
ಗೋಣಿಕೊಪ್ಪ ಆ.29 NEWS DESK : ಶಿಸ್ತುಬದ್ಧ ಶಿಕ್ಷಣ ನೀಡಲು ಸಾಧ್ಯವಾದರೆ ಮಾತ್ರ ಸಮಾಜದ ಯಶಸ್ಸು ಹಾಗೂ ದೇಶದ ಪ್ರಗತಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರವು ಮಹತ್ವದ ಪಾತ್ರವನ್ನು ನಿರ್ವಹಿಸುತ್ತದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅಭಿಪ್ರಾಯಪಟ್ಟರು. ವಿರಾಜಪೇಟೆ ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ವತಿಯಿಂದ ಗೋಣಿಕೊಪ್ಪ ಅನುದಾನಿತ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರೌಢಶಾಲಾ ಮುಖ್ಯ ಶಿಕ್ಷಕರ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನ, ಶಾಸಕಾಂಗ ಹಾಗೂ ಕಾರ್ಯಾಂಗದ ಪ್ರಮುಖ ಜವಾಬ್ದಾರಿಗಳಲ್ಲಿ ಶಿಕ್ಷಣ ನೀಡುವುದೂ ಒಂದಾಗಿದೆ. ಆದರೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ನಾವು ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಿಲ್ಲ. ಇದರ ಪರಿಣಾಮವಾಗಿ ಖಾಸಗಿ ಶಾಲೆಗಳು ಗುಣಮಟ್ಟದ ಶಿಕ್ಷಣದತ್ತ ಹೆಚ್ಚಿನ ಗಮನ ಹರಿಸಿದವು. ಆದರೆ ಕಾಲಕ್ರಮೇಣ ಶಿಕ್ಷಣ ಕ್ಷೇತ್ರವು ವ್ಯಾಪಾರೀಕರಣದತ್ತ ಸಾಗುತ್ತಿರುವುದು ವಿಷಾದನೀಯ ಎಂದು ಹೇಳಿದರು. ದೆಹಲಿಯಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಕೈಗೊಂಡಿರುವ ಕ್ರಮಗಳ ಮಾದರಿಯಲ್ಲಿಯೇ ಕರ್ನಾಟಕದಲ್ಲೂ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಬೇಕಾಗಿದೆ. ಇದಕ್ಕಾಗಿ ರಾಜಕೀಯ ಇಚ್ಛಾಶಕ್ತಿ ಮತ್ತಷ್ಟು ಬಲಗೊಳ್ಳಬೇಕಿದ್ದು, ಜನರು, ಪೋಷಕರು ಹಾಗೂ ಮಕ್ಕಳ ಮನಸ್ಥಿತಿಯಲ್ಲೂ ಬದಲಾವಣೆ ಅಗತ್ಯವಿದೆ ಎಂದರು. ಜಗತ್ತು ಬದಲಾಗಿದ್ದು, ಶಿಕ್ಷಣ ವ್ಯವಸ್ಥೆಯೂ ಬದಲಾಗಿದೆ. ಇದರೊಂದಿಗೆ ಅವಕಾಶಗಳ ಸಂಖ್ಯೆಯೂ ಹೆಚ್ಚಾಗಿದೆ. ಮಕ್ಕಳು ಶಿಸ್ತಿನಿಂದ ಬದುಕಿನ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ. ಗ್ರಾಮೀಣ ಪ್ರದೇಶದ ಮಕ್ಕಳು ಇಂದು ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಸಾಧನೆ ಮಾಡುತ್ತಿದ್ದಾರೆ. ಬಡತನದಿಂದ ಹೊರಬಂದು ಗುಣಮಟ್ಟದ ಹಾಗೂ ಮೌಲ್ಯಾಧಾರಿತ ಬದುಕು