
ಮಡಿಕೇರಿ, ಆ. 19 NEWS DESK : ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸುವುದಾಗಿ ಹೋಮ-ಹವನ ನಡೆಸಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ (ದಸಂಸ) ವತಿಯಿಂದ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಯನ್ನು ಭೇಟಿಯಾದ ದಸಂಸ ಪ್ರಮುಖರು, ಹಿಂದೂ ಸಂಘಟನೆಯೊಂದು ನಡೆಸಿರುವ ಈ ಕೃತ್ಯ ರಾಷ್ಟ್ರವಿರೋಧಿಯಾಗಿದ್ದು, ಅಸ್ಪೃಶ್ಯತೆ ಆಚರಣೆಗೆ ಪ್ರೋತ್ಸಾಹ ನೀಡುವಂತಿದೆ ಎಂದು ಆರೋಪಿಸಿದರು. ಇಂತಹ ಘಟನೆಗಳು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು, ಈ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ದಸಂಸ ಸಂಯೋಜಕ ಎಂ.ಎನ್. ರಾಜಪ್ಪ, ರಾಜಶೇಖರ್, ಪ್ರಮುಖರಾದ ಎಂ.ಇ. ಪೊನ್ನಪ್ಪ, ಚಂದ್ರಶೇಖರ್, ಕಿರಣ್ ಸೇರಿದಂತೆ ಮತ್ತಿತರರು ಹಾಜರಿದ್ದರು.









