಲವು ಬಾರಿ ಸ್ಪಷ್ಟಪಡಿಸಿದ್ದಾರೆ. ಆದರೂ ಕಾನೂನು ಬಾಹಿರವಾಗಿ ಪ್ರತಿಭಟನೆಗಳನ್ನು ಮಾಡಿ ಅಶಾಂತಿ ಮೂಡಿಸುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಒಂದು ವರ್ಷ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ತಕ್ಷಣವೇ ನೀಟ್ ಮರುಪರೀಕ್ಷೆ ನಡೆಸಿದ್ದು, ಅದರ ಫಲಿತಾಂಶವೂ ಜುಲೈ 19ರಂದು ಪ್ರಕಟವಾಗಿದೆ. ಇಷ್ಟೆಲ್ಲ ಕ್ರಮಗಳ ಬಳಿಕವೂ ಕೇಂದ್ರ ಸರಕಾರ ಏನೂ ಮಾಡಿಲ್ಲ ಎಂಬ ರೀತಿಯಲ್ಲಿ ಬಿಂಬಿಸಿ, ವಿದ್ಯಾರ್ಥಿಗಳ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಂಡು ದೇಶದಲ್ಲಿ ಅಶಾಂತಿ ಸೃಷ್ಟಿಸುವ ರೀತಿಯ ಪ್ರತಿಭಟನೆಗಳು ನಡೆಯುತ್ತಿದೆ. ಪ್ರತಿಭಟನೆಯ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸುವುದು, ದೇಶ ಹಾಗೂ ಧರ್ಮದ ವಿರುದ್ಧ ಘೋಷಣೆಗಳನ್ನು ಕೂಗುವುದು, ಪ್ರತಿಭಟನಾ ಸ್ಥಳದಲ್ಲಿ ಕುಣಿದು ಕುಪ್ಪಳಿಸುವುದು ಮತ್ತಿತರ ಚಟುವಟಿಕೆಗಳನ್ನು ಗಮನಿಸಿದರೆ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಾಳಜಿಗಿಂತ ಬೇರೆ ಉದ್ದೇಶವೇ ಇರುವಂತಿದೆ ಎಂಬ ಅನುಮಾನ ಮೂಡುತ್ತದೆ. ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಪ್ರತಿಭಟನೆಗೆ ವಿದೇಶಗಳಿಂದಲೂ ಹಣ ಬರುತ್ತಿದೆ ಎನ್ನಲಾಗುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ವಿದೇಶಿ ಹಣಕಾಸಿನ ನಡುವೆ ಏನು ಸಂಬಂಧ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಇದಕ್ಕೆ ಕಾಂಗ್ರೆಸ್ ಪಕ್ಷವೂ ಬೆಂಬಲ ನೀಡುತ್ತಿರುವಂತೆ ಕಾಣುತ್ತಿದೆ ಎಂದು ರಾಕೇಶ್ ದೇವಯ್ಯ ಆರೋಪಿಸಿದ್ದಾರೆ. ಕಾಂಗ್ರೆಸ್ ಹಾಗೂ ಅದರ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರಿಗೆ ವಿದ್ಯಾರ್ಥಿಗಳ ಬಗ್ಗೆ ನಿಜವಾದ ಕಾಳಜಿ ಇದ್ದಿದ್ದರೆ, ನೀಟ್ ಮರುಪರೀಕ್ಷೆ ನಡೆದ ದಿನವೇ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಯೋಜಿಸುತ್ತಿರಲಿಲ್ಲ. ಆ ಕಾರ್ಯಕ್ರಮದಿಂದ ಉಂಟಾದ ವಾಹನ ದಟ್ಟಣೆಯಿಂದ ಹಲವಾರು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತಲುಪಲು ಹರಸಾಹಸ ಪಡಬೇಕಾಯಿತು. ಕೆಲವರು ಪರೀಕ್ಷೆಯಿಂದಲೇ ವಂಚಿತರಾದರು. ಈ ವಿಚಾರದ ಬಗ್ಗೆ ಸಿಜೆಪಿ ಮತ್ತು ಕಾಂಗ್ರೆಸ್ ಯಾಕೆ ಮೌನ ವಹಿಸಿವೆ ಎಂದು ಪ್ರಶ್ನಿಸಿದ್ದಾರೆ. ವಿದ್ಯಾರ್ಥಿಗಳನ್ನು ಸಿಜೆಪಿ ಅಥವಾ ಕಾಂಗ್ರೆಸ್ ಪಕ್ಷಕ್ಕೆ ಗುತ್ತಿಗೆ ನೀಡಿಲ್ಲ. ಪ್ರತಿಭಟನೆಯ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಂಡು ದೇಶದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ಮುಂದುವರಿದರೆ, ಅದರ ವಿರುದ್ಧ ಬಿಜೆಪಿ ಕೂಡ ಬೀದಿಗಿಳಿದು ಹೋರಾಟ ನಡೆಸಬೇಕಾದ ಪರಿಸ್ಥಿತಿ ಎದುರಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಇರುವಂತೆ ಮಾತನಾಡುತ್ತಿರುವ ಕಾಂಗ್ರೆಸ್, ಕೆಪಿಎಸ್ಸಿ ನೇಮಕಾತಿ ಅಕ್ರಮಗಳ ಕುರಿತು ಯಾಕೆ ಮೌನವಾಗಿದೆ? ಕೆಪಿಎಸ್ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಭ್ರಷ್ಟಾಚಾರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಪಟ್ಟ ವಿಷಯವಲ್ಲವೇ? ಎಂದು ಪ್ರಶ್ನಿಸಿರುವ ರಾಕೇಶ್ ದೇವಯ್ಯ ರಾಜ್ಯ ಸರಕಾರವೇ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿರುವಾಗ ಈಗ ವಿದ್ಯಾರ್ಥಿಗಳ ಬಗ್ಗೆ ಭಾರೀ ಕಾಳಜಿ ಇರುವಂತೆ ವರ್ತಿಸುತ್ತಿರುವುದು ಕೇವಲ ಮೊಸಳೆ ಕಣ್ಣೀರಿನ ರಾಜಕೀಯ ನಾಟಕ ಎಂದು ಚೆಪ್ಪುಡೀರ ರಾಕೇಶ್ ದೇವಯ್ಯ ಆರೋಪಿಸಿದ್ದಾರೆ. *ಶೈಕ್ಷಣಿಕ ಪ್ರಗತಿ* ಕೇಂದ್ರ ಸರಕಾರದ ಕಾಳಜಿಯಿಂದ ರಾಷ್ಟ್ರದಲ್ಲಿ ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ. ಉನ್ನತ ಶಿಕ್ಷಣ ದಾಖಲಾತಿ ಪ್ರಮಾಣ 2014ರಲ್ಲಿ ಶೇ.23.7 ರಷ್ಟಿತ್ತು, ಇದು 2023ರ ವೇಳೆಗೆ ಶೇ.28.4ಕ್ಕೆ ಏರಿಕೆಯಾಗಿದೆ. ವಿಶ್ವವಿದ್ಯಾಲಯಗಳ ಸಂಖ್ಯೆ 2014ರಲ್ಲಿ ಸುಮಾರು 760 ಇತ್ತು, 2024ರ ವೇಳೆಗೆ 1,200ಕ್ಕೂ ಹೆಚ್ಚು ಆಗಿವೆ. ಐಐಟಿ 2014ರಲ್ಲಿ 16 ಇದ್ದವು, ಈಗ 23, ಐಐಎಂ 2014ರಲ್ಲಿ 13 ಇದ್ದವು, ಈಗ 21 ಆಗಿದೆ. ಎಐಐಎಂಎಸ್ 2014ರಲ್ಲಿ 7, ಪ್ರಸ್ತುತ 23ಕ್ಕೂ ಹೆಚ್ಚು ಕಾರ್ಯನಿರ್ವಹಿಸುತ್ತಿವೆ. 600ರಿಂದ 660ಕ್ಕೂ ಹೆಚ್ಚು ನವೋದಯ ವಿದ್ಯಾಲಯಗಳಿವೆ. ಆದಿವಾಸಿ ವಿದ್ಯಾರ್ಥಿಗಳಿಗಾಗಿ ಏಕಲವ್ಯ ಮಾದರಿ ವಸತಿ ಶಾಲೆಗಳು 700ಕ್ಕೂ ಹೆಚ್ಚು ಇವೆ. ರಾಷ್ಟ್ರೀಯ ಶಿಕ್ಷಣ ನೀತಿ, ಬಹುಶಾಖಾ ಶಿಕ್ಷಣ, ಮಾತೃಭಾಷೆಯಲ್ಲಿ ಶಿಕ್ಷಣ ಸೇರಿದಂತೆ ಹಲವು ಸುಧಾರಣೆಗಳನ್ನು ಜಾರಿಗೆ ತರಲಾಗಿದೆ. ಭಾರತೀಯ ಶಿಕ್ಷಣ ಸಂಸ್ಥೆಗಳ ಗುಣಮಟ್ಟ ಸುಧಾರಣೆಗೆ ಒತ್ತು ನೀಡಲಾಗಿದೆ. ಕ್ಯುಎಸ್ ವಿಶ್ವ ವಿಶ್ವವಿದ್ಯಾನಿಲಯದ ರ್ಯಾಂಕಿಂಗ್ ಪಟ್ಟಿಯಲ್ಲಿ ಸ್ಥಾನ ಪಡೆದ ಭಾರತೀಯ ವಿಶ್ವವಿದ್ಯಾಲಯಗಳ ಸಂಖ್ಯೆ ಕಳೆದ ಕೆಲವು ವರ್ಷಗಳಲ್ಲಿ ಗಮನಾರ್ಹವಾಗಿ ಹೆಚ್ಚಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಈ ದೇಶದ ಭವಿಷ್ಯವಾಗಿರುವ ವಿದ್ಯಾರ್ಥಿಗಳ ಮೇಲಿನ ಕಾಳಜಿಯಿಂದ ಇಷ್ಟೊಂದು ಶೈಕ್ಷಣಿಕ ಪ್ರಗತಿಯನ್ನು ಸಾಧಿಸಿದೆ. ಆದರೂ ಸಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಮುಗ್ಧ ವಿದ್ಯಾರ್ಥಿಗಳನ್ನು ಮುಂದಿಟ್ಟುಕೊಂಡು ದೇಶದ ಕಾನೂನಿಗೆ ಅಗೌರವ ತೋರಿ ಪ್ರತಿಭಟನೆ ನಡೆಸುತ್ತಿರುವುದು ಖಂಡನೀಯವೆಂದು ರಾಕೇಶ್ ದೇವಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರಕಾರ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಗರಿಷ್ಠ 10 ವರ್ಷ ಜೈಲು ಶಿಕ್ಷೆ ಮತ್ತು ರೂ.10 ಕೋಟಿ ದಂಡ ವಿಧಿಸಲು ಅವಕಾಶ ನೀಡುವ ಕಠಿಣ ಕಾನೂನು ಮಸೂದೆಗೆ ಅನುಮೋದನೆ ನೀಡಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ತಿಳಿಸಿದ್ದಾರೆ.









