
ಮಡಿಕೇರಿ NEWS DESK ಆ.10 : ಸರಕಾರಗಳು ಕಾರ್ಪೋರೇಟ್ ಸಂಸ್ಕೃತಿಯನ್ನು ಉತ್ತೇಜಿಸುವ ಮೂಲಕ ಜನ ಸಾಮಾನ್ಯರ ನೆಮ್ಮದಿಯ ಬದುಕಿನ ಮೇಲಿನ ಕಾಳಜಿಯನ್ನು ಕಳೆದುಕೊಳ್ಳುತ್ತಿವೆ ಎಂದು ಆರೋಪಿಸಿ ಕ್ವಿಟ್ ಇಂಡಿಯಾ ಚಳುವಳಿಯ ಸ್ಫೂರ್ತಿ ಮತ್ತು ನೆನಪಿನ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘಟನೆಗಳು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದವು.
ಸಿಐಟಿಯು ಜಿಲ್ಲಾಧ್ಯಕ್ಷ ಎ.ಸಿ.ಸಾಬು ಹಾಗೂ ಪ್ರಧಾನ ಕಾರ್ಯದರ್ಶಿ ಪಿ.ಆರ್.ಭರತ್ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ನಗರದ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಘೋಷಣೆಗಳ ಸಹಿತ ಪ್ರತಿಭಟನೆ ನಡೆಸಿದರು. ಪಿ.ಆರ್.ಭರತ್ ಮಾತನಾಡಿ, ಬ್ರಿಟಿಷ್ ಸಾಮ್ರಾಜ್ಯದ ಪತನಕ್ಕೆ ಭದ್ರ ಬುನಾದಿ ಹಾಕಿ ಕೊಟ್ಟ “ಕ್ವಿಟ್ ಇಂಡಿಯಾ ಚಳವಳಿ” 1942 ರ ಆ.9 ರಂದು ಆರಂಭಗೊಳ್ಳುವ ಮೂಲಕ ಬ್ರಿಟಿಷ್ ವಸಾಹತು ಶಾಹಿ ಆಡಳಿತದ ಬುಡವನ್ನು ಅಲುಗಾಡಿಸಿತ್ತು. ಅದರ ಪ್ರೇರಣೆಯಡಿ ಪ್ರಸ್ತುತ ವ್ಯವಸ್ಥೆಯಡಿ ವಸಾಹತುಶಾಹಿ ಕಾರ್ಪೋರೇಟ್ ಆಳ್ವಿಕೆಯನ್ನು ವಿರೋಧಿಸಿ ಮತ್ತು ಇವುಗಳಿಗೆ ಬೆಂಬಲವಾಗಿ ನಿಂತ ಸರಕಾರದ ಧೋರಣೆಗಳನ್ನು ಖಂಡಿಸಿ ದೇಶವ್ಯಾಪಿ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟಗಳನ್ನು ರೂಪಿಸಿರುವುದಾಗಿ ತಿಳಿಸಿದರು. ಆಳುವ ಸರಕಾರಗಳು ಕಾರ್ಪೋರೇಟ್ ಸಂಸ್ಥೆಗಳ ಅನುಕೂಲತೆಗಾಗಿ ರೈತರ ಭೂಮಿಯನ್ನು ಬಲವಂತವಾಗಿ ಸ್ವಾಧೀನ ಪಡಿಸಿಕೊಳ್ಳುವ ಕಾರ್ಯಕ್ಕೆ ಇಳಿದಿದೆ. ಇದನ್ನು ಸಂಘಟನೆಗಳು ತೀವ್ರವಾಗಿ ವಿರೋಧಿಸುತ್ತದೆ ಎಂದರು. ಮಾಜಿ ಮುಖ್ಯಮಂತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನಿಷ್ಟ ವೇತನ ಆದೇಶವನ್ನು ಹೊರಡಿಸಿದ್ದರು. ಆದರೆ, ಈಗಿನ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಈ ಕನಿಷ್ಟ ವೇತನ ಆದೇಶವನ್ನು ರದ್ದುಗೊಳಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದರು. ಯಾವುದೇ ಕಾರಣಕ್ಕೂ ಕನಿಷ್ಟ ವೇತನ ಆದೇಶ ರದ್ದುಗೊಳಿಸಬಾರದು, ಒಂದು ವೇಳೆ ರದ್ದುಗೊಳಿಸಿದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
ಕೇಂದ್ರ ಮತ್ತು ರಾಜ್ಯ ಸರಕಾರ ರೈತ, ಕಾರ್ಮಿಕ, ಪರಿಶಿಷ್ಟ, ಮಹಿಳಾ ಹಾಗೂ ಯುವಜನರ ವಿರುದ್ಧವಾದ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಪ್ರಜಾಪ್ರಭುತ್ವದ ಹಕ್ಕುಗಳನ್ನು ದಮನಿಸುತ್ತಿವೆ ಎಂದು ಟೀಕಿಸಿದರು. ದಿನದಿಂದ ದಿನಕ್ಕೆ ನಿತ್ಯೋಪಯೋಗಿ ವಸ್ತುಗಳ ಬೆಲೆ ಗಗನಮುಖಿಯಾಗಿ ಸಾಗುತ್ತಿದೆ. ಇಂಧನ ಬೆಲೆ ಹೆಚ್ಚಳದೊಂದಿಗೆ ಪ್ರತಿಯೊಂದು ವಸ್ತುವಿನ ಬೆಲೆ ಹೆಚ್ಚಳವಾಗುತ್ತಿದ್ದು, ಇವುಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪಿ.ಆರ್.ಭರತ್ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕೃಷಿ ಕೂಲಿ ಕಾರ್ಮಿಕರ ಸಂಘದ ಅಧ್ಯಕ್ಷÀ ರಮೇಶ್, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಅಧ್ಯಕ್ಷೆ ಪ್ರೇಮ, ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಸಾವಿತ್ರಿ, ಮಡಿಕೇರಿ ತಾಲ್ಲೂಕು ಅಧ್ಯಕ್ಷೆ ರಾಜೇಶ್ವರಿ, ಆಸ್ಪತ್ರೆ ನೌಕರರ ಸಂಘದ ಅಧ್ಯಕ್ಷೆ ಜಾನಕಿ, ರೈತ ಸಂಘದ ಪ್ರಮುಖರಾದ ಸುರೇಂದ್ರ ಮತ್ತಿತರರು ಪಾಲ್ಗೊಂಡಿದ್ದರು.









