ಮಡಿಕೇರಿ, NEWS DESK ಆ.28: ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಬಿಟ್ಟು ಕೊಡಗಿನ ಜನರು ಹಾಗೂ ರೈತರ ಹಿತಾಸಕ್ತಿಗೆ ಅನುಗುಣವಾಗಿ ಸ್ಪಷ್ಟವಾದ ದಾಖಲೆ ಆಧಾರಿತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ಆಗ್ರಹಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ರಾಜ್ಯ ಸರಕಾರ ಹಾಗೂ ಶಾಸಕರು ಕೇಂದ್ರ ಸರಕಾರದತ್ತ ಬೊಟ್ಟು ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ. ಇದು ಕೊಡಗು ಸೇರಿದಂತೆ ರಾಜ್ಯದ ಎಲ್ಲಾ ರೈತರಿಗೆ ಸರಕಾರ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ.
ಕಸ್ತೂರಿ ರಂಗನ್ ವರದಿಯನ್ನು 2013ರಲ್ಲಿ ಅಂದಿನ ಕೇಂದ್ರ ಸರಕಾರ ಒಪ್ಪಿಕೊಂಡಿದ್ದು, ವರದಿ ಅಂಗೀಕಾರಗೊಂಡ ಬಳಿಕವೂ ಇದನ್ನು ಏಕೆ ಅನುಷ್ಠಾನಗೊಳಿಸಲಾಗಿಲ್ಲ ಎಂಬುದಾಗಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಕೇಂದ್ರ ಸರಕಾರವನ್ನು ಪ್ರಶ್ನಿಸುತ್ತಿದೆ. ಕಸ್ತೂರಿ ರಂಗನ್ ವರದಿಯಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಲು ರಾಜ್ಯ ಸರಕಾರಕ್ಕೆ ಅವಕಾಶವಿದೆ. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವೂ ತನ್ನ ಆದೇಶದಲ್ಲಿ ರಾಜ್ಯ ಸರಕಾರಕ್ಕೆ ಅವಕಾಶ ನೀಡಿರುವುದಾಗಿ ಹೇಳಿಕೊಂಡಿದೆ. ಹೀಗಾಗಿ ರಾಜ್ಯ ಸರಕಾರ ತನ್ನ ಆಕ್ಷೇಪಣೆಗಳು ಹಾಗೂ ಅಗತ್ಯ ತಿದ್ದುಪಡಿಗಳ ಪ್ರಸ್ತಾವನೆಯನ್ನು ದಾಖಲೆಗಳೊಂದಿಗೆ ಕೇಂದ್ರಕ್ಕೆ ಸಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕೊಡಗಿನ ಜನರು ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ವಿರೋಧಿಸುತ್ತಿಲ್ಲ. ತಮ್ಮ ಸ್ವಂತ ತೋಟಗಳು ಹಾಗೂ ಜನವಸತಿ ಪ್ರದೇಶಗಳನ್ನು ಪರಿಸರ ಸೂಕ್ಷö್ಮ ಪ್ರದೇಶಗಳೆಂದು ಗುರುತಿಸುವುದಕ್ಕೆ ಮಾತ್ರ ವಿರೋಧವಿದೆ ಎಂದು ರಾಕೇಶ್ ದೇವಯ್ಯ ಸ್ಪಷ್ಟಪಡಿಸಿದ್ದಾರೆ.
ದಾಖಲೆಗಳ ಪ್ರಕಾರ ಅರಣ್ಯ ಪ್ರದೇಶಗಳನ್ನು ಮಾತ್ರ ಪರಿಸರ ಸೂಕ್ಷö್ಮ ಪ್ರದೇಶವೆಂದು ಗುರುತಿಸಿ, ಅದಕ್ಕೆ ಸೀಮಿತವಾಗಿ ‘ಜೀರೋ ಬಫರ್ ಝೋನ್’ ನಿಗದಿಪಡಿಸಬೇಕು. ಇದಕ್ಕಾಗಿ ರಾಜ್ಯ ಸರಕಾರ ಮೊದಲು ಭೌತಿಕ ಸಮೀಕ್ಷೆ ನಡೆಸಿ, ನೈಸರ್ಗಿಕ ಅರಣ್ಯ, ರೈತರ ತೋಟಗಳು ಹಾಗೂ ಜನವಸತಿ ಪ್ರದೇಶಗಳನ್ನು ಪ್ರತ್ಯೇಕವಾಗಿ ಗುರುತಿಸಬೇಕು. ಕೇರಳ ರಾಜ್ಯ ಸರಕಾರ ಇದೇ ರೀತಿಯ ಕ್ರಮ ಕೈಗೊಂಡು ತನ್ನ ರಾಜ್ಯದ ಜನರ ಹಿತಾಸಕ್ತಿಯನ್ನು ಕಾಪಾಡಿದೆ. ಕರ್ನಾಟಕ ಸರಕಾರ ಕೇರಳದ ಮಾದರಿಯಲ್ಲಿ ತನ್ನ ಆಕ್ಷೇಪಣೆ ಹಾಗೂ ತಿದ್ದುಪಡಿಗಳನ್ನು ಕೇಂದ್ರಕ್ಕೆ ಸಲ್ಲಿಸಬೇಕು.
ರಾಜ್ಯ ಸರಕಾರ ತನ್ನ ಆಕ್ಷೇಪಣೆ ಮತ್ತು ತಿದ್ದುಪಡಿಗಳನ್ನು ಕೇಂದ್ರಕ್ಕೆ ಕಳುಹಿಸಿದ ಬಳಿಕ ಸಂಬಂಧಪಟ್ಟ ಸಮಿತಿ ಹಾಗೂ ಸಚಿವರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ಯದುವೀರ್ ಒಡೆಯರ್ ಅವರು ಈಗಾಗಲೇ ತಿಳಿಸಿದ್ದಾರೆ. ರಾಜ್ಯ ಸರಕಾರ ಮೊದಲು ಈ ಪ್ರಕ್ರಿಯೆಯನ್ನು ಕೈಗೊಂಡು ನಂತರ ಕೇಂದ್ರ ಸರಕಾರದೆಡೆಗೆ ಬೊಟ್ಟು ಮಾಡಲಿ ಎಂದು ತಿಳಿಸಿದ್ದಾರೆ.
ಅರಣ್ಯ ಸಂರಕ್ಷಣೆಗೆ ಕೊಡಗಿನ ರೈತರು ಹಾಗೂ ಜನರು ಸದಾ ಬೆಂಬಲವಾಗಿ ನಿಂತಿದ್ದಾರೆ. ಪರಿಸರ ಸಂರಕ್ಷಣೆಯ ಜೊತೆಗೆ ರೈತರು ಮತ್ತು ಜನವಸತಿ ಪ್ರದೇಶಗಳ ಹಿತಾಸಕ್ತಿಯನ್ನೂ ಕಾಪಾಡುವ ಜವಾಬ್ದಾರಿ ಸರಕಾರದ್ದಾಗಿದೆ. ಆದ್ದರಿಂದ ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ಜನರ ಹಾಗೂ ರೈತರ ನೆರವಿಗೆ ರಾಜ್ಯ ಸರಕಾರ ನಿಲ್ಲಬೇಕು ಎಂದು ರಾಕೇಶ್ ದೇವಯ್ಯ ಆಗ್ರಹಿಸಿದ್ದಾರೆ.








