
ಮಡಿಕೇರಿ NEWS DESK ಆ.20 : ಪಶ್ಚಿಮಘಟ್ಟಗಳ ಪರಿಸರ ಸೂಕ್ಷö್ಮ ಪ್ರದೇಶಗಳ ಗಡಿ ಗುರುತಿಸುವಿಕೆ ಹಿನ್ನೆಲೆಯಲ್ಲಿ ಕೊಡಗಿನ ಜನರ ಹಿತರಕ್ಷಣೆಗೆ ಕೇಂದ್ರ ಪರಿಸರ ಸಚಿವಾಲಯದೊಂದಿಗೆ ನಿರಂತರ ಮಾತುಕತೆಯಲ್ಲಿ ತೊಡಗಿರುವುದಾಗಿ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ. ಡಾ.ಕೆ.ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯನಿರತ ತಂಡದ ವರದಿ ಆಧಾರಿತ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶಗಳ ಕರಡು ಅಧಿಸೂಚನೆಯ ಹಿನ್ನೆಲೆಯಲ್ಲಿ, ಕೊಡಗು ಜಿಲ್ಲೆಯ ಜನರ ಹಕ್ಕುಗಳು, ಜೀವನೋಪಾಯ ಮತ್ತು ಆಸ್ತಿಗಳನ್ನು ರಕ್ಷಿಸಲು ತಮ್ಮ ಕಚೇರಿಯು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಅವರು ಭರವಸೆ ನೀಡಿದ್ದಾರೆ. ಜಿಲ್ಲೆಯಾದ್ಯಂತ ಸ್ಥಳೀಯ ಸಮುದಾಯಗಳು, ರೈತರು, ಬೆಳೆಗಾರರು ಮತ್ತು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಎತ್ತಿರುವ ಪ್ರತಿಯೊಂದು ನ್ಯಾಯಯುತ ಕಳಕಳಿ, ಆಕ್ಷೇಪಣೆ ಹಾಗೂ ವಾಸ್ತವಾಂಶಗಳನ್ನು ಕ್ರಮಬದ್ಧವಾಗಿ ದಾಖಲಿಸಿ ಕೇಂದ್ರ ಸಚಿವಾಲಯದ ಗಮನಕ್ಕೆ ತರಲಾಗುತ್ತಿದೆ ಎಂದು ಸಂಸದರು ಪುನರುಚ್ಚರಿಸಿದ್ದಾರೆ. ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ. ಕೊಡಗಿನ ವಿಶಿಷ್ಟ ಭೌಗೋಳಿಕ ಮತ್ತು ಸಾಮಾಜಿಕ-ಆರ್ಥಿಕ ವಾಸ್ತವತೆಗಳನ್ನು ಕೇಂದ್ರ ಸಚಿವಾಲಯಕ್ಕೆ ಮನವರಿಕೆ ಮಾಡಿಕೊಡಲಾಗಿದ್ದು, ಅಂತಿಮ ಅಧಿಸೂಚನೆಯು ನಮ್ಮ ಜನರ ಹಿತಾಸಕ್ತಿಗಳನ್ನು ಸಂಪೂರ್ಣವಾಗಿ ರಕ್ಷಿಸುವಂತೆ ಮಾಡಲು ನಾವು ಬದ್ಧರಾಗಿದ್ದೇವೆ ಯದುವೀರ್ ಒಡೆಯರ್ ತಿಳಿಸಿದ್ದಾರೆ.









