ಮಡಿಕೇರಿ, NEWS DESK ಆ.29 : ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ಸ್ಪಂದಿಸದಿದ್ದಲ್ಲಿ ಮಾಹಿತಿ ನೀಡಬಹುದಾಗಿದೆ. ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆಯು ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್ಪಿ ಅವರು, ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ, ಸೇವನೆ ಮತ್ತಿತರ ಸಂಬಂಧ ಕಳೆದ 8 ತಿಂಗಳಲ್ಲಿ 237 ಪ್ರಕರಣಗಳನ್ನು ದಾಖಲಿಸಲಾಗಿದ್ದು, 333 ಆರೋಪಿಗಳನ್ನು ಬಂಧಿಸಲಾಗಿದೆ. ಮಾದಕ ವ್ಯಸನಕ್ಕೆ ತುತ್ತಾಗದಂತೆ ಹಾಡಿ ಪ್ರದೇಶಗಳು ಸೇರಿದಂತೆ ಇತರೆ ಕಡೆಗಳಲ್ಲಿ ಜಾಗೃತಿ ಮೂಡಿಸಿ, ಸಮಾಜದಲ್ಲಿ ಇತರರಂತೆ ಬದುಕು ಕಟ್ಟಿಕೊಳ್ಳುವಂತಾಗಲು ಪೊಲೀಸ್ ಇಲಾಖೆಯಿಂದ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ ಎಂದರು.
ಪ್ರತೀ ತಿಂಗಳು ಪೊಲೀಸ್ ಠಾಣೆಗಳಲ್ಲಿ ಪ್ಲಾಂಟರ್ಸ್ ಮತ್ತು ಮಾಲೀಕರೊಂದಿಗೆ ಸಭೆ ನಡೆಸಲಾಗುತ್ತಿದ್ದು, ರಾಜ್ಯದ ಹೊರ ಭಾಗದಿಂದ ಬರುವ ಕೂಲಿ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ ಇಡಲಾಗಿದೆ ಎಂದು ತಿಳಿಸಿದರು.
ಸಭೆಯ ಆರಂಭದಲ್ಲಿ ಮಾತನಾಡಿದ ಸಮಿತಿ ಸದಸ್ಯರಾದ ಕೊಡ್ಲಿಪೇಟೆಯ ಜನಾರ್ಧನ ಜೆ.ಎಲ್. ಅವರು, ಶನಿವಾರಸಂತೆ, ಕೊಡ್ಲಿಪೇಟೆ ಮತ್ತಿತರ ಕಡೆಗಳಲ್ಲಿ ಪರವಾನಗಿ ಇಲ್ಲದೆ ಮದ್ಯವನ್ನು ಮಾರಾಟ ಮಾಡುತ್ತಿದ್ದು, ಈ ಬಗ್ಗೆ ನಿಗಾವಹಿಸಬೇಕು ಎಂದು ಕೋರಿದರು.
ಪರಿಶಿಷ್ಟರ ಮೇಲೆ ದೌರ್ಜನ್ಯ ನಿಯಂತ್ರಣ ಸಂಬಂಧ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯಗಳು ಆಗಬೇಕು ಎಂದು ಅವರು ಮನವಿ ಮಾಡಿದರು.
ಪ್ರಮುಖರಾದ ಪರಮೇಶ್ ಅವರು ಮಾತನಾಡಿ, ಕಾಫಿ ತೋಟದ ಕೆಲಸಕ್ಕಾಗಿ ಅಸ್ಸಾಂ ಮತ್ತಿತರ ಕಡೆಗಳಿಂದ ಕೂಲಿ ಕಾರ್ಮಿಕರು ಜಿಲ್ಲೆಗೆ ಆಗಮಿಸುತ್ತಿದ್ದು, ಈ ಕೂಲಿ ಕಾರ್ಮಿಕರ ಬಗ್ಗೆ ನಿಗಾವಹಿಸಲು ಮಾಲೀಕರೊಂದಿಗೆ ಸಭೆ ನಡೆಸಿ, ಕಾರ್ಮಿಕರ ಚಲನವಲನಗಳ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು ಎಂದು ಕೋರಿದರು.
