
ಮಡಿಕೇರಿ ಆ.13 NEWS DESK : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಕೊಡಗು ಜಿಲ್ಲಾ ಬಿಜೆಪಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಅವ್ಯವಹಾರದ ಆರೋಪದಿಂದ ಮುಕ್ತರಾಗದ ನಾಗೇಂದ್ರ ಅವರಿಗೆ ಸಚಿವ ಸ್ಥಾನವನ್ನು ನೀಡುವ ಮೂಲಕ ಪರಿಶಿಷ್ಟರಿಗೆ ದ್ರೋಹ ಮಾಡಲಾಗಿದೆ ಎಂದು ಆರೋಪಿಸಿದರು. ಈ ಹಿಂದೆ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರದಲ್ಲಿ ಸಚಿವರಾಗಿದ್ದ ನಾಗೇಂದ್ರ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ನಡೆಸಿರುವ ಆರೋಪಕ್ಕೆ ಗುರಿಯಾಗಿದ್ದರು. ನಂತರ ಒತ್ತಡಕ್ಕೆ ಮಣಿದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾಯಕ ಅಧಿಕಾರಿಯೊಬ್ಬರು ಆತ್ಮಹತ್ಯೆ ಕೂಡ ಮಾಡಿಕೊಂಡಿದ್ದರು. ಆದರೆ ಇದೀಗ ಪ್ರಕರಣದ ತನಿಖೆ ಪೂರ್ಣಗೊಳ್ಳುವ ಮೊದಲೇ ಮುಖ್ಯಮಂತ್ರಿಗಳು ನಾಗೇಂದ್ರ ಅವರಿಗೆ ಸಚಿವ ಸ್ಥಾನವನ್ನು ನೀಡಿದ್ದಾರೆ. ಮುಖ್ಯಮಂತ್ರಿಗಳಿಗೆ ಏನಾದರೂ ಭಯವಿತ್ತೇ ಅಥವಾ ಹೈಕಮಾಂಡ್ ಒತ್ತಡವಿತ್ತೇ ಎಂದು ಪ್ರಶ್ನಿಸಿದರು. ನಾಗೇಂದ್ರ ಅವರ ವಿರುದ್ಧ ತನಿಖೆ ಮುಂದುವರೆದಿರುವುದರಿಂದ ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ಪಡೆಯಬೇಕು. ತಪ್ಪಿದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು. ಸದನದ ಒಳಗೆ ಮತ್ತು ಹೊರಗೆ ರಾಜ್ಯವ್ಯಾಪಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. *ಪಕ್ಷಾತೀತ ಹೋರಾಟ* ಕೊಡಗಿನ ರೈತರು ಹಾಗೂ ಗ್ರಾಮಸ್ಥರ ಜೀವನಕ್ಕೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿ ವಿರುದ್ಧ ಪಕ್ಷಾತೀತವಾಗಿ ಒಗ್ಗಟ್ಟಿನ ಹೋರಾಟಕ್ಕೆ ಬಿಜೆಪಿ ಸಿದ್ಧವಿದೆ ಎಂದು ರವಿ ಕಾಳಪ್ಪ ಸ್ಪಷ್ಟಪಡಿಸಿದರು. ವರದಿ ಕುರಿತು ಕೊಡಗು- ಮೈಸೂರು ಸಂಸದ ಯದುವೀರ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ. ಜನರಿಗೆ ಮುಂದಿನ ಜೀವನೋಪಾಯಕ್ಕೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರದೊಂದಿಗೆ ವ್ಯವಹರಿಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ಸಂಸತ್ ಅಧಿವೇಶನ ಮುಗಿದ ನಂತರ ಎಲ್ಲಾ ಸಂಘ ಸಂಸ್ಥೆಗಳು, ಪಂಚಾಯಿತಿ ಮಟ್ಟದ ಸದಸ್ಯರುಗಳು ಹಾಗೂ ರೈತರಿಂದ ಮಾಹಿತಿ ಪಡೆಯುವುದಾಗಿ ಸಂಸದರು ತಿಳಿಸಿದ್ದಾರೆ ಎಂದರು. ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ರಾಜಕೀಯ ಮಾಡದೆ ಎಲ್ಲಾ ಸಂಘ ಸಂಸ್ಥೆಗಳಿಂದ ಆಕ್ಷೇಪಣೆ ಸಲ್ಲಿಸಲು ಮನವಿ ಮಾಡಲಾಗಿದೆ. ಪಕ್ಷಾತೀತವಾಗಿ ಹೋರಾಟ ಮಾಡುವುದಾಗಿ ಬಿಜೆಪಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ ಎಂದು ತಿಳಿಸಿದರು.
*ಪ್ಯಾಕೇಜ್ ನೀಡಿ* ಕೊಡಗಿನಲ್ಲಿ ಮಳೆಯಾಗುತ್ತಿರುವುದರಿಂದ ತೋಟಗಳು ಕೊಳೆ ರೋಗಕ್ಕೆ ತುತ್ತಾಗಿವೆ. ರಾಜ್ಯ ಸರಕಾರ ತಕ್ಷಣ ರೈತರಿಗೆ ಪರಿಹಾರ ಬಿಡುಗಡೆ ಮಾಡಬೇಕು, ಇದಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದ ರವಿ ಕಾಳಪ್ಪ, ಕಳೆದ ಮೂರು ವರ್ಷಗಳಿಂದ ಸರಕಾರ ರೈತರಿಗೆ ಪರಿಹಾರವನ್ನೇ ನೀಡಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಅವರು ಮಾತನಾಡಿ ಅವ್ಯವಹಾರದ ಆರೋಪದಡಿ ತನಿಖೆ ಎದುರಿಸುತ್ತಿರುವವರಿಗೆ ಸಚಿವ ಸ್ಥಾನ ನೀಡಿರುವುದನ್ನು ಸಹಿಸಲು ಸಾಧ್ಯವಿಲ್ಲ, ಮುಖ್ಯಮಂತ್ರಿಗಳು ದಕ್ಷತೆಯಿಂದ ಕಾರ್ಯ ನಿರ್ವಹಿಸಿದರೆ ಮಾತ್ರ ನಮ್ಮ ಬೆಂಬಲವಿದೆ ಎಂದರು. ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮಾತುಗಳನ್ನಾಡುತ್ತಿರುವ ಮುಖ್ಯಮಂತ್ರಿಗಳು ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿರುವುದು ಸರಿಯಾದ ಕ್ರಮವಲ್ಲ. ಮುಖ್ಯಮಂತ್ರಿಗಳು ಒಳ್ಳೆಯ ಚಿಂತನೆಯನ್ನು ಹೊಂದಿದವರೇ ಆಗಿದ್ದರೆ ತಕ್ಷಣ ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಬಿ.ಕೆ.ಅರುಣ್ ಕುಮಾರ್ ಹಾಗೂ ಮಾಧ್ಯಮ ವಕ್ತಾರ ಶಜಿಲ್ ಕೃಷ್ಣನ್ ಉಪಸ್ಥಿತರಿದ್ದರು.









