
ಮಡಿಕೇರಿ ಆ.14 NEWS DESK : ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಾಗಿ ಸುಮಾರು 52 ಸಾವಿರ ಕೋಟಿ ರೂ. ಅನ್ನು ವಾರ್ಷಿಕವಾಗಿ ಖರ್ಚು ಮಾಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಪ್ರಯೋಜನ ಅರ್ಹರಿಗೆ ತಲುಪಂತಗಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಮೆಹರೋಜ್ ಖಾನ್ ಅವರು ಹೇಳಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರ ಸಂವಿಧಾನ ಆಶಯದಂತೆ ನಡೆಯುತ್ತಿದ್ದು, ಬಡವರಿಗೆ, ನಿರ್ಗತಿಕರಿಗೆ ಗ್ಯಾರಂಟಿ ಯೋಜನೆ ತಲುಪಿಸಲು ಶ್ರಮಿಸುತ್ತಿದೆ. ಆ ದಿಸೆಯಲ್ಲಿ ಗೃಹಲಕ್ಷ್ಮಿ, ಗೃಹ ಜ್ಯೋತಿ ಯೋಜನೆಗಳ ಪರಿಶೀಲನಾ ಕಾರ್ಯವೂ ಸಹ ನಡೆಯುತ್ತಿದ್ದು, ಅರ್ಹರಿಗೆ ಗ್ಯಾರಂಟಿ ಯೋಜನೆ ತಲುಪಬೇಕು ಎಂದು ಅವರು ಪ್ರತಿಪಾದಿಸಿದರು. ಸರ್ಕಾರ ಗ್ಯಾರಂಟಿ ಯೋಜನೆಯನ್ನು 2023ರಲ್ಲಿ ಜಾರಿಗೊಳಿಸಿದ್ದು, ಜಿಲ್ಲೆಯಲ್ಲಿ ಶೇ.98 ರಷ್ಟು ಪ್ರಗತಿ ಸಾಧಿಸಿದೆ. ಆ ದಿಸೆಯಲ್ಲಿ ಇನ್ನಷ್ಟು ಪ್ರಯತ್ನಗಳು ನಡೆಯಬೇಕು ಎಂದು ಮೆಹರೋಜ್ ಖಾನ್ ಅವರು ತಿಳಿಸಿದರು.
ಅನ್ನಭ್ಯಾಗ್ಯ ಯೋಜನೆ ಬಡವರಿಗೆ ತಲುಪಬೇಕು. ಆ ನಿಟ್ಟಿನಲ್ಲಿ ಬಿಪಿಎಲ್ ಕಾರ್ಡ್ ಅನ್ನು ಕಡು ಬಡವರಿಗೆ ನೀಡಿ ಪಡಿತರ ವಿತರಿಸುವಂತಾಗಬೇಕು ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಸದಸ್ಯರಾದ ಅಣ್ಣಯ್ಯ ಅವರು ಕುಶಾಲನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಹಲವು ಅರ್ಹ ಕುಟುಂಬಗಳಿಗೆ ಬಿಪಿಎಲ್ ಪಡಿತರ ಚೀಟಿ ನೀಡಬೇಕಿದೆ. ಆ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆದು ಬಿಪಿಎಲ್ ಪಡಿತರ ಚೀಟಿ ವಿತರಿಸುವಂತಾಗಬೇಕು ಎಂದು ಕೋರಿದರು.
ಇದಕ್ಕೆ ಧ್ವನಿಗೂಡಿಸಿದ ಸಮಿತಿ ಸದಸ್ಯರಾದ ಪ್ರಶಾಂತ್ ಅವರು ಶ್ರೀಮಂಗಲ ವ್ಯಾಪ್ತಿಯಲ್ಲಿ ಹಾಡಿಯ ಹಲವು ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ತಲುಪಿಲ್ಲ. ಇದರಿಂದ ಆದಿವಾಸಿಗಳಿಗೆ ತುಂಬಾ ತೊಂದರೆ ಆಗಿದೆ ಎಂದು ಗಮನ ಸೆಳೆದರು. ಈ ಸಂದರ್ಭದಲ್ಲಿ ಮಾತನಾಡಿದ ಆಹಾರ ಇಲಾಖೆಯ ಜಂಟಿ ನಿರ್ದೇಶಕರು ಆರು ತಿಂಗಳ ಕಾಲ ಪಡಿತರ ಆಹಾರ ಪಡೆಯದಿದ್ದಲ್ಲಿ ಅವರಿಗೆ ಅಗತ್ಯವಿಲ್ಲ ಎಂದು ಭಾವಿಸಬೇಕಾಗುತ್ತದೆ. ಇದರಿಂದ ಪಡಿತರ ಕಾರ್ಡುಗಳು ಅಮಾನತು ಆಗಲಿವೆ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರು ನಿಜವಾದ ಬಡವರಿಗೆ ಪಡಿತರ ಬಿಪಿಎಲ್ ಕಾರ್ಡ್ ತಲುಪಿಲ್ಲ, ಅರ್ಹ ಬಡವರಿಗೆ ಸರ್ಕಾರದ ಸೌಲಭ್ಯಗಳು ತಲುಪುವಂತಾಗಬೇಕು ಎಂದು ಅವರು ಹೇಳಿದರು. ಶ್ರೀಮಂಗಲ ವ್ಯಾಪ್ತಿಯಲ್ಲಿ ಲೈನ್ಮ್ಯಾನ್ಗಳ ಕೊರತೆ ಇದ್ದು, ಅಲ್ಲಿದ್ದ ಲೈನ್ಮ್ಯಾನ್ಗಳನ್ನು ಬೇರೆ ಕಡೆಗೆ ನಿಯೋಜಿಸಲಾಗಿದೆ. ಆದ್ದರಿಂದ ಅಗತ್ಯ ಲೈನ್ಮ್ಯಾನ್ಗಳನ್ನು ನೇಮಕ ಮಾಡಬೇಕು ಎಂದು ಪ್ರಶಾಂತ್ ಅವರು ಹೇಳಿದರು. ಯುವನಿಧಿ ಯೋಜನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದ ರಾಜ್ಯ ಉಪಾಧ್ಯಕ್ಷರು, ಜಿಲ್ಲೆಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜು, ಡಿಪ್ಲೋಮೊ, ಎಂಜಿನಿಯರ್ ಕಾಲೇಜುಗಳ ಪದವಿದರರಿಗೆ ಯೋಜನೆಯನ್ನು ತಲುಪಿಸಬೇಕು, ಯುವ ಜನರಿಗೆ ಕೌಶಲ್ಯ ತರಬೇತಿ ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದು ಸಲಹೆ ಮಾಡಿದರು. ಶಕ್ತಿ ಯೋಜನೆಯಡಿ ಎಲ್ಲಾ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣ ಉಚಿತವಾಗಿದ್ದು, ವಿದ್ಯಾರ್ಥಿಗಳು ಸೇವಾ ಸಿಂಧು ಯೋಜನೆಯಡಿ ಅರ್ಜಿ ಸಲ್ಲಿಸಿ ಬಸ್ ಪಾಸ್ ಪಡೆಯಬೇಕು. ಆ ನಿಟ್ಟಿನಲ್ಲಿ ಮಾಹಿತಿ ನೀಡುವಂತೆ ಸಲಹೆ ಮಾಡಿದರು. ಕೆಎಸ್ಆರ್ಟಿ ಬಸ್ ನಿಲ್ದಾಣದಲ್ಲಿ ಶುಚಿತ್ವಕ್ಕೆ ಒತ್ತು ನೀಡುವಂತೆ ರಾಜ್ಯ ಉಪಾಧ್ಯಕ್ಷರು ನಿರ್ದೇಶನ ನೀಡಿದರು. ಸಮಿತಿ ಸದಸ್ಯರಾದ ವಿ.ಪಿ.ಶಶಿಧರ್ ಅವರು ಮಾತನಾಡಿ, ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸಿಸಿ ಟಿವಿ ಅಳವಡಿಸಲಾಗಿದ್ದು, ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಸಲಹೆ ಮಾಡಿದರು. ಗೃಹಲಕ್ಷ್ಮಿ ಯೋಜನೆ ಸಂಬಂಧಿಸಿದಂತೆ ಮಾಹಿತಿ ಪಡೆದ ರಾಜ್ಯ ಉಪಾಧ್ಯಕ್ಷರು, ಈ ಯೋಜನೆ ಅರ್ಹರಿಗೆ ತಲುಪಬೇಕು. ಈ ಯೋಜನೆ ಅರ್ಹರಿಗೆ ತಲುಪಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲಾ ಗ್ಯಾರಂಟಿ ಯೋಜನೆ ಉಪಾಧ್ಯಕ್ಷರು ಹಲವು ವಿಚಾರಗಳ ಕುರಿತು ಮಾತನಾಡಿದರು. ಆಹಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೆಎಸ್ ಆರ್ ಟಿಸಿ, ಉದ್ಯೋಗ ವಿನಿಮಯ, ಸೆಸ್ಕ್ ಮತ್ತಿತರ ಇಲಾಖೆ ಅಧಿಕಾರಿಗಳು ಗ್ಯಾರಂಟಿ ಯೋಜನೆ ಪ್ರಗತಿ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಸಮಿತಿ ಉಪಾಧ್ಯಕ್ಷರಾದ ಶರಿ ಗಿರೀಶ್, ಪಂಕಜ, ಭೀಮಯ್ಯ, ನಾಸಿರ್, ಬಶೀರ್, ಸಮಿತಿ ಸಮಿತಿ ಸದಸ್ಯರಾದ ಕಾಂತರಾಜು, ಮಂದ್ರೀರ ಮೋಹನ್ ದಾಸ್, ಜಾನ್ಸನ್, ಧನ್ಯ ಅವರು ಮಾತನಾಡಿದರು.









