ಮಡಿಕೇರಿ, NEWS DESK ಆ.25 : ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನದ ಪ್ರಯುಕ್ತ ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ” ನಡೆಯಲಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷರಾದ ಜಿ.ಹೆಚ್.ಮೊಹಮ್ಮದ್ ಹನೀಫ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, “ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)” ಎಂಬ ಶೀರ್ಷಿಕೆಯಲ್ಲಿ ನಡೆಯಲಿರುವ ಅಭಿಯಾನದ ಮೂಲಕ ಪ್ರವಾದಿ ಮುಹಮ್ಮದ್ ಅವರು ಜಗತ್ತಿಗೆ ನೀಡಿರುವ ಸತ್ಯ, ಶಾಂತಿ, ನ್ಯಾಯ, ಕರುಣೆ, ಸಮಾನತೆ, ಘನತೆಯ ಕುರಿತ ಸಂದೇಶಗಳನ್ನು ಜನತೆಗೆ ಪರಿಚಯಿಸುವುದು, ಅವರ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರ ಮಾಡುವುದು ಮತ್ತು ಪರಸ್ಪರ ಬಾಂಧವ್ಯವನ್ನು ಬಲಪಡಿಸುವುದು ಅಭಿಯಾನದ ಉದ್ದೇಶವಾಗಿದೆ ಎಂದರು.
ಸೀರತ್ ಅಭಿಯಾನದ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳು, ವಿಚಾರಗೋಷ್ಠಿ, ಮಸೀದಿಗಳಲ್ಲಿ ಸಾರ್ವಜನಿಕ ಜುಮಾ ಪ್ರವಚನ, ಪುಸ್ತಕ ಬಿಡುಗಡೆ, ಆಸ್ಪತ್ರೆ, ಅನಾಥಾಲಯ, ವೃದ್ಧಾಶ್ರಮಗಳಿಗೆ ಭೇಟಿಯನ್ನಿತ್ತು ಅಲ್ಲಿರುವವರಿಗೆ ಅಗತ್ಯ ನೆರವು ಸಾಂತ್ವನ ನೀಡುವ ಕಾರ್ಯಕ್ರಮ, ಸೀರತ್ ಎಕ್ಸಿಬಿಷನ್, ಸಮಾಜಸೇವಾ ಚಟುವಟಿಕೆಗಳು ಹಾಗೂ ಸೌಹಾರ್ದ ಸಂದೇಶ ರ್ಯಾಲಿಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.
ಪುಸ್ತಕಗಳ ಅನಾವರಣ- ಅಭಿಯಾನದ ಅಂಗವಾಗಿ ಖ್ಯಾತ ಸಾಹಿತಿ ಯೋಗೇಶ್ ಮಾಸ್ಟರ್ ಅವರು ಬರೆದ “ಮಾನವ ಮನಸ್ಸಿನ ಕೃಷಿಕ-ಮನದೊಡೆಯ ಪ್ರವಾದಿ ಮುಹಮ್ಮದ್(ಸ)” ಹಾಗೂ ವಾರ್ತಾ ಭಾರತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ ಅವರು ಬರೆದ “ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್(ಸ)” ಕೃತಿಗಳನ್ನು ಮರು ಬಿಡುಗಡೆ ಮಾಡಲಾಯಿತು.
ಸುದ್ದಿಗೋಷ್ಠಿಯಲ್ಲಿ ಜಮಾಅತೇ ಇಸ್ಲಾಮಿ ಹಿಂದ್ನ ಜಿಲ್ಲಾ ಕಾರ್ಯದರ್ಶಿ ಎಂ.ಎ.ಮುಹಮ್ಮದ್ ಮುಸ್ತಫ, ಸೋಮವಾರಪೇಟೆ ತಾಲ್ಲೂಕು ವಲಯ ಸಂಚಾಲಕ ಎಂ.ಹೆಚ್.ಮಹಮ್ಮದ್ ಮುಸ್ತಫ, ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಸದಸ್ಯ ರಮೀಜ್ ಅಹಮ್ಮದ್ ಹಾಗೂ ಜಮಾಅತೆ ಇಸ್ಲಾಮಿ ಹಿಂದ್ ಸದಸ್ಯ ಖರಾಮತ್ ಉಲ್ಲಾ ಖಾನ್ ಉಪಸ್ಥಿತರಿದ್ದರು.