ಕೊಡಗು ಜಿಲ್ಲೆಯ ಉತ್ತರ ಭಾಗದ ವೀರೇಂದ್ರ ಅವರು ಮಾತನಾಡಿ, ಕೆಲವು ಪೊಲೀಸ್ ಠಾಣೆಗಳಲ್ಲಿ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದು, ಸ್ವಜಾತಿ ಬಂಧುಗಳಿಂದಲೇ ತೊಂದರೆ ಅನುಭವಿಸುವಂತಾಗಿದೆ. ಈ ಸಂಬಂಧ ಪೊಲೀಸ್ ಇಲಾಖೆಯವರು ಪರಿಶೀಲಿಸಿ ಪ್ರಕರಣ ದಾಖಲಿಸಬೇಕು. ಅದನ್ನು ಬಿಟ್ಟು ದೂರು ನೀಡಿದ್ದಾರೆ ಎಂದು ವಿಚಾರಣೆ ಮಾಡದೆ ಸುಳ್ಳು ಪ್ರಕರಣ ದಾಖಲಿಸಬಾರದು ಎಂದು ಮನವಿ ಮಾಡಿದರು.
‘ದಲಿತ ನಾಯಕರೆಂದು ಹೆಸರು ಹೇಳಿಕೊಂಡು ಸ್ವಜಾತಿ ವ್ಯಕ್ತಿಗಳ ವಿರುದ್ಧವೇ ಕತ್ತಿ ಮಸೆಯುತ್ತಾರೆ, ಇದು ಒಳ್ಳೆಯ ಬೆಳವಣಿಗೆಯಲ್ಲ. ಈ ಬಗ್ಗೆ ಪೊಲೀಸ್ ಇಲಾಖೆಯವರು ಪೊಲೀಸ್ ಠಾಣೆಗೆ ದೂರು ಬಂದಾಗ ಸರಿಯಾದ ವಿಚಾರಣೆ ನಡೆಸಬೇಕು’ ಎಂದು ವೀರೇಂದ್ರ ಅವರು ಅವಲತ್ತುಕೊಂಡರು.
ಪ್ರಮುಖರಾದ ದೇವರಾಜು ಅವರು ಮಾತನಾಡಿ, ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯಲ್ಲಿ ಭೂಮಿಗೆ ಸಂಬಂಧಿಸಿದಂತೆ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿದ್ದು, ಪರಿಶಿಷ್ಟರ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಕಂದಾಯ ಇಲಾಖೆಯೊಂದಿಗೆ ಜಂಟಿ ಸರ್ವೆ ನಡೆಸಿ ಅರ್ಹರಿಗೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು.
ಪರಿಶಿಷ್ಟರು ಸಣ್ಣಪುಟ್ಟ ಭೂಮಿ ಹೊಂದಿ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಭೂಮಿಗೆ ಸಂಬಂಧಿಸಿದಂತೆ ಹೆಚ್ಚಿನ ದೌರ್ಜನ್ಯಗಳು ನಡೆಯುತ್ತಿವೆ. ಈ ಸಂಬಂಧ ತಾವು ಮತ್ತು ಜಿಲ್ಲಾಧಿಕಾರಿ ಅವರ ನೇತೃತ್ವದಲ್ಲಿ ಜಂಟಿ ಸಭೆ ನಡೆಸುವಂತಾಗಬೇಕು ಎಂದು ಕೋರಿದರು.
ಕೆ.ಬಿ. ರಾಜು ಅವರು ಮಾತನಾಡಿ, ಪರಿಶಿಷ್ಟರ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಪ್ರತೀ ತಾಲ್ಲೂಕಿನಲ್ಲಿ ಮೂರು ತಿಂಗಳಿಗೊಮ್ಮೆಯಾದರೂ ಸಭೆ ನಡೆಸಬೇಕು. ಇದರಿಂದ ಜಿಲ್ಲಾ ಮಟ್ಟಕ್ಕೆ ಬರುವುದು ತಪ್ಪುತ್ತದೆ ಎಂದು ಸಲಹೆ ಮಾಡಿದರು.
ಪ್ರಜಾಪ್ರಭುತ್ವದಲ್ಲಿ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಹಲವು ರೀತಿಯ ಹೋರಾಟ ಮಾಡಬೇಕಾಗುತ್ತದೆ. ಅಂತಹ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ ಅವರು, ಹೋರಾಟಗಾರರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಮನವಿ ಮಾಡಿದರು.
