
ಮಡಿಕೇರಿ NEWS DESK ಆ.24 : ವಿಶ್ವ ಬುಡಕಟ್ಟು ದಿನಾಚರಣೆ ಹಾಗೂ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಂಸ್ಕೃತಿ ಸಿರಿ ಟ್ರಸ್ಟ್ ಕೊಡಗು ವತಿಯಿಂದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಹಾಗೂ ಭಾರತೀಯ ವೈದ್ಯಕೀಯ ಸಂಘ ಕೊಡಗು ಘಟಕದ ಸಹಯೋಗದಲ್ಲಿ ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಬುಡಕಟ್ಟು ಸಮುದಾಯವು ವಿಶಿಷ್ಟ ಸಂಸ್ಕೃತಿ, ಪರಂಪರೆ, ಆಚಾರ-ವಿಚಾರ ಹಾಗೂ ಜೀವನ ಪದ್ಧತಿಯನ್ನು ಹೊಂದಿದ್ದು, ಅವುಗಳನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು. ಬುಡಕಟ್ಟು ಸಮುದಾಯದ ಮಕ್ಕಳು ಹಾಗೂ ಯುವಜನರಿಗೆ ಶಿಕ್ಷಣ, ಆರೋಗ್ಯ ಮತ್ತು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅಗತ್ಯ ಅವಕಾಶಗಳು ದೊರೆಯಬೇಕು ಎಂದರು. ವಿಶ್ವ ಬುಡಕಟ್ಟು ದಿನಾಚರಣೆ ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗದೆ, ಬುಡಕಟ್ಟು ಸಮುದಾಯದ ಸಾಧನೆಗಳು, ಸಮಸ್ಯೆಗಳು ಮತ್ತು ಹಕ್ಕುಗಳ ಕುರಿತು ಜಾಗೃತಿ ಮೂಡಿಸುವ ವೇದಿಕೆಯಾಗಬೇಕು. ಮಕ್ಕಳಲ್ಲಿ ತಮ್ಮ ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ಹೆಮ್ಮೆ ಹಾಗೂ ಗೌರವ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಸಲಹೆ ನೀಡಿದರು. ಬುಡಕಟ್ಟು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರತಿಭಾವಂತ ಮಕ್ಕಳಿಗೆ ಸೂಕ್ತ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ದೊರೆತರೆ ಅವರು ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಬಾಳುಗೋಡು ಏಕಲವ್ಯ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಿರುವುದು ಶ್ಲಾಘನೀಯ ಎಂದು ಎ.ಎಸ್.ಪೊನ್ನಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಉಪವಿಭಾಗಾಧಿಕಾರಿ ನಿತಿನ್ ಚಿಕ್ಕಿ ಮಾತನಾಡಿ, ಬುಡಕಟ್ಟು ಮಕ್ಕಳ ಶಿಕ್ಷಣ, ಪ್ರತಿಭೆ ಹಾಗೂ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಅವರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಅಗತ್ಯವಿದೆ ಎಂದರು. ಕಾರ್ಯಕ್ರಮದಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿ ಅಭಿನಂದಿಸಲಾಯಿತು. ವಿಶ್ವ ಬುಡಕಟ್ಟು ದಿನಾಚರಣೆಯ ಅಂಗವಾಗಿ ನಡೆದ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಸಂಸ್ಕೃತಿ ಸಿರಿ ಟ್ರಸ್ಟ್ ವತಿಯಿಂದ ಬಹುಮಾನ ವಿತರಿಸಲಾಯಿತು. ರಾಷ್ಟçಮಟ್ಟದ ಶೂಟಿಂಗ್ ನಲ್ಲಿ ಪ್ರಥಮ ಸ್ಥಾನ ಪಡೆದ ಶಾಲೆಯ ವಿದ್ಯಾರ್ಥಿ ಉದಂತ್ ಪಿ.ಎಂ ಅವರನ್ನು ಶಾಸಕ ಎ.ಎಸ್.ಪೊನ್ನಣ್ಣ ಸನ್ಮಾನಿಸಿ ಅಭಿನಂದಿಸಿದರು. ಸಮಾಜ ಸೇವೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಡಾ.ವಿಕ್ರಂ ಶೆಟ್ಟಿ, ಡಾ.ಚಿನ್ಮಯಿ, ವತ್ಸಲಾ ರಮೇಶ್ ಹಾಗೂ ಕೊಡಗಿನ ಹೆಸರಾಂತ ಗಾಯಕಿ ಪುತ್ತಮನೆ ವಿದ್ಯಾ ಜಗದೀಶ್ ಅವರನ್ನು ಸಂಸ್ಕೃತಿ ಸಿರಿ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಕೂಡ ಟ್ರಸ್ಟ್ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಡಾ.ಲೋಕೇಶ್, ಕೊಡಗು ಜಿಲ್ಲಾ ಆಸ್ಪತ್ರೆಯ ತುರ್ತು ವಿಭಾಗದ ಮುಖ್ಯಸ್ಥ ಡಾ.ಮೋಹನ್ ಅಪ್ಪಾಜಿ, ಡಾ.ಸೋಮಶೇಖರ್, ರಕ್ತನಿಧಿ ಮುಖ್ಯಸ್ಥ ಡಾ.ಕರುಂಬಯ್ಯ, ಡಾ.ನಂಜುAಡಯ್ಯ, ಬುಡಕಟ್ಟು ಕಲ್ಯಾಣಾಧಿಕಾರಿ ಭಾಗೀರಥಿ, ವಿರಾಜಪೇಟೆ ಡಿವೈಎಸ್ಪಿ ಮಹೇಶ್ ಕುಮಾರ್, ಏಕಲವ್ಯ ಶಾಲೆಯ ಪ್ರಾಂಶುಪಾಲ ಮೇವಾಲಾಲ್ ಕಟಿಕ್ ಹಾಗೂ ಸಂಸ್ಕೃತಿ ಸಿರಿ ಟ್ರಸ್ಟ್ ಅಧ್ಯಕ್ಷೆ ಹರಿಣಿ ವಿಜಯ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ವೈದ್ಯಕೀಯ ತಪಾಸಣಾ ಶಿಬಿರದಲ್ಲಿ 200ಕ್ಕೂ ಅಧಿಕ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರಿಗೆ ವಿವಿಧ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಸಲಹೆಗಳನ್ನು ನೀಡಲಾಯಿತು. ರಕ್ತದಾನ ಶಿಬಿರದಲ್ಲೂ ಹಲವರು ಸ್ವಯಂಪ್ರೇರಿತರಾಗಿ ಭಾಗವಹಿಸಿ ರಕ್ತದಾನ ಮಾಡಿದರು. ಬುಡಕಟ್ಟು ಸಂಸ್ಕೃತಿಯ ವೈವಿಧ್ಯತೆಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ವಿದ್ಯಾರ್ಥಿಗಳು ಸಾಂಪ್ರದಾಯಿಕ ಕಲೆ, ನೃತ್ಯ ಹಾಗೂ ತಮ್ಮ ಸಾಂಸ್ಕೃತಿಕ ಪ್ರತಿಭೆಯನ್ನು ಪ್ರದರ್ಶಿಸಿದರು. ಶಿಕ್ಷಣ, ಆರೋಗ್ಯ, ಸಂಸ್ಕೃತಿ ಸಂರಕ್ಷಣೆ ಮತ್ತು ಸಮಾಜ ಸೇವೆಯನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿದ ಕಾರ್ಯಕ್ರಮ ಅರ್ಥಪೂರ್ಣವಾಗಿ ಗಮನ ಸೆಳೆಯಿತು.










