ಮಡಿಕೇರಿ, NEWS DESK ಸೆ.16: ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಅಭಿವೃದ್ಧಿ ಹಾಗೂ ಜನಪರ ಕಾರ್ಯಗಳನ್ನು ಸ್ಮರಿಸುವ ಉದ್ದೇಶದಿಂದ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ವನ್ನು ಸೆ.17ರಿಂದ ಅ.17ರವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ತಿಂಗಳ ಅವಧಿಯಲ್ಲಿ ವಿವಿಧ ಸಾಮಾಜಿಕ ಹಾಗೂ ಜನಪರ ಸೇವಾ ಚಟುವಟಿಕೆಗಳನ್ನು ಆಯೋಜಿಸಲಾಗುವುದು. ಪಕ್ಷದ ಕಾರ್ಯಕರ್ತರು, ವಿವಿಧ ಮೋರ್ಚಾಗಳು ಹಾಗೂ ಘಟಕಗಳ ಸಹಯೋಗದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸೇವಾ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು.
ನರೇಂದ್ರ ಮೋದಿ ಅವರು ಗುಜರಾತ್ನ ಮುಖ್ಯಮಂತ್ರಿಯಾಗಿ ಹಾಗೂ ದೇಶದ ಪ್ರಧಾನಮಂತ್ರಿಯಾಗಿ 25 ವರ್ಷಗಳ ಕಾಲ ಭ್ರಷ್ಟಾಚಾರ ಮುಕ್ತವಾದ ಮಾದರಿ ಆಡಳಿತವನ್ನು ನೀಡಿದ್ದಾರೆ. ವಿಶ್ವ ಮಟ್ಟದಲ್ಲಿ ಭಾರತದ ಗೌರವವನ್ನು ಎತ್ತಿ ಹಿಡಿದ ಮೋದಿ ಅವರ ಜನಪರ ಕಾಳಜಿಯ ಕಾರ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಅಭಿಯಾನವನ್ನು ನಡೆಸಲಾಗುತ್ತಿದೆ. ಆ ಮೂಲಕ ‘2047ರ ವಿಕಸಿತ ಭಾರತ’ ಸಂಕಲ್ಪಕ್ಕೆ ಶಕ್ತಿ ತುಂಬಲಾಗುವುದು.
ಅಭಿಯಾನದ ಮೊದಲ ದಿನವಾದ ಸೆ.17ರಂದು ‘ಆಶೀರ್ವಾದ ದೀಪ’ ಕಾರ್ಯಕ್ರಮದಡಿ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಮಾತ್ರವಲ್ಲದೆ ಜಿಲ್ಲೆಯ ಪ್ರತಿಯೊಬ್ಬ ನಿವಾಸಿಯ ಮನೆಯಲ್ಲೂ ಸಂಜೆ ವೇಳೆ ನರೇಂದ್ರ ಮೋದಿ ಅವರ ಆರೋಗ್ಯ ಮತ್ತು ಆಯುಷ್ಯ ವೃದ್ಧಿಗಾಗಿ ದೀಪ ಬೆಳಗಲು ಕರೆ ನೀಡಲಾಗುವುದು ಎಂದು ತಿಳಿಸಿದರು.
ಅಭಿಯಾನದ ಅಂಗವಾಗಿ ಪ್ರತಿದಿನ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳು ನಡೆಯಲಿವೆ. ಅಗತ್ಯವಿರುವವರಿಗೆ ನೆರವಾಗುವ ನಿಟ್ಟಿನಲ್ಲಿ ರಕ್ತದಾನ ಶಿಬಿರ ನಡೆಸಲಾಗುವುದು. ಅನಾಥಾಶ್ರಮ ಹಾಗೂ ವೃದ್ಧಾಶ್ರಮಗಳಿಗೆ ಭೇಟಿ ನೀಡಿ ಅಗತ್ಯ ಸಹಾಯ ಒದಗಿಸಲಾಗುವುದು. ಪರಿಸರ ಸಂರಕ್ಷಣೆಗಾಗಿ ವಿವಿಧೆಡೆ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಸಾರ್ವಜನಿಕ ಸ್ಥಳಗಳು, ರಸ್ತೆ, ಶಾಲೆಗಳು ಹಾಗೂ ಪ್ರಮುಖ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಗುವುದು.
ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಆರೋಗ್ಯ ಜಾಗೃತಿ ಮೂಡಿಸಲಾಗುವುದು. ‘ಒಂದು ಗ್ರಾಮ ದತ್ತು’ ಸೇವಾ ಕಾರ್ಯಕ್ರಮದಡಿ ಗ್ರಾಮಗಳ ಅಗತ್ಯಗಳನ್ನು ಗುರುತಿಸಿ ವಿವಿಧ ಸೇವಾ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು. ಯೋಗ ಮತ್ತು ಧ್ಯಾನ, ಆರೋಗ್ಯಕರ ಜೀವನಶೈಲಿ ಹಾಗೂ ಮಾನಸಿಕ ಕ್ಷೇಮದ ಕುರಿತು ಜಾಗೃತಿ ಮೂಡಿಸಲಾಗುವುದು. ಪ್ಲಾಸ್ಟಿಕ್ ಮುಕ್ತ ಜಾಗೃತಿಯಡಿ ಏಕಬಳಕೆ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಕುರಿತು ಜನರಿಗೆ ಮನವರಿಕೆ ಮಾಡಿಕೊಡಲಾಗುವುದು. ಮಹಿಳೆಯರ ಆರೋಗ್ಯ, ವೈಯಕ್ತಿಕ ಸ್ವಚ್ಛತೆ ಹಾಗೂ ಆರೋಗ್ಯಕರ ಜೀವನಶೈಲಿ ಕುರಿತು ಜಾಗೃತಿ ಮೂಡಿಸಲಾಗುವುದು.
