
ಮಡಿಕೇರಿ NEWS DESK ಆ.12 : ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರಾಗಿ ಆಯ್ಕೆಯಾದ ಫಲಾನುಭವಿಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಆದೇಶ ಪತ್ರ ವಿತರಿಸಿದರು. ಸೋಮವಾರಪೇಟೆಯಲ್ಲಿ ಶಾಸಕರ ಕಛೇರಿ ಆವರಣದಲ್ಲಿ ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರು ಅಂಗನವಾಡಿ ಕೇಂದ್ರಕ್ಕೆ ಬರುವ ಮಕ್ಕಳನ್ನು ತಮ್ಮ ಮಕ್ಕಳಂತೆ ಪ್ರೀತಿಯಿಂದ ನೋಡಿಕೊಳ್ಳಬೇಕು. ಮಳೆಗಾಲವಾದ ಕಾರಣ ಅಂಗನವಾಡಿ ಕೇಂದ್ರ ಸುಸ್ಥಿತಿಯಲ್ಲಿದೆಯೇ ಎನ್ನುವುದನ್ನು ಗಮನಿಸಬೇಕು ಎಂದು ಕಿವಿಮಾತು ಹೇಳಿದರು. ಮಹಿಳೆಯರು ಹಾಗೂ ಮಕ್ಕಳಿಗೆ ಸಂಬ0ಧಿಸಿದ ಸರಕಾರದ ವಿವಿಧ ಸೌಲಭ್ಯಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡಬೇಕು ಮತ್ತು ಸಮಯ ಪಾಲನೆಯೊಂದಿಗೆ ಕರ್ತವ್ಯ ನಿರ್ವಹಿಸಬೇಕು ಎಂದರು.









