ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

28/10/2020

ಮಡಿಕೇರಿ ಅ.28 : 2020-21 ನೇ ಸಾಲಿನಲ್ಲಿ ಅಲೆಮಾರಿ/ ಅರೆಅಲೆಮಾರಿ ಜನಾಂಗಕ್ಕೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಭೂಖರೀಧಿ ಯೋಜನೆ ಮತ್ತು ಬ್ಯಾಂಕ್‍ಗಳ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನದ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಚಿಸುವ ಜನಾಂಗದವರು ಉಚಿತವಾಗಿ ಅರ್ಜಿ ನಮೂನೆಯನ್ನು ಜಿಲ್ಲಾ ಕಚೇರಿಗಳಲ್ಲಿ ಅಥವಾ ನಿಗಮದ ವೆಬ್‍ಸೈಟ್‍ನಲ್ಲಿ ಪಡೆದು ಅರ್ಜಿಯೊಂದಿಗೆ ಜಾತಿ, ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಫೋಟೋವನ್ನು ಮತ್ತು ವಿದ್ಯಾರ್ಥಿಗಳ ವ್ಯಾಸಂಗದ ದಾಖಲಾತಿಗಳು, ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಹೊಂದಿರುವ ಜಮೀನಿನ ದಾಖಲಾತಿಗಳು, ಸಣ್ಣ ಮತ್ತು ಅತಿ ಸಣ್ಣ ರೈತರ ಪ್ರಮಾಣ ಪತ್ರಗಳನ್ನು ಮತ್ತು ಭೂಖರೀದಿಗೆ ಸಂಬಂಧಿಸಿದಂತೆ ಜಮೀನುದಾರರ ಕಂದಾಯ ದಾಖಲೆಗಳು ನಿಗಮದ ವೆಬ್‍ಸೈಟ್ WWW.dbcdc.karnataka.gov.in  ಮೂಲಕ ಆನ್‍ಲೈನ್‍ನಲ್ಲಿ ಅಥವಾ ಆನ್ ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಡನೆ ಜಿಲ್ಲೆಯ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ನವೆಂಬರ್ 2 ರೊಳಗೆ ಸಲ್ಲಿಸುವುದು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಅಥವಾ 08272-221656 ದೂರವಾಣಿ ಮುಖಾಂತರ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.