ಮಡಿಕೇರಿ, NEWS DESK ಸೆ.9: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೊಡ್ಲಿಪೇಟೆಯ ಬೆಸೂರು ಗ್ರಾಮದ ಶಿಕ್ಷಕಿ ಶ್ರೀಮತಿ ಸ್ನೇಹ ಬಸಮ್ಮ ಅವರು ತಮ್ಮ ತಂದೆ-ತಾಯಿಯವರ ಜ್ಞಾಪಕಾರ್ಥ ಸ್ಥಾಪಿಸಿರುವ ದಿ. ಗಂಗಮ್ಮ ರಾಚಪ್ಪ ದತ್ತಿನಿಧಿ ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲೆಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ.
ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಬೆಳೆಸುವುದು ಹಾಗೂ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಪರಿಚಯ ಮಾಡಿಕೊಡುವ ಉದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಜಿಲ್ಲೆಯ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಕೊಡಗು ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಪ್ರತಿ ಕಾಲೇಜಿನಿಂದ ಗರಿಷ್ಠ ಇಬ್ಬರು ವಿದ್ಯಾರ್ಥಿಗಳು ಮಾತ್ರ ಭಾಗವಹಿಸಬಹುದಾಗಿದೆ. “ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಕಾವ್ಯಕೃಷಿ ಮಾಡಿದ ಮೇರು ವ್ಯಕ್ತಿತ್ವಗಳು” ಎಂಬ ವಿಷಯದ ಕುರಿತು ಎರಡು ಪುಟ ಮೀರದಂತೆ ಪ್ರಬಂಧವನ್ನು ಸ್ವಹಸ್ತಾಕ್ಷರದಲ್ಲಿ ಬರೆದು, ಸೆ.15, 2026ರೊಳಗೆ ಕೆಳಗಿನ ವಿಳಾಸಕ್ಕೆ ಅಂಚೆ, ವಾಟ್ಸಾಪ್ ಅಥವಾ ಇ-ಮೇಲ್ ಮೂಲಕ ಕಳುಹಿಸಬೇಕು.
ಪ್ರಬಂಧ ಕಳುಹಿಸಬೇಕಾದ ವಿಳಾಸ:
ಅಧ್ಯಕ್ಷರು,
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,
ಅಂಬೇಡ್ಕರ್ ಭವನದ ಬಳಿ, ಸುದರ್ಶನ್ ವೃತ್ತ,
ಮಡಿಕೇರಿ – 571201.
ಮೊಬೈಲ್: 9113892396
ಇ-ಮೇಲ್: kamathkeshava33@gmail.com
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಪ್ರಶಂಸಾ ಪತ್ರ ನೀಡಲಾಗುವುದು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶ್ರೀಮತಿ ರೇವತಿ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







