ಮಡಿಕೇರಿ ಜ.27 : ಮಡಿಕೇರಿ ನಗರದ ಕಾವೇರಿ ಕಲಾಕ್ಷೇತ್ರದ ಕಟ್ಟಡವನ್ನು ತೆರೆವುಗೊಳಿಸಿ, ಹೊಸ ಕಟ್ಟಡ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ ಎಂದು ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚುರAಜನ್ ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು 10 ಕೋಟಿ ರೂ. ವೆಚ್ಚದಲ್ಲಿ ಒಂದು ಸಾವಿರ ಜನರು ಕುಳಿತುಕೊಳ್ಳುವ ಸುಸಜ್ಜಿತ ನೂತನ ಕಾವೇರಿ ಕಲಾಕ್ಷೇತ್ರ ನಿರ್ಮಾಣಗೊಳ್ಳಲಿದೆ. ಮುಖ್ಯಮಂತ್ರಿಗಳು ಕೊಡಗು ಜಿಲ್ಲೆಗೆ ಆಗಮಿಸುವ ಸಂದರ್ಭ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಅವರು ಹೇಳಿದರು.
ಮಡಿಕೇರಿ ನಗರಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ 20 ಕೋಟಿ ರೂ. ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಇದೇ ಸಂದರ್ಭ ತಿಳಿಸಿದರು.
ಸರ್ಕಾರದಿಂದ ಸ್ತ್ರೀಶಕ್ತಿ ಸಂಘಗಳಿಗೆ ವಾರ್ಡ್ ಒಂದಕ್ಕೆ 5 ಲಕ್ಷ ರೂ. ಸಹಾಯಧನ ಕಲ್ಪಿಸಲಾಗುತ್ತದೆ. ಹಾಗೆಯೇ ಯುವಕ ಸಂಘಗಳಿಗೂ 5 ಲಕ್ಷ ರೂ. ಸಹಾಯಧನ, ಹಾಗೆಯೇ ಕೇಂದ್ರ ಸರ್ಕಾರದಿಂದಲೂ ಹಲವು ಯೋಜನೆಗಳು ಲಭ್ಯವಿದ್ದು, ಇವುಗಳನ್ನು ಬಳಸಿಕೊಳ್ಳಬೇಕು ಎಂದರು.








