
ಮಡಿಕೇರಿ NEWS DESK ಜು.30 : ನಾನು ಕೂಡ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ತಿಳಿಸಿದ್ದಾರೆ. ಕಳೆದ ಹಲವು ದಶಕಗಳಿಂದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಒಬ್ಬ ಸಕ್ರಿಯ ಸದಸ್ಯನಾಗಿ ನಿರಂತರವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ ಮತ್ತು ಜನಸೇವೆಗೆ ಆದ್ಯತೆ ನೀಡಿದ್ದೇನೆ. ನಿಗಮ, ಪ್ರಾಧಿಕಾರ, ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಕ್ಕಾಗಿ ಪ್ರಭಾವ ಬೀರದೆ ಅಥವಾ ಆಸೆ ಪಡದೆ ಪಕ್ಷದ ನಿರ್ಧಾರಕ್ಕೆ ಬದ್ಧನಾಗಿ ಸಾಮಾನ್ಯ ಕಾರ್ಯಕರ್ತನಂತೆ ಪಕ್ಷಕ್ಕಾಗಿ ದುಡಿದಿದ್ದೇನೆ. ನನ್ನ ಪಕ್ಷ ನಿಷ್ಠೆಗೆ ಪ್ರತಿಫಲವಾಗಿ ವರಿಷ್ಠರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಜನಪ್ರತಿನಿಧಿಯಾಗಿ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಹಾಗೂ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರು ಇಲ್ಲದ ಸಮಯದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷನಾಗಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರವೂ ಯಾವುದೇ ಸ್ಥಾನಮಾನವನ್ನು ಬಯಸದೆ ಸಾಮಾನ್ಯ ಕಾರ್ಯಕರ್ತನಂತೆ ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ. ಪಕ್ಷದ ರಾಜ್ಯ ನಾಯಕರು ಮಾತ್ರವಲ್ಲದೆ ರಾಷ್ಟ್ರದ ವರಿಷ್ಠರೊಂದಿಗೆ ಕೂಡ ಅವಿನಾಭಾವ ನಂಟನ್ನು ಹೊಂದಿದ್ದೇನೆ. ನನ್ನ ಸೇವೆ ರಾಜಕೀಯಕ್ಕೆ ಮಾತ್ರ ಸೀಮಿತವಾಗದೆ ಸಾಮಾಜಿಕ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದೇನೆ. ಕೊಡಗು ಜಿಲ್ಲಾ ವಾಹನ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷನಾಗಿ, ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಅಧ್ಯಕ್ಷನಾಗಿ ಹೀಗೆ ಹಲವು ಹುದ್ದೆಗಳನ್ನು ಅಲಂಕರಿಸಿ ಜೀವನದ ಬಹುತೇಕ ಭಾಗವನ್ನು ಜನಸೇವೆಗೆಂದೇ ಮೀಸಲಿಟ್ಟಿದ್ದೇನೆ. ನಾನು ಅಲ್ಪಸಂಖ್ಯಾತನಾದರೂ ಬಹುಸಂಖ್ಯಾತರು, ಹಿಂದುಳಿದ ವರ್ಗಗಳು, ಕ್ರೈಸ್ತರು ಹಾಗೂ ಪರಿಶಿಷ್ಟರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿದ್ದೇನೆ. ನನಗೆ ಜಿಲ್ಲಾಧ್ಯಕ್ಷ ಸ್ಥಾನವನ್ನು ನೀಡಿದರೆ ಸರ್ವರ ಸಹಕಾರದೊಂದಿಗೆ ಪಕ್ಷ ಸಂಘಟನೆಯನ್ನು ಯಶಸ್ವಿಯಾಗಿ ನಿಭಾಯಿಸುವುದಾಗಿ ವರಿಷ್ಠರ ಗಮನ ಸೆಳೆಯುವುದಾಗಿ ಎಂ.ಎ.ಉಸ್ಮಾನ್ ತಿಳಿಸಿದ್ದಾರೆ.









