
ಕುಶಾಲನಗರ, ಆ.16 NEWS DESK : ಕುಶಾಲನಗರ ತಾಲ್ಲೂಕಿನ ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಬೆಂಗಳೂರಿನ ಕ್ಲೌಡ್ ಸ್ಟಾಪ್ ಇಂಡಿಯಾ ಕಂಪನಿಯ ವತಿಯಿಂದ ಸಿ.ಎಸ್.ಆರ್. ಯೋಜನೆಯಡಿ 5 ಲ್ಯಾಪ್ ಟಾಪ್ ಕಂಪ್ಯೂಟರ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ಕಂಪ್ಯೂಟರ್ ಗಳನ್ನು ಶಾಲೆಗೆ ಹಸ್ತಾಂತರಿಸಿ ಕಂಪ್ಯೂಟರ್ ಕಲಿಕಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಕ್ಲೌಡ್ ಸ್ಟಾಪ್ ಇಂಡಿಯಾ ಕಂಪನಿಯ ಜನರಲ್ ಮೆನೇಜರ್ ಸಬ್ಬಂಡ್ರ ಜಗದೀಶ್ ಕುಶಾಲಪ್ಪ , ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನ ಹಾಗೂ ಕೌಶಲ್ಯಗಳನ್ನು ಬಳಸಿಕೊಂಡು ಉತ್ತಮ ಶಿಕ್ಷಣ ಪಡೆದು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ಕಾಲೇಜಿನ ಪ್ರಾಂಶುಪಾಲ ಪಿ.ಸೋಮಚಂದ್ರ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಕಲಿಕಾ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಕಂಪ್ಯೂಟರ್ ಶಿಕ್ಷಣ ಪಡೆಯಬೇಕು ಎಂದರು. ಕಾಲೇಜು ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕಿ ಶೈಲಜಾ ಮನು ಅಚ್ಚಮಯ್ಯ ಮಾತನಾಡಿ , ಸಮುದಾಯದ ಸಹಭಾಗಿತ್ವ ಕಾರ್ಯಕ್ರಮದಡಿ ಸಿ.ಎಸ್.ಆರ್.ಯೋಜನೆಯಡಿ ತಮ್ಮ ಶಾಲೆಗೆ ಲ್ಯಾಪ್ ಟಾಪ್ ಗಳನ್ನು ನೀಡಿದ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎನ್.ಎಸ್. ರಮೇಶ್, ಎಸ್.ಡಿ.ಎಂ.ಸಿ.ಅಧ್ಯಕ್ಷ ಎಸ್.ಆರ್.ಗಿರೀಶ್, ಸಮಿತಿ ಸದಸ್ಯರು, ಉಪನ್ಯಾಸಕರು ಹಾಗೂ ಶಿಕ್ಷಕರು ಇದ್ದರು.