ಅಗತ್ಯವಿರುವ ವಿದ್ಯಾರ್ಥಿಗಳಿಗೆ ಪುಸ್ತಕ, ಕಲಿಕಾ ಸಾಮಗ್ರಿ ಹಾಗೂ ಶೈಕ್ಷಣಿಕ ನೆರವು ಒದಗಿಸಲಾಗುವುದು. ಯುವಜನರಿಗೆ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳ ಕುರಿತು ಮಾರ್ಗದರ್ಶನ ನೀಡಲಾಗುವುದು. ಹಿರಿಯರಿಗೆ ಡಿಜಿಟಲ್ ಸಾಕ್ಷರತೆ ಕಾರ್ಯಕ್ರಮದಡಿ ಮೊಬೈಲ್, ಡಿಜಿಟಲ್ ಸೇವೆಗಳು ಹಾಗೂ ಆನ್ಲೈನ್ ಸೌಲಭ್ಯಗಳ ಸುರಕ್ಷಿತ ಬಳಕೆಯ ಕುರಿತು ತರಬೇತಿ ನೀಡಲಾಗುವುದು.
‘ಮಾದಕ ವಸ್ತು ಮುಕ್ತ ಭಾರತ’ ಜಾಗೃತಿ ಅಭಿಯಾನದಡಿ ಯುವಜನರಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಗುವುದು. ಪೌಷ್ಟಿಕತೆ ಮತ್ತು ರಕ್ತಹೀನತೆ ಜಾಗೃತಿ ಕಾರ್ಯಕ್ರಮದಡಿ ಪೌಷ್ಟಿಕ ಆಹಾರ, ಆರೋಗ್ಯಕರ ಜೀವನಶೈಲಿ ಹಾಗೂ ರಕ್ತಹೀನತೆ ತಡೆ ಕುರಿತು ಅರಿವು ನೀಡಲಾಗುವುದು.
ಸಂಚಾರ ನಿಯಮ ಪಾಲನೆ, ಹೆಲ್ಮೆಟ್ ಹಾಗೂ ಸೀಟ್ಬೆಲ್ಟ್ ಬಳಕೆ ಸೇರಿದಂತೆ ಸುರಕ್ಷಿತ ವಾಹನ ಚಾಲನೆ ಹಾಗೂ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸಲಾಗುವುದು. ನೀರು ಸಂರಕ್ಷಣೆ ಮತ್ತು ಜಲಮೂಲ ಸ್ವಚ್ಛತೆ, ಕೆರೆ, ಬಾವಿ, ಹಳ್ಳ-ಹೊಳೆ ಸೇರಿದಂತೆ ಸ್ಥಳೀಯ ಜಲಮೂಲಗಳ ಸಂರಕ್ಷಣೆ ಮತ್ತು ಸ್ವಚ್ಛತಾ ಕಾರ್ಯಗಳಿಗೆ ಒತ್ತು ನೀಡಲಾಗುವುದು.
ಹೀಗೆ ಸುಮಾರು 25 ಕಾರ್ಯಕ್ರಮಗಳನ್ನು ಜಿಲ್ಲಾ ವ್ಯಾಪಿ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ ರವಿ ಕಾಳಪ್ಪ, ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಕರೆ ನೀಡಿದರು.
ವಂದೇ ಮಾತರಂ ಪ್ರತಿಭಟನೆ
ಸ್ವಾತಂತ್ರ್ಯ ಹೋರಾಟಕ್ಕೆ ಪ್ರೇರಣೆ ನೀಡಿದ ‘ವಂದೇ ಮಾತರಂ’ ಗೀತೆಯನ್ನು ರಾಷ್ಟ್ರಗೀತೆಗೆ ಸಮಾನವಾಗಿ ಹಾಡುವುದನ್ನು ಕಡ್ಡಾಯಗೊಳಿಸಿದ್ದರೂ, ರಾಜ್ಯ ಕಾಂಗ್ರೆಸ್ ಸರ್ಕಾರ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ಆದೇಶ ಹೊರಡಿಸಿರುವುದನ್ನು ವಿರೋಧಿಸಿ ಜಿಲ್ಲೆಯ ಐದು ತಾಲ್ಲೂಕು ಕೇಂದ್ರಗಳಲ್ಲಿ ಜಾಥಾ ನಡೆಸಲಾಗುವುದು. ತಹಶೀಲ್ದಾರರಿಗೆ ಮನವಿ ಸಲ್ಲಿಸುವ ಮೂಲಕ ಕಾಂಗ್ರೆಸ್ ಸರ್ಕಾರದ ನಿಲುವನ್ನು ಖಂಡಿಸಲಾಗುವುದು. ಜಾಥಾದ ದಿನವನ್ನು ಮುಂದೆ ನಿಗದಿಪಡಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರಕ್ಕೆ ಒಕ್ಕೂಟ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲ. ಇದೇ ಕಾರಣಕ್ಕೆ ರಾಷ್ಟ್ರಪತಿಗಳ ಅಂಕಿತವಾಗಿದ್ದರೂ ‘ವಂದೇ ಮಾತರಂ’ ಗೀತೆಗೆ ಕತ್ತರಿ ಹಾಕಲಾಗಿದೆ ಎಂದು ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಹಾಗೂ ಮಹಿಳಾ ಬಿಜೆಪಿ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಉಪಸ್ಥಿತರಿದ್ದರು.