ನಡೆಸಬೇಕು ಎಂಬ ಹಂಬಲ ಮಕ್ಕಳಲ್ಲಿ ಮೂಡುತ್ತಿದೆ ಎಂದು ಹೇಳಿದರು. ಗ್ರಾಮೀಣ ಪ್ರದೇಶದ ಮಕ್ಕಳು ದೂರದೃಷ್ಟಿ ಹಾಗೂ ಛಲದಿಂದ ದೇಶದಲ್ಲಿರುವ ಅವಕಾಶಗಳನ್ನು ಗುರುತಿಸಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವತ್ತ ಗಮನ ಹರಿಸಬೇಕು. ಶಿಕ್ಷಣವನ್ನೇ ಶಕ್ತಿಯಾಗಿಸಿಕೊಂಡು ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಬದುಕಿನಲ್ಲಿ ಶಿಕ್ಷಕರು ಹಾಗೂ ಪೋಷಕರನ್ನು ದೂರುವ ಬದಲು ಸ್ವಯಂಶಕ್ತಿಯಿಂದ ಜೀವನವನ್ನು ರೂಪಿಸಿಕೊಳ್ಳಬೇಕು. ಅದನ್ನೇ ಗುರಿಯಾಗಿಸಿಕೊಳ್ಳಬೇಕು. ಸಾಧಿಸಲು ಸಾಕಷ್ಟು ಅವಕಾಶಗಳಿದ್ದು, ಶ್ರಮವಹಿಸಿ ಜೀವನದಲ್ಲಿ ಗೆಲುವು ಸಾಧಿಸಬೇಕು. ಸಾಧನೆಯಿಂದ ದೊರೆಯುವ ಸಂತೋಷ ಅಮೂಲ್ಯ ಹಾಗೂ ಸ್ವತಂತ್ರವಾದದ್ದು. ಅದನ್ನು ಗಳಿಸಿಕೊಳ್ಳಲು ಪ್ರತಿಯೊಬ್ಬ ವಿದ್ಯಾರ್ಥಿಯೂ ಪಣತೊಡಬೇಕು ಎಂದು ಸಲಹೆ ನೀಡಿದರು. :: ಶೇ.100 ಫಲಿತಾಂಶ ಪಡೆದ 28 ಶಾಲೆಗಳಿಗೆ ಅಭಿನಂದನೆ :: ಈ ಸಂದರ್ಭದಲ್ಲಿ ಹತ್ತನೇ ತರಗತಿಯಲ್ಲಿ ಶೇ.100 ಫಲಿತಾಂಶ ದಾಖಲಿಸಿದ ತಾಲೂಕಿನ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಸೇರಿದಂತೆ ಒಟ್ಟು 28 ಶಾಲೆಗಳನ್ನು ಅಭಿನಂದಿಸಲಾಯಿತು. ಅಲ್ಲದೆ, ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನೂ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಪಿ. ಉತ್ತಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ತಾಲೂಕು ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ರಾಜೇಶ್, ಗೋಣಿಕೊಪ್ಪ ಅನುದಾನಿತ ಪ್ರೌಢಶಾಲೆಯ ಅಧ್ಯಕ್ಷ ಚಿಣ್ಣಪ್ಪ, ಮುಖ್ಯ ಶಿಕ್ಷಕ ಚೈತನ್ಯ ಡಿ.ಎಸ್., ಅನುದಾನಿತ ಪ್ರೌಢಶಾಲಾ ತಾಲೂಕು ಅಧ್ಯಕ್ಷ ಗಿಡ್ಡಯ್ಯ, ಸರ್ವದೇವತಾ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಪ್ರದೀಪ್ ಕುಮಾರ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಕಾರ್ಯದರ್ಶಿ ಲೋಕೇಶ್ ಎಚ್.ಡಿ., ಚೆಂಗಪ್ಪ, ಮೋಹನ್ ಕುಮಾರಿ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಜಗದೀಶ್ ಜೋಡುಬೀಟಿ