ಸಮಿತಿ ಸದಸ್ಯರಾದ ಪಿ.ಪಿ. ಸುಕುಮಾರ್ ಅವರು ಮಾತನಾಡಿ, ಶಾಲಾ-ಕಾಲೇಜು ಹಂತದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಹೆಚ್ಚಿನ ಅರಿವು ಮೂಡಿಸಬೇಕು. ಜನದಟ್ಟಣೆ ಪ್ರದೇಶಗಳಲ್ಲಿ ಪೊಲೀಸರು ಹೆಚ್ಚಿನ ನಿಗಾ ಇಡಬೇಕು ಎಂದರು. ಮತ್ತೊಬ್ಬ ಸಮಿತಿ ಸದಸ್ಯರಾದ ಮುತ್ತಪ್ಪ ಅವರು ಹಲವು ವಿಚಾರಗಳ ಕುರಿತು ಪ್ರಸ್ತಾಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿವೈಎಸ್ಪಿ ಮಹೇಶ್ ಕುಮಾರ್ ಅವರು, ಲೈನ್ ಮನೆಗಳು ಸೇರಿದಂತೆ ಹಲವು ಕಡೆಗಳಲ್ಲಿ ಕಾನೂನು ಸುವ್ಯವಸ್ಥೆ ಕುರಿತು ತಳಮಟ್ಟದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸ ಮಾಡುವ ಪ್ರದೇಶಗಳನ್ನು ಪರಿಶೀಲಿಸಲಾಗುತ್ತದೆ. ಅಸ್ಸಾಂ ಸೇರಿದಂತೆ ಇತರೆ ಕಡೆಗಳಿಂದ ಬಂದಿರುವವರ ಬಗ್ಗೆ ಮಾಹಿತಿ ಪಡೆಯಲಾಗುತ್ತದೆ. ಜೊತೆಗೆ ಮಾಲೀಕರೊಂದಿಗೂ ಸಮಾಲೋಚನೆ ನಡೆಸಲಾಗುತ್ತದೆ. ಸಂಶಯ ಇದ್ದಲ್ಲಿ ಪರಿಶೀಲಿಸಲಾಗುತ್ತದೆ ಎಂದರು.
ಸಹಾಯಕ ಸಬ್ ಇನ್ಸ್ಪೆಕ್ಟರ್ ಸುಮತಿ ಅವರು ಮಾತನಾಡಿ, ಹಾಡಿ ಜನರು ಆಧಾರ್ ಕಾರ್ಡ್ ಮತ್ತಿತರ ಪ್ರಮಾಣ ಪತ್ರಗಳನ್ನು ಇನ್ನೂ ಸಹ ಪಡೆದುಕೊಳ್ಳದಿದ್ದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕವನ್ನು ಸಂಪರ್ಕಿಸಬಹುದಾಗಿದೆ ಎಂದರು.
ಅಕ್ಕಪಡೆ ವಾಹನದ ಮೂಲಕ ಪೊಲೀಸರು ಹಾಗೂ ಗೃಹರಕ್ಷಕರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, 112 (ಪೊಲೀಸ್ ಸಹಾಯವಾಣಿ), 181 (ಮಹಿಳಾ ಸಹಾಯವಾಣಿ) ಮತ್ತು 1098 (ಮಕ್ಕಳ ಸಹಾಯವಾಣಿ)ಗೆ ದೂರು ದಾಖಲಿಸಿದ್ದಲ್ಲಿ ಅಕ್ಕಪಡೆ ತಕ್ಷಣವೇ ಭೇಟಿ ನೀಡಿ ಮಾಹಿತಿ ಪಡೆಯಲಿದೆ. ಮಹಿಳೆಯರು ಮತ್ತು ಮಕ್ಕಳ ಬಗ್ಗೆ ಹೆಚ್ಚಿನ ನಿಗಾವಹಿಸಲಿದೆ ಎಂದರು.
ಪಿಎಸ್ಐ ನವೀನ್ ಅವರು ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ದಾಖಲಿಸಿ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ನಾಗರಿಕ ಹಕ್ಕು ಕಾಯ್ದೆಯಡಿ ಇರುವ ಅವಕಾಶಗಳನ್ನು ಬಳಸಿಕೊಳ್ಳುವಂತಾಗಬೇಕು ಎಂದು ಕೋರಿದರು.
ಡಿವೈಎಸ್ಪಿಗಳಾದ ಚಂದ್ರಶೇಖರ್ ಮತ್ತು ಸೂರಜ್ ಅವರು ತಮ್ಮ ಉಪವಿಭಾಗ ಮಟ್ಟದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಹಿರಿಯ ಪೊಲೀಸ್ ಅಧಿಕಾರಿ ಐ.ಪಿ. ಮೇದಪ್ಪ ಅವರು ಕಳೆದ ಬಾರಿ ನಡೆದ ಸಭೆಯ ಅನುಪಾಲನಾ ವರದಿಯನ್ನು ಮಂಡಿಸಿದರು. ದಲಿತ ಸಂಘರ್ಷ ಸಮಿತಿಯ ಎಚ್.ಎಲ್. ದಿವಾಕರ ಅವರು ಮಾತನಾಡಿದರು.







